ಮಾಜಿ ಎಂಎಲ್ಸಿ ಸುದರ್ಶನ್ ಮೇಲೆ ಭೂಕಬಳಿಕೆಯ ಚಕ್ರ
ಬೆಂಗಳೂರು, ಜ. 8: ಮಾಜಿ ಕಾಂಗ್ರೆಸ್ ಶಾಸಕ ವಿ.ಆರ್. ಸುದರ್ಶನ್ ವಿರುದ್ಧ ಬಂದಿರುವ ಭೂ ಕಬಳಿಕೆ ಆರೋಪದ ಕುರಿತು ಮಾಹಿತಿ ನೀಡುವಂತೆ ರಾಜ್ಯಪಾಲ ವಜುಭಾಯಿ ವಾಲಾ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.
ವಿ.ಆರ್. ಸುದರ್ಶನ್ ಅವರನ್ನು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಅಧ್ಯಕ್ಷರಾಗಿ ನೇಮಿಸಿದ್ದನ್ನು ಬಿಜೆಪಿ ವಿರೋಧಿಸಿತ್ತು. ಸುದರ್ಶನ್ ಅವರು ಕೋಲಾರ ಜಿಲ್ಲೆಯ ವೇಮಗಲ್ನಲ್ಲಿ ಸರ್ಕಾರಿ ಭೂಮಿ ಕಬಳಿಸಿ ವಾಣಿಜ್ಯ ಮಳಿಗೆ ನಿರ್ಮಿಸಿದ್ದಾರೆ. ಆದ್ದರಿಂದ ಅವರನ್ನು ಕೆಪಿಎಸ್ಸಿಗೆ ನೇಮಿಸಬಾರದು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು ಬುಧವಾರ ರಾಜ್ಯಪಾಲರಿಗೆ ದೂರು ನೀಡಿದ್ದರು. ಈ ಕುರಿತು ವಿವರ ಕೇಳಿದರೆ ದಾಖಲೆಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದರು. [ಸುದರ್ಶನ್ ವಿರುದ್ಧ ರಾಜ್ಯಪಾಲರಿಗೆ ದೂರು]
ಬಿಜೆಪಿ ದೂರಿನ ಹಿನ್ನೆಲೆಯಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಆರೋಪದ ಕುರಿತು ವಿವರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ವರದಿಯನ್ನು ಸಲ್ಲಿಸಬೇಕೆಂದು ಸೂಚಿಸಿದ್ದಾರೆ. [ಕೆಪಿಎಸ್ ಸಿ ಅಧ್ಯಕ್ಷ ಸ್ಥಾನಕ್ಕೆ ವಿ.ಆರ್. ಸುದರ್ಶನ್]