ದೇವೇಗೌಡರ ಭೇಟಿ ಬಳಿಕ ರಾಮಲಿಂಗಾ ರೆಡ್ಡಿ ಹೇಳಿದ್ದೇನು?
ಬೆಂಗಳೂರು, ಸೆಪ್ಟೆಂಬರ್ 12 : 'ಎಚ್.ಡಿ.ದೇವೇಗೌಡರು ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದ್ದಾರೆ. ಆದ್ದರಿಂದ, ಬೇರೆ ಕಡೆ ಹೋಗುವುದಿಲ್ಲ. ಬಿಬಿಎಂಪಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರೆಯಲಿದೆ' ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ದೇವೇಗೌಡರನ್ನು ಭೇಟಿ ಮಾಡಿದ ರಾಮಲಿಂಗಾ ರೆಡ್ಡಿ
ಮಂಗಳವಾರ ಎಚ್.ಡಿ.ದೇವೇಗೌಡ ಭೇಟಿ ಬಳಿಕ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, 'ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಮೈತ್ರಿ ಬಗ್ಗೆ ಚರ್ಚೆ ನಡೆಸಿದ್ದೇವೆ' ಎಂದರು.
'ಮೈತ್ರಿ ಬಗ್ಗೆ ಮಾತುಕತೆ ನಡೆಸುವ ಜವಾಬ್ದಾರಿಯನ್ನು ದೇವೇಗೌಡರು ರಾಜ್ಯಸಭಾ ಕುಪೇಂದ್ರ ರೆಡ್ಡಿ ಅವರಿಗೆ ವಹಿಸಿದ್ದಾರೆ. ಅವರ ಜೊತೆಗೂ ಮಾತುಕತೆ ನಡೆಸಲಾಗುತ್ತದೆ' ಎಂದು ತಿಳಿಸಿದರು.
'ಜೆಡಿಎಸ್ ಪಕ್ಷಕ್ಕೆ ಮೇಯರ್ ಪಟ್ಟ ಬೇಕು ಎಂಬ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆಯೂ ಚರ್ಚೆ ನಡೆಸಲಾಗಿದೆ' ಎಂದು ರಾಮಲಿಂಗಾ ರೆಡ್ಡಿ ಹೇಳಿದರು.
ಬಿಬಿಎಂಪಿ ಮೈತ್ರಿ : ಎಚ್.ಡಿ.ಕುಮಾರಸ್ವಾಮಿ ಹೇಳುವುದೇನು?
'ದೇವೇಗೌಡರು ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದ್ದಾರೆ. ಆದ್ದರಿಂದ ಬೇರೆ ಕಡೆ ಹೋಗುವುದಿಲ್ಲ ಎಂಬ ನಂಬಿಕೆ ಇದೆ. ಬಿಬಿಎಂಪಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರೆಯಲಿದೆ' ಎಂದರು.
ಸೆ.28ರಂದು ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಈ ಬಾರಿಯ ಮೇಯರ್ ಹುದ್ದೆ ಪರಿಶಿಷ್ಟ ಜಾತಿ (ಸಾಮಾನ್ಯ) ಸದಸ್ಯರಿಗೆ, ಉಪ ಮೇಯರ್ ಸ್ಥಾನ ಸಾಮಾನ್ಯ ವರ್ಗದ ಮಹಿಳೆಗೆ ಮೀಸಲಾಗಿದೆ.