ಜಾರ್ಜ್ ರಾಜೀನಾಮೆಗಾಗಿ ಬಿಜೆಪಿ ರಾಜ್ಯಾದ್ಯಂತ ಧರಣಿ
ಬೆಂಗಳೂರು, ಸೆಪ್ಟೆಂಬರ್ 11: ಮಾಜಿ ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣವು ಸಿಬಿಐ ಹೆಗಲೇರಿರುವ ಹಿನ್ನೆಲೆಯಲ್ಲಿ ಮತ್ತೆ ಇಕ್ಕಟ್ಟಿಗೆ ಸಿಲುಕಿರುವ ಹಾಲಿ ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಅವರ ರಾಜೀನಾಮೆಗೆ ಆಗ್ರಹಿಸಿ, ಸೆ. 16ರಂದು ರಾಜ್ಯಾದ್ಯಂತ ಬಿಜೆಪಿ ಧರಣಿ ಸತ್ಯಾಗ್ರಹ ನಡೆಸಲಿದೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಈ ವಿಚಾರ ತಿಳಿಸಿದ್ದಾರೆ.
ಈ ಕುರಿತಂತೆ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಗಣಪತಿ ಅವರು ಆತ್ಮಹತ್ಯೆಗೂ ಮುನ್ನ ನೀಡಿರುವ ವಿಡಿಯೋ ಸಂದರ್ಶನವೊಂದರಲ್ಲಿ ಸಚಿವ ಕೆ.ಜೆ. ಜಾರ್ಜ್, ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದ ಪ್ರಣವ್ ಮೊಹಂತಿ ಹಾಗೂ ಎ.ಎನ್. ಪ್ರಸಾದ್ ಅವರೇ ಕಾರಣ ಎಂದು ಹೇಳಿದ್ದರು.
ಆದರೂ, ಈ ಪ್ರಕರಣದ ತನಿಖೆ ನಡೆಸಿರುವ ಸಿಐಡಿ ಆ ಎಲ್ಲವನ್ನೂ ಗಂಭೀರವಾಗಿ ಪರಿಗಣಿಸಲೇ ಇಲ್ಲ. ಮೇಲಾಗಿ, ತನಿಖೆ ವೇಳೆ ಹಲವಾರು ಸಾಕ್ಷ್ಯಾಧಾರಗಳನ್ನು ನಾಶ ಮಾಡಿರುವ ಬಗ್ಗೆ ವಿಧಿವಿಜ್ಞಾನ ಪ್ರಯೋಗಾಲದ ವರದಿಗಳು ಹೇಳಿವೆ. ಈ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಹಾಗಾಗಿ, ಅಧಿಕಾರದಲ್ಲಿರುವ ಜಾರ್ಜ್ ತನಿಖೆಗೆ ಸಹಕರಿಸುವ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕಿದೆ. ಇದಕ್ಕೆ ಅವರು ಒಪ್ಪದ ಕಾರಣ ಅವರ ರಾಜಿನಾಮೆಗೆ ಆಗ್ರಹಿಸಲಾಗುವುದು.
ಸೆ. 16ರಂದು ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಈ ಬಗ್ಗೆ ಧರಣಿ ಸತ್ಯಾಗ್ರಹಗಳನ್ನು ನಡೆಸಲಾಗುತ್ತದೆ ಎಂದು ಯಡಿಯೂರಪ್ಪ ಅವರು ತಿಳಿಸಿದರು.