ಕಾಂಗ್ರೆಸ್ ಮುಖಂಡ ಎಂ.ನಾಗರಾಜ್ ಬಿಜೆಪಿಗೆ ಸೇರ್ಪಡೆ
ಬೆಂಗಳೂರು, ನವೆಂಬರ್. 21 : ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾನುವಾರ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನ ಬಿಬಿಎಂಪಿ ಮಾಜಿ ವಿರೋಧ ಪಕ್ಷದ ನಾಯಕ ಎಂ. ನಾಗರಾಜ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಸಾವಿರಾರು ಕಾರ್ಯಕರ್ತರು ನಾಗರಾಜ್ ನೇತೃತ್ವದಲ್ಲಿ ಬಿಜೆಪಿಗೆ ಸೇರಿದರು. ಎಂ.ನಾಗರಾಜ್ ಅವರು ಕಾಂಗ್ರೆಸ್ ಸದಸ್ಯರಾಗಿ ನಂದಿನಿ ಬಡಾವಣೆಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಿಬಿಎಂಪಿಯಲ್ಲಿ ಪ್ರತಿಪಕ್ಷದ ನಾಯಕರಾಗಿದ್ದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಕಾಂಗ್ರೆಸ್ ಮುಖಂಡ ಎಂ.ನಾಗರಾಜ್ ಮತ್ತು ಅವರ ಬೆಂಬಲಿಗರನ್ನು ಬಿಜೆಪಿಯ ಬಾವು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ನಂತರ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ದುರಾಡಳಿತ ಹಾಗೂ ತಳ ಮಟ್ಟದ ಕಾರ್ಯಕರ್ತರ ಕಡೆಗಣನೆಯಿಂದ ಬೇಸತ್ತು ಪಕ್ಷದ ಹಲವು ಮುಖಂಡರು ಬಿಜೆಪಿಗೆ ವಲಸೆ ಬರಲಿದ್ದಾರೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಜನರ ಅಶೋತ್ತರಗಳನ್ನು ಈಡೇರಿಸಲು ವಿಫಲವಾಗಿದೆ. ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ. ಸರ್ಕಾರ ಪರಿಹಾರ ಕಾರ್ಯ ಕೈಗೊಳ್ಳದೇ ನಿದ್ರೆಗೆ ಜಾರಿದೆ' ಎಂದು ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ ಅವರು, 'ಸರ್ಕಾರ ಓಲೈಕೆ ರಾಜಕಾರಣಕ್ಕೆ ಕಟ್ಟು ಬಿದ್ದಿದೆ. ಟಿಪ್ಪು ಜಯಂತಿ ಆಚರಣೆ ಮಾಡುತ್ತಿದೆ. ವಿಜಯ್ ಮಲ್ಯ ಸೇರಿದಂತೆ ಟಿಪ್ಪು ಹಿಂದೆ ಹೋದವರು ಮೂಲೆಗುಂಪಾದರು. ಟಿಪ್ಪುವಿನಿಂದಲೇ ಕಾಂಗ್ರೆಸ್ ಸರ್ಕಾರದ ಅವನತಿಯಾಗಲಿದೆ' ಎಂದರು.