ಏ. 14ರಂದು ರಾಷ್ಟ್ರಪತಿಯಿಂದ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಶಿಲಾನ್ಯಾಸ
ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಸ್ಥಾಪನೆ ಆಗಲಿರುವ ಇಂದು ಅಂಬೇಡ್ಕರ್ ಜಯಂತಿಯಂದೇ ಶುಕ್ರವಾರ ‘ಡಾ.ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್’ ಸಂಸ್ಥೆಗೆ ಶಿಲಾನ್ಯಾಸ.
ಬೆಂಗಳೂರು, ಏಪ್ರಿಲ್ 14 : ಅಂಬೇಡ್ಕರ್ ಜಯಂತಿಯಂದೇ ಶುಕ್ರವಾರ (ಏಪ್ರಿಲ್ 14) ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಸ್ಥಾಪನೆ ಆಗಲಿರುವ 'ಡಾ.ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್' ಸಂಸ್ಥೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಮಧ್ಯಾಹ್ನ 1.30ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.
ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ನಲ್ಲಿ ಓದಿದ ಮೊದಲ ಭಾರತೀಯ ಎಂಬ ಕಾರಣಕ್ಕೆ ಅವರ ಹೆಸರನ್ನೇ ಸಂಸ್ಥೆಗೆ ಇಡಲಾಗಿದೆ.
43.35 ಎಕರೆ ಪ್ರದೇಶದಲ್ಲಿ ಈ ಸ್ವಾಯತ್ತ ಸಂಸ್ಥೆ ತಲೆ ಎತ್ತಲಿದೆ. ಮುಂದಿನ ಶೈಕ್ಷಣಿಕ ವರ್ಷದಿಂದಲೇ ತರಗತಿ ಆರಂಭವಾಗಲಿದ್ದು, ವಿಶ್ವವಿದ್ಯಾಲಯದ ಹಳೇ ಕಟ್ಟಡವನ್ನು ತಾತ್ಕಾಲಿಕವಾಗಿ ಒದಗಿಸಲಾಗಿದೆ.
ಸ್ಕೂಲ್ ಆಫ್ ಎಕನಾಮಿಕ್ಸ್ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉನ್ನತ ಶಿಕ್ಷಣ ಇಲಾಖೆಗೆ 107 ಕೋಟಿ ರು. ಬಿಡುಗಡೆ ಮಾಡಿದ್ದಾರೆ.
ಇದರಲ್ಲಿ 17 ಕೋಟಿ ರುಗಳನ್ನು ಸಂಸ್ಥೆಯ ಆರಂಭಿಕ ವೆಚ್ಚವಾಗಿ ಬಳಸಿಕೊಳ್ಳಲಾಗುತ್ತದೆ. ಉಳಿದ 90 ಕೋಟಿ ಹಣವನ್ನು ಕಟ್ಟಡ ನಿರ್ಮಾಣಕ್ಕೆ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ.