ಚಿತ್ರ ಸಂತೆ: ವಾಹನ ನಿರ್ಬಂಧ, ಮಾರ್ಗ ಬದಲು
ಬೆಂಗಳೂರು, ಜನವರಿ 06: ಚಿತ್ರಕಲಾ ಪರಿಷತ್ತಿನಲ್ಲಿ ಜನವರಿ 7 ರಂದು 15 ನೇ ಚಿತ್ರಸಂತೆ ಆಯೋಜನೆ ಹಿನ್ನೆಲೆಯಲ್ಲಿ ಕುಮಾರಕೃಪಾ ರಸ್ತೆಯಲ್ಲಿ ಅಂದು ಬೆಳಗ್ಗೆ 6 ರಿಂದ ರಾತ್ರಿ 9 ಗಂಟೆಯವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ದೇಶ-ವಿದೇಶಗಳಿಂದ ಕಲಾವಿದರು ಮತ್ತು ಸಾರ್ವಜನಿಕರು ಬರುವ ಹಿನ್ನೆಲೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ತಾತ್ಕಾಲಕವಾಗಿ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಮಾರ್ಗ ಬದಲು: ಆನಂದ ರಾವ್ ವೃತ್ತದ ಕಡೆಯಿಂದ ಬರುವ ವಾಹನಗಳು ರೇಸ್ ವ್ಯೂ ಜಂಕ್ಷನ್ ಮೂಲಕ ಕುಮಾರಕೃಪಾ ರಸ್ತೆ ಪ್ರವೇಶಿಸುವುದನ್ನು ನಿರ್ಬಂಧಿಸಿ, ಈ ರಸ್ತೆಯಲ್ಲಿ ಬರುವ ವಾಹನಗಳು ಟ್ರಿಲೈಟ್ ಜಂಕ್ಷನ್, ಬಸವೇಶ್ವರ ವೃತ್ತ, ಹಳೇ ಹೈಗ್ರೌಂಡ್ಸ್ ಜಂಕ್ಷನ್, ವಿಂಡ್ಸರ್ ಮ್ಯಾನರ್ ವೃತ್ತದ ಮೂಲಕ ಮುಂದೆ ಸಾಗಬಹುದು.
ಟಿ, ಚೌಡಯ್ಯ ರಸ್ತೆಯಿಂದ ಬಂದು ವಿಂಡ್ಸರ್ ಮ್ಯಾನರ್ ವೃತ್ತದ ಮೂಲಕ ಕುಮಾರಕೃಪಾ ರಸ್ತೆಯಲ್ಲಿ ಸಂಚರಿಸುವ ವಾಹನಗಳು, ಟಿ. ಚೌಡಯ್ಯ ರಸ್ತೆ, ಹಳೇ ಹೈಗ್ರೌಂಡ್ಸ್ ಜಂಕ್ಷನ್, ಎಲ್.ಆರ್.ಡಿಇ, ಬಸವೇಶ್ವರ ವೃತ್ತದ ಮೂಲಕ ರೇಸ್ ಕೋರ್ಸ್ ರಸ್ತೆ ಮಾರ್ಗವಾಗಿ ಸಂಚರಿಸಬಹುದು.
ಪಾರ್ಕಿಂಗ್ ವ್ಯವಸ್ಥೆ: ಚಿತ್ರ ಸಂತೆಗೆ ಬರುವವರು ರೈಲು ಹಳಿ ಸಮನಾಂತರ ರಸ್ತೆ, ರೇಸ್ ಕೋರ್ಸ್ ರಸ್ತೆ ಮತ್ತು ಕ್ರೆಸೆಂಟ್ ರಸ್ತೆ-ಗುರುರಾಜ ಕಲ್ಯಾಣ ಮಂಟಪದಿಂದ ಹೋಟೆಲ್ ಜನಾರ್ಧನ ವರೆಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.