ಕಾವೇರಿ ತೀರ್ಪು ಖಂಡಿಸಿ ರಕ್ಷಣಾ ವೇದಿಕೆಯಿಂದ ಪಂಜಿನ ಮೆರವಣಿಗೆ
ಬೆಂಗಳೂರು, ಸೆಪ್ಟೆಂಬರ್ 06 : ತಮಿಳುನಾಡಿಗೆ ಪ್ರತಿದಿನ 15 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂಬ ಸುಪ್ರೀಂಕೋರ್ಟ್ ತೀರ್ಪು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು. ಯಾವುದೇ ಕಾರಣಕ್ಕೂ ನೀರು ಹರಿಸಬಾರದು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಅವರ ನೇತೃತ್ವದಲ್ಲಿ ಸೋಮವಾರ ರಾತ್ರಿ ಪಂಜಿನ ಮೆರವಣಿಗೆ ನಡೆಯಿತು. ಬೆಂಗಳೂರಿನ ಟೌನ್ ಹಾಲ್ನಿಂದ ಮೈಸೂರು ಬ್ಯಾಂಕ್ ವೃತ್ತದ ತನಕ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.[ಕಾವೇರಿ ವಿವಾದ : ಸೆಪ್ಟೆಂಬರ್ 9ರಂದು ಕರ್ನಾಟಕ ಬಂದ್]
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಟಿ.ಎ.ನಾರಾಯಣ ಗೌಡ ಅವರು, 'ಕರ್ನಾಟಕ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು. ಒಂದು ವೇಳೆ ನೀರು ಹರಿಸಿದರೆ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಲಿದೆ' ಎಂದು ಆತಂಕ ವ್ಯಕ್ತಪಡಿಸಿದರು.[ತಮಿಳುನಾಡಿಗೆ ನೀರು ಹರಿಸಿ ಎಂದ ಸುಪ್ರೀಂ]
ಸುಪ್ರೀಂಕೋರ್ಟ್ ತೀರ್ಪು ಏನು?
ಕರ್ನಾಟಕ 10 ದಿನಗಳ ಕಾಲ 15 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡಬೇಕು. ಕಾವೇರಿ ಮೇಲುಸ್ತುವಾರಿ ಸಮಿತಿ ರಾಜ್ಯದಲ್ಲಿರುವ ನೀರಿನ ಪ್ರಮಾಣದ ಬಗ್ಗೆ ಮಾಹಿತಿ ಸಂಗ್ರಹಿಸಬೇಕು.
ಹಲವಾರು ಕಡೆ ಪ್ರತಿಭಟನೆ
ಸೋಮವಾರ ಕೋರ್ಟ್ ಆದೇಶ ಹೊರಬಿದ್ದ ಬಳಿಕ ಮಂಡ್ಯ, ಶ್ರೀರಂಗಪಟ್ಟಣ, ಬೆಳಗೋಳ, ಕೆಆರ್ಎಸ್, ಬೆಂಗಳೂರು ಮುಂತಾದ ಕಡೆ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದವು. ಮಂಗಳವಾರವೂ ಪ್ರತಿಭಟನೆ ಮುಂದುವರೆದಿದೆ.
ಇಂದು ಮಂಡ್ಯ ಬಂದ್
ಸುಪ್ರೀಂಕೋರ್ಟ್ ತೀರ್ಪು ಪ್ರಶ್ನಿಸಿ ಮಂಗಳವಾರ ಮಂಡ್ಯ ಬಂದ್ ನಡೆಸಲಾಗುತ್ತಿದೆ. ಸೆ.9ರಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ.
ನೀರು ಬಿಟ್ಟರೆ ಉಗ್ರ ಹೋರಾಟ
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಟಿ.ಎ.ನಾರಾಯಣ ಗೌಡ ಅವರು, 'ಕರ್ನಾಟಕ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು. ಒಂದು ವೇಳೆ ನೀರು ಹರಿಸಿದರೆ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಲಿದೆ. ನೀರು ಹರಿಸಿದರೆ ಉಗ್ರ ಹೋರಾಟ ನಡೆಸಲಾಗುತ್ತದೆ' ಎಂದು ನಾರಾಯಣ ಗೌಡ ಎಚ್ಚರಿಕೆ ನೀಡಿದರು.