ಜೆಡಿಎಸ್ ಸೇರಿದ ಬಿಬಿಎಂಪಿ ಮಾಜಿ ಆಯುಕ್ತ ಸಿದ್ದಯ್ಯ
ಸಿದ್ಧಯ್ಯ ಅವರು ಕಳೆದ ವಿಧಾನಸಭೆ ಚುನಾವಣೆಯ ಸಮಯದಲ್ಲಿಯೇ ಸ್ವಯಂ ನಿವೃತ್ತಿ ಪಡೆದು ಕೆಜೆಪಿಗೆ ಸೇರುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಈ ಸುದ್ದಿಗಳನ್ನು ನಿರಾಕರಿಸಿದ್ದ ಅವರು, ಮೇ ತಿಂಗಳವರೆಗೆ ಬಿಬಿಎಂಪಿ ಆಯುಕ್ತರಾಗಿ ಸೇವೆ ಸಲ್ಲಿಸಿ, ನಿವೃತ್ತಿಯಾಗಿದ್ದರು.
ಸದ್ಯ, ಜೆಡಿಎಸ್ ನಾಯಕರ ಎಚ್ ಡಿ ಕುಮಾರಸ್ವಾಮಿ ಸಿದ್ದಯ್ಯ ಅವರನ್ನು ಭೇಟಿಯಾಗಿ ಪಕ್ಷಕ್ಕೆ ಆಹ್ವಾನಿಸಿದ್ದರು. ಆಹ್ವಾನ ಒಪ್ಪಿಕೊಂಡ ಸಿದ್ದಯ್ಯ ಭಾನುವಾರ ಅಧಿಕೃತವಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದಿದ್ದಾರೆ. ಕೋಲಾರ ಕ್ಷೇತ್ರದಿಂದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅವರು ಸ್ಪರ್ಧಿಸುವ ಸಾಧ್ಯತೆ ಇದೆ. [ಜೆಡಿಎಸ್ ಸಂಭವನೀಯ ಅಭ್ಯರ್ಥಿ ಪಟ್ಟಿ]
ನಾನು ಜಾತ್ಯತೀತವಾದದಲ್ಲಿ ನಂಬಿಕೆ ಇಟ್ಟುಕೊಂಡವನು. ಜೆಡಿಎಸ್ ಜಾತ್ಯತೀತ ಪಕ್ಷ. ರೈತರ ಪರವಾಗಿ ಕೆಲಸ ಮಾಡುವ ಪಕ್ಷದಲ್ಲಿ ಕೃಷಿಕನಾಗಿರುವ ನಾನು ಅವರ ಹೋರಾಟಕ್ಕೆ ಬೆಂಬಲ ನೀಡುತ್ತೇನೆ. ಆದ್ದರಿಂದ ಜೆಡಿಎಸ್ ಪಕ್ಷ ಸೇರುತ್ತಿದ್ದೇನೆ ಎಂದು ಸಿದ್ದಯ್ಯ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಈಗಾಗಲೇ ಜೆಡಿಎಸ್ ತಯಾರಿಸಿರುವ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಕೋಲಾರ ಕ್ಷೇತ್ರದಲ್ಲಿ ಸಿದ್ದಯ್ಯ ಅವರ ಹೆಸರನ್ನು ಸೇರಿಸಲಾಗಿದೆ. ನಾನು ಕೋಲಾರದವನಲ್ಲ. ಆದರೆ, ಅಲ್ಲಿನ ಜನರು ಕುಡಿಯುವ ನೀರಿಗಾಗಿ ಪರದಾಡುವುದು ಮುಂತಾದ ಸಮಸ್ಯೆಗಳನ್ನು ಹತ್ತಿರದಿಂದ ನೋಡಿದ್ದೇನೆ. ಆದ್ದರಿಂದ ಅಲ್ಲಿಂದ ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸಿದ್ದೇನೆ ಎಂದು ಹೇಳಿದ್ದಾರೆ.