ವೋಟರ್ ಐಡಿ ಪತ್ತೆ: ಕೇಂದ್ರ ಚುನಾವಣಾ ಆಯೋಗಕ್ಕೆ ವರದಿ
ಬೆಂಗಳೂರು, ಮೇ 10: ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದಲ್ಲಿನ ಜಾಲಹಳ್ಳಿಯ ಫ್ಲಾಟ್ ಒಂದರಲ್ಲಿ ಮತದಾರರ ಗುರುತಿನ ಚೀಟಿಗಳು ಪತ್ತೆಯಾದ ಪ್ರಕರಣದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ತಿಳಿಸಿದರು.
ಪ್ರಕರಣವು ಗಂಭೀರವಾಗಿದ್ದರಿಂದ ಉಪ ಚುನಾವಣಾ ಆಯುಕ್ತರು ಖುದ್ದಾಗಿ ಬಂದು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಮಾಹಿತಿ ಕಲೆಹಾಕಿದ್ದು, ಅವರು ವರದಿ ನೀಡಿದ್ದಾರೆ. ಅದರ ಆಧಾರದಲ್ಲಿ ಕೇಂದ್ರ ಚುನಾವಣಾ ಆಯೋಗ ನಿರ್ಧಾರ ಪ್ರಕಟಿಸಲಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ದೊರೆತ ಎಲ್ಲ ವೋಟರ್ ಐಡಿಗಳು ಅಸಲಿ: ಚುನಾವಣಾ ಆಯೋಗ
ಈ ವಿಚಾರದಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ಗುರುತಿನ ಚೀಟಿಯ ರಾಶಿ ಒಂದೆಡೆ ಸಿಕ್ಕಿರುವ ಘಟನೆಯಲ್ಲಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಅವರ ಕೈವಾಡವಿದೆ ಎಂದು ಆರೋಪಿಸಿರುವ ಬಿಜೆಪಿ, ಚುನಾವಣೆ ಮುಂದೂಡುವಂತೆ ಒತ್ತಾಯಿಸಿದೆ.
ಆದರೆ, ಆರೋಪವನ್ನು ನಿರಾಕರಿಸಿರುವ ಕಾಂಗ್ರೆಸ್, ಇದು ಬಿಜೆಪಿಯ ಕುತಂತ್ರ ಎಂದು ಪ್ರತ್ಯಾರೋಪ ಮಾಡಿದೆ.
ಈ ಸಂಬಂಧ ಮುನಿರತ್ನ ನಾಯ್ಡು ಸೇರಿದಂತೆ 11 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಇಬ್ಬರನ್ನು ಬಂಧಿಸಲಾಗಿದೆ.