ಸಚಿವ ತನ್ವೀರ್ ಸೇಠ್ ಮನೆಯ ಕಿಟಕಿ ಗಾಜು ಪುಡಿ-ಪುಡಿ
ಬೆಂಗಳೂರು, ಅಕ್ಟೋಬರ್ 07: ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ತರುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಈ ಸಲ ಟಾಪರ್ಸ್ ಲಿಸ್ಟ್ ಪ್ರಕಟಿಸದಿರಲು ನಿರ್ಧಾರ: ತನ್ವೀರ್ ಸೇಠ್
ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಚಿವ ತನ್ವೀರ್ ಸೇಠ್ ಅವರ ಮನೆಗೆ ಮುತ್ತಿಗೆ ಹಾಕಿದರು. ಈ ವೇಳೆ ಸಚಿವರು ಮನೆಯಲ್ಲಿ ಇಲ್ಲದಿದ್ದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಮನೆಯ ಕಿಟಕಿ ಗಾಜು ಹಾಗೂ ಹೂಕುಂಡಗಳನ್ನು ಒಡೆದು ಹಾಕಿದರು.
ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು, ಕನ್ನಡ ಶಾಲೆ ಹೆಸರಲ್ಲಿ ಇಂಗ್ಲೀಷ್ ಶಾಲೆ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು, ಡೊನೇಷನ್ ಹಾವಳಿಗೆ ಕಡಿವಾಣ ಹಾಕಬೇಕು ಹಾಗೂ ಖಾಸಗಿ ಶಾಲೆಗಳನ್ನು ನಿಯಂತ್ರಿಸಬೇಕೆಂದು ಆಗ್ರಹಿಸಿದರು.
ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆ ಪೊಲೀಸರು ಆಗಮಿಸಿ ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ದಿದರು. ಘಟನೆ ನಡೆದ ಬಳಿಕ ಮನೆಗೆ ಆಗಮಿಸಿದ ಸಚಿವ ತನ್ವೀರ್ ಸೇಠ್, ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.