ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ: ಪರಮೇಶ್ವರ ಸ್ಪಷ್ಟನೆ
ಬೆಂಗಳೂರು, ಸೆಪ್ಟೆಂಬರ್ 7: ಈಗಾಗಲೇ 105 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದಿದೆ, ಸ್ಥಳೀಯ ಸಂಸ್ಥೆಯಲ್ಲೂ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮುಂದುವರೆಸಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ.
ಸದಾಶಿವನಗರ ಬಿಡಿಎ ಕಚೇರಿಯಲ್ಲಿ ಎಲ್ಲ ಸಚಿವರು ಹಾಗೂ ಕಾಂಗ್ರೆಸ್ ಮುಖಂಡರು ಭೇಟಿ ಮಾಡಿ ಚರ್ಚಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು , ಸ್ಥಳೀಯ ಚುನಾವಣೆಯಲ್ಲಿ ಬಹುತೇಕ ಕಡೆ ಕಾಂಗ್ರೆಸ್ ಗೆಲುವು ಪಡೆದಿದೆ.
ಕಾಂಗ್ರೆಸ್ ಸಚಿವರಿಗೆ ಪರಮೇಶ್ವರ್ ಉಪಹಾರ ಕೂಟ: ಏನಿದರ ಮರ್ಮ?
ಕೆಲವೆಡೆ ಅತಂತ್ರ ಸ್ಥಿತಿ ಇದೆ. ಹೀಗಾಗಿ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಅಲ್ಲಿಯೂ ನಾವೇ ಅಧಿಕಾರ ರಚಿಸಲು ನಿರ್ಧರಿಸಿದ್ದೇವೆ ಎಂದರು. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ, ಎಲ್ಲ ಜಿಲ್ಲಾ ಸಚಿವರುಗಳು ತಮ್ಮ ಕ್ಷೇತ್ರಗಳಿಗೆ ತೆರಳುವಂತೆಯೂ ಸೂಚನೆ ನೀಡಲಾಗಿದೆ.
ಕೆಲ ಜಿಲ್ಲೆಗಳಲ್ಲಿ ಅತಿವೃಷ್ಠಿ, ಅನಾವೃಷ್ಠಿ ಇದೆ. ಈ ಬಗ್ಗೆ ಹೆಚ್ಚು ಗಮನ ನೀಡಿ, ಸಮಸ್ಯೆ ಆಲಿಸಲು ಜಿಲ್ಲೆಗಳಿಗೆ ತೆರಳುವಂತೆ ಹೇಳಲಾಗಿದೆ. ಅಂತಯೇ, ಚುನಾವಣೆ ಸಂಬಂಧ ಈಗಿಂದಲೇ ತಯಾರಿ ನಡೆಸಲು ನಿರ್ದೇಶನ ನೀಡಿದ್ದೇವೆ ಎಂದರು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ಡಿ.ಕೆ. ಶಿವಕುಮಾರ್, ಜಮೀರ್ ಅಹಮದ್, ಶಿವಾನಂದ ಪಾಟೀಲ್, ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ ಇದ್ದರು.
ಲೋಕಲ್ ವಾರ್: ಉ.ಕದಲ್ಲಿ ಜೆಡಿಎಸ್ ಝಗಮಗ, ಕಾಂಗ್ರೆಸ್ ಕಿಲಕಿಲ
ರಾಜ್ಯದ ಮೂರು ಮಹಾನಗರ ಪಾಲಿಕೆಗಳು ಸೇರಿದಂತೆ ಒಟ್ಟು 105 ನಗರ ಸ್ಥಳೀಯ ಸಂಸ್ಥೆಗಳಿಗೆ ಆಗಸ್ಟ್ 31ರಂದು ಚುನಾವಣೆ ನಡೆದಿತ್ತು. ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಸೆಪ್ಟೆಂಬರ್ 3ರಂದು ಫಲಿತಾಂಶ ಹೊರಬಂದಿದ್ದು, ಕಾಂಗ್ರೆಸ್ ಮೇಲುಗೈ ಸಾಧಿಸಿದ್ದಾರೆ. ರಾಜ್ಯದ 29 ನಗರಸಭೆ, 53 ಪುರಸಭೆ ಹಾಗೂ 20 ಪಟ್ಟಣ ಪಂಚಾಯತಿಗಳಿಗೆ ಚುನಾವಣೆ ನಡೆದಿತ್ತು.