ವಿಭಜನಕಾರಿ ಶಕ್ತಿಗಳಿಗೆ ತಕ್ಕ ಶಾಸ್ತಿ: ಎಚ್ಡಿಕೆ ಖಡಕ್ ಎಚ್ಚರಿಕೆ
Recommended Video
ಬೆಂಗಳೂರು, ಜೂನ್ 07: ರಾಜಕೀಯ ಬೆಳವಣಿಗೆಗಾಗಿ ಸಮಾಜವನ್ನು ಒಡೆಯಲು ಮುಂದಾಗುವ ವ್ಯಕ್ತಿ ಹಾಗೂ ಸಂಘಟನೆಗಳ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಜರುಗಿಸಲಿದೆ ಎಂದು ಹೆಚ್. ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.
ಸಂಪುಟ ವಿಸ್ತರಣೆ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲರ ರಕ್ಷಣೆಗೆ ತಮ್ಮ ಸರ್ಕಾರ ಬದ್ಧವಾಗಿದೆ, ತಮ್ಮ ಮೈತ್ರಿ ಸರ್ಕಾರ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಜನತೆಯಲ್ಲಿ ವಿಶ್ವಾಸ ಮೂಡಿಸುವ ಕಾರ್ಯ ನಿರ್ವಹಿಸಬೇಕೆಂದು ಎಲ್ಲಾ ಸಚಿವರಿಗೂ ಸೂಚನೆ ನೀಡಿದ್ದೇನೆ ಎಂದರು.
ಪ್ರಮಾಣ ವಚನ ಸ್ವೀಕರಿಸಿದ ಜಿಲ್ಲಾವಾರು ಸಚಿವರುಗಳ ಪಟ್ಟಿ
ಸರ್ಕಾರ ಪರಸ್ಪರ ಜನರ ವಿಶ್ವಾಸಗಳನ್ನು ಪಡೆಯಲು ಎಲ್ಲರೊಂದಿಗೂ ಮುಕ್ತವಾಗಿ ಚರ್ಚೆ ನಡೆಸಿ ವಿವಿಧ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡು ಹಿಡಿಯಲಿದೆ. ಒಂದೇ ಪಕ್ಷದ ಸರ್ಕಾರ ರಚನೆ ಸಂದರ್ಭದಲ್ಲಿಯೂ ಸಚಿವರಾಗುವ ಆಕಾಂಕ್ಷಿಗಳು ತಮ್ಮ ಅಸಮಾಧಾನ ಹೊರಹಾಕುತ್ತಾರೆ. ಪ್ರತಿಭಟನೆ ನಡೆಸುತ್ತಾರೆ.
ಹೀಗಿರುವಾಗ ಸಮ್ಮಿಶ್ರ ಸರ್ಕಾರದಲ್ಲಿ ಕೆಲವು ಹಿರಿಯ ಮುಖಂಡರು ಸಚಿವರಾಗಲು ಅರ್ಹತೆ ಹೊಂದಿದ್ದರೂ, ಎಲ್ಲರನ್ನೂ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.
ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಇಬ್ಬರೂ ಪ್ರಮಾಣ ವಚನ ಸ್ವೀಕರಿಸಿದ ನಂತರ ಆಡಳಿತ ಯಂತ್ರವನ್ನು ಚುರುಕುಗೊಳಿಸಲು ಎಲ್ಲಾ ಅಧಿಕಾರಿಗಳ ಜೊತೆ ಸಂಪರ್ಕ ಸಾಧಿಸಿ ಕಾಲ ಕಾಲಕ್ಕೆ ಮಾಹಿತಿ ಪಡೆದು ಸೂಕ್ತ ನಿರ್ದೇಶನಗಳನ್ನು ನೀಡಿದ್ದೇವೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಕಾರಾತ್ಮಕ ದಿಕ್ಕಿನಲ್ಲಿ ಪರಿಣಾಮಕಾರಿಯಾಗಿ ಮುನ್ನಡೆಯುತ್ತೇವೆ ಎಂಬ ಭರವಸೆ ನೀಡಿದರು.
ಮೈತ್ರಿ ಸರಕಾರದ ಸಂಪುಟ ಸೇರಿದ ನೂತನ ಸಚಿವರು ಇವರು
ಐದು ವರ್ಷಗಳ ಕಾಲ ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡುವುದು ತಮ್ಮ ಗುರಿಯಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಳೆಯಿಂದ ಆಗಿರುವ ಹಾನಿಯ ಬಗ್ಗೆ ಪ್ರತಿದಿನವೂ ಮಾಧ್ಯಮಗಳಲ್ಲಿ ಹೊರಹೊಮ್ಮುತ್ತಿದ್ದ ವರದಿಗಳನ್ನು ಗಮನಿಸಿದ್ದೇವೆ. ಅಧಿಕಾರ ಸ್ವೀಕರಿಸಿದ ನಂತರ ಮಳೆಯಿಂದಾದ ಹಾನಿ ಕುರಿತಂತೆ ರಸ್ತೆ ಗುಂಡಿಗಳನ್ನು ಮುಚ್ಚಲು ಕೈಗೊಂಡ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ವಿವರ ನೀಡಿದರು.
ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಹಾಗೂ ತಾವೂ ಒಳಗೊಂಡಂತೆ ರಾಜ್ಯ ಸಂಪುಟದಲ್ಲಿ ಇದೀಗ 27 ಸಚಿವರು ಇದ್ದಾರೆ. ಅದರಲ್ಲಿ ಹಲವರು ಅನುಭವಿಗಳು ಮತ್ತು ಹಿರಿಯರು ಇದ್ದಾರೆ. ಇನ್ನೂ ಕೆಲವರು ಮೊದಲನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ ಸಂಪುಟಕ್ಕೆ ಸೇರ್ಪಡೆ ಆಗಿದ್ದಾರೆ. ಎಲ್ಲರನ್ನೂ ಒಳಗೊಂಡಂತೆ ಪೂರ್ಣಪ್ರಮಾಣದ ಸರ್ಕಾರ ರಚನೆ ಆಗಿದೆ ಎಂದು ಹರ್ಷ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರು ಸಂಪುಟ ವಿಸ್ತರಣೆ ಕುರಿತ ವಿಳಂಬವನ್ನು ಪರೋಕ್ಷವಾಗಿ ಸಮರ್ಥನೆ ಮಾಡಿಕೊಂಡರು.
ಕ್ಯಾಬಿನೆಟ್ ಬಸ್ ಮಿಸ್ ಮಾಡಿಕೊಂಡ ಪ್ರಮುಖ ಕಾಂಗ್ರೆಸ್ ಶಾಸಕರು
ಗೋರಕ್ಷಣೆ ಹೆಸರಿನಲ್ಲಿ ಕೆಲವರು ಕಾನೂನು ಕೈಗೆತ್ತಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಓರ್ವ ಪೊಲೀಸ್ ಇನ್ಸ್ಪೆಕ್ಟರ್ನನ್ನು ಅಮಾನತು ಮಾಡಲಾಗಿದೆ. ರಾಜ್ಯದ ಯಾವುದೇ ಮೂಲೆಯಲ್ಲಿ ಏನೇ ಘಟನೆ ಸಂಭವಿಸಿದರೂ ಸರ್ಕಾರ ಅದನ್ನು ಗಮನಿಸುತ್ತಿದೆ ಹಾಗೂ ಗಂಭೀರವಾಗಿ ಪರಿಗಣಿಸುತ್ತಿದೆ. ಸೂಕ್ತ ಭದ್ರತೆ ಹಾಗೂ ರಕ್ಷಣೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸಕಾಲದಲ್ಲಿ ಸಲಹೆ ಸೂಚನೆ ನೀಡಲಾಗುತ್ತಿದೆ ಎಂದು ಮಾಧ್ಯಮದವರೋರ್ವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ರಾಜ್ಯದಲ್ಲಿ ತಮಿಳು ಚಲನಚಿತ್ರ ಕಾಲಾ ಪ್ರದರ್ಶನ ಮಾಡುವಂತೆ ಕರ್ನಾಟಕ ಉಚ್ಛ ನ್ಯಾಯಾಲಯವು ನೀಡಿರುವ ನಿರ್ದೇಶನವನ್ನು ತಮ್ಮ ಸರ್ಕಾರ ಪಾಲಿಸಲಿದೆ. ಆದರೆ ರಾಜ್ಯದಲ್ಲಿದ್ದ ಪ್ರತಿರೋಧ ವಾತಾವರಣದ ಹಿನ್ನೆಲೆಯಲ್ಲಿ ಇದಕ್ಕೂ ಮುನ್ನಾ ತಾವು ವಿತರಕರಲ್ಲಿ ತಾಳ್ಮೆ ಇರಲಿ ಎಂಬ ಮನವಿಯನ್ನು ಮಾಡಿದ್ದೆವು. ಎಂದು ಅವರು ಹೇಳಿದರು.
ಜೆಡಿಎಸ್ನಲ್ಲಿ ಸಚಿವ ಸ್ಥಾನ ತಪ್ಪಿಸಿಕೊಂಡ ಪ್ರಮುಖ ನಾಯಕರು!
ಅನ್ನಭಾಗ್ಯ ಒಳಗೊಂಡಂತೆ ಭಾಗ್ಯ ಸರಣಿಯ ಹಿಂದಿನ ಸರ್ಕಾರದ ಎಲ್ಲಾ ಜನಪರ ಯೋಜನೆಗಳು ಎಂದಿನಂತೆ ಮುಂದುವರೆಯಲಿದೆ. ಸಮ್ಮಿಶ್ರ ಸರ್ಕಾರದಲ್ಲಿ ಹೊಸ ಯೋಜನೆಗಳ ಅಳವಡಿಕೆ ಕುರಿತಂತೆ ಎರಡೂ ಪಕ್ಷಗಳ ಪ್ರಣಾಳಿಕೆಯಲ್ಲಿ ಇರುವ ಅಂಶಗಳನ್ನು ಸಮ್ಮಿಳಿತಗೊಳಿಸಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳನ್ನು ರೂಪಿಸಿ ಸಮನ್ವಯ ಸಮಿತಿಯ ಸಹಮತಿ ಪಡೆದು ಅವುಗಳನ್ನು ಜಾರಿಗೆ ತರಲಾಗುವುದು ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.
ಮೈತ್ರಿ ಸರ್ಕಾರದಲ್ಲಿ ಜನತೆಗೆ ಉತ್ತಮ ಆಡಳಿತ ನೀಡುವ ದೃಷ್ಟಿಯಿಂದ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳನ್ನು ಶೀಘ್ರದಲ್ಲಿ ಜಾರಿ ಮಾಡಿ ಮೈತ್ರಿ ಪಕ್ಷಗಳು ಸೂಕ್ತ ನಿರ್ಧಾರವನ್ನು ಕೈಗೊಳ್ಳಲಿದೆ ಎಂದೂ ಅವರು ಭರವಸೆ ನೀಡಿದರು. ರೈತರ ಸಾಲ ಮನ್ನಾ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಸಮ್ಮಿಶ್ರ ಸರ್ಕಾರ ಬದ್ಧವಾಗಿದೆ ಎಂದೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದರು.