ಭಾರಿ ಮಳೆ ಬಿದ್ದರೂ 13 ಜಿಲ್ಲೆಗಳಲ್ಲಿ ಬರದ ಛಾಯೆ: ಆತಂಕದಲ್ಲಿ ಜನರು
ಬೆಂಗಳೂರು, ಆಗಸ್ಟ್ 8: ಕರ್ನಾಟಕದಲ್ಲಿ ಈ ಬಾರಿ ಉತ್ತಮ ಮಳೆಯಾಗಿದೆ ಎಂದು ಈ ಭಾರಿ ನೀರಿಗೆ ಏನು ತೊಂದರೆಯಿಲ್ಲ ಎಂದು ಎಲ್ಲರೂ ಅಂದುಕೊಳ್ಳುತ್ತಿರುವಾಗ ರಾಜ್ಯದ 13 ಜಿಲ್ಲೆಗಳಲ್ಲಿ ಬರ ಇದೆ ಎನ್ನುವ ಆಘಾತಕಾರಿ ಮಾಹಿತಿ ತಿಳಿದುಬಂದಿದೆ.
ಈ ಕುರಿತು ಕಂದಾಯ ಸಚಿವ ಆರ್ ವಿ ದೇಶಪಾಂಡೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ವಾಡಿಕೆಗಿಂತ ಶೇ.3ರಷ್ಟು ಕಡಿಮೆ ಮಳೆಯಾಗಿದೆ. ಉತ್ತರ ಒಳನಾಡಿನ 13 ಜಿಲ್ಲೆಗಳಲ್ಲಿ ಬರದ ಛಾಯೆ ಇದೆ ಎಂದು ತಿಳಿಸಿದ್ದಾರೆ.
ಕರ್ನಾಟಕದ 13 ಜಿಲ್ಲೆಗಳಲ್ಲಿ ನೀರಿನ ಬರ!
ಚಾಮರಾಜನಗರ ಜಿಲ್ಲೆಯ ಯಳಂದೂರಿನಲ್ಲಿ ಮಾತ್ರ ಮಳೆಯಾಗಿದ್ದು, ಉಳಿದ ತಾಲೂಕುಗಳಲ್ಲಿ ಮಳೆ ಇಲ್ಲದೆ ಬರ ಎದುರಾಗಿದೆ. ಇದಕ್ಕೆ ಕೇಂದ್ರ ಸರ್ಕಾರ ವಿಧಿಸಿರುವ ಕಟ್ಟುನಿಟ್ಟಿನ ಮಾನದಂಡ ಕಾರಣವಾಗಿದೆ.
ಗಡಿಬಿಡಿಯಲ್ಲಿ ಬರ ಎಂದು ಘೋಷಣೆ ಮಾಡಲು ಸಾಧ್ಯವಿಲ್ಲ, ಆದರೆ ಬೆಳೆ ಪದ್ಧತಿ ಬದಲಾಯಿಸಿಕೊಳ್ಳುವುದೂ ಸೇರಿದಂತೆ ಪರಿಹಾರ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಕೃಷಿ ಕಂದಾಯ, ಗ್ರಾಮೀಣಾಭಿವೃದ್ಧಿ ತೋಟಗಾರಿಕೆ ಹಾಗೂ ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಪ್ರತಿ ವಾರ ಸಭೆ ನಡೆಸಿ ವಸ್ತುಸ್ಥಿತಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಕೃಷಿ ನೋಟ
ರಾಜ್ಯದ 19.12 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶಗಳ ಪೈಕಿ 8.61 ಲಕ್ಷ ಹೆಕ್ಟೇರ್ನಲ್ಲಿ ಈಗಾಗಲೇ ಬಿತ್ತನೆಯಾಗಿದ್ದು, 10 ಲಕ್ಷ ಹೆಕ್ಟೇರ್ನಲ್ಲಿ ಅಕ್ಟೋಬರ್ ಒಳಗೆ ಬಿತ್ತನೆ ಪೂರ್ಣಗೊಳ್ಳುತ್ತದೆ.
ಮಳೆ ಆಧಾರಿತ ಪ್ರದೇಶಗಳು ಎಷ್ಟಿದೆ
ಮಳೆ ಆಧಾರಿತ 55.55 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಈಗಾಗಲೇ 37.25 ಲಕ್ಷ ಹೆಕ್ಟೇರ್ ಬಿತ್ತನೆಯಾಗಿದೆ. 17.90 ಲಕ್ಷ ಹೆಕ್ಟೇರ್ ಮಾಸಾಂತ್ಯಕ್ಕೆ ಪೂರ್ಣಗೊಳ್ಳಲಿದೆ.
ಕುಡಿಯುವ ನೀರಿನ ಪ್ರಮಾಣ
ಒಟ್ಟು 12 ಜಿಲ್ಲೆಯ 184 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಪ್ರತಿ ದಿನ 275 ಟ್ಯಾಂಕರ್ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಈ ಭಾಗದ ಜನರು ಒಂದು ಕೊಡ ನೀರಿಗೂ ಹಪಹಪಿಸುವಂತಾಗಿದೆ.
ಬರ ಜಿಲ್ಲೆಗಳ ಸಮೀಕ್ಷೆ
ಕಂದಾಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಭೂಮಿಗಳನ್ನು ಪ್ರತಿ 30 ವರ್ಷಕ್ಕೊಮ್ಮೆ ಸಮೀಕ್ಷೆ ನಡೆಸಲಾಗುತ್ತದೆ. ರಾಜ್ಯದಲ್ಲಿ 1964ರ ನಂತರ ಸಮೀಕ್ಷೆ ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಭೂ ದಾಖಲೆ ಸರ್ವೇ ನಡೆಸಲು ತೀರ್ಮಾನಿಸಲಾಗಿದೆ.ಬೆಳಗಾವಿ, ರಾಮನಗರ, ಉತ್ತರ ಕನ್ನಡ, ತುಮಕೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಮೊದಲ ಬಾರಿಗೆ ಸಮೀಕ್ಷೆ ನಡೆಸಲಾಗುತ್ತದೆ.