ಜಯಾ ಜಾಮೀನು ವಿಚಾರಣೆ : ಕೋರ್ಟ್ ಸುತ್ತ ನಿಷೇಧಾಜ್ಞೆ
ಬೆಂಗಳೂರು, ಅ. 6 : ತಮಿಳುನಾಡಿನಲ್ಲಿ ಅಕ್ರಮವಾಗಿ ಆಸ್ತಿ ಮಾಡಿರುವ ಆರೋಪ ಹೊತ್ತು ಸದ್ಯಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಯಾಗಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಯರಾಂ (66) ಅವರ ಜಾಮೀನು ಅರ್ಜಿಯ ವಿಚಾರಣೆ ಅ.7, ಮಂಗಳವಾರ ಕರ್ನಾಟಕ ಹೈಕೋರ್ಟಿನಲ್ಲಿ ಬರಲಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಹೈಕೋರ್ಟ್ ಮತ್ತು ಪರಪ್ಪನ ಅಗ್ರಹಾರದ ಬಳಿ ಜಯಲಲಿತಾ ಅವರ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ನೆರೆದು ಸುಗಮ ವಾಹನ ಸಂಚಾರಕ್ಕೆ ಮತ್ತು ಸಾರ್ವಜನಿಕ ಸಂಚಾರಕ್ಕೆ ತೊಂದರೆ ಹಾಗು ಆಸ್ತಿಪಾಸ್ತಿ ಹಾನಿ ಮಾಡುವ ಸಾಧ್ಯತೆ ಇರುವುದರಿಂದ ಎರಡೂ ಪ್ರದೇಶಗಳ 1 ಕಿ.ಮೀ. ಸುತ್ತಳತೆಯಲ್ಲಿ ಪ್ರತಿಬಂಧಕಾಜ್ಞೆ ಹೇರಲಾಗಿದೆ.
ಸೋಮವಾರ, ಅ.6ರ ಮಧ್ಯರಾತ್ರಿ 12 ಗಂಟೆಯಿಂದ ಮಂಗಳವಾರ ಅ.7ರ ಮಧ್ಯರಾತ್ರಿಯವರೆಗೆ, ವಿಧಾನಸೌಧದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಹೈಕೋರ್ಟ್ ಮತ್ತು ಪರಪ್ಪನ ಅಗ್ರಹಾರ ಜೈಲಿನ ಸುತ್ತಮುತ್ತ 1 ಕಿ.ಮೀ. ಸುತ್ತಳತೆಯಲ್ಲಿ, ಅಪರಾಧ ಪ್ರಕ್ರಿಯಾ ಸಂಹಿತೆಯ 144ನೇ ಸೆಕ್ಷನ್ ಅಡಿಯಲ್ಲಿ ಪ್ರತಿಬಂಧಕಾಜ್ಞೆ ಹೇರಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಎಂ.ಎನ್. ರೆಡ್ಡಿ ಅವರು ಆದೇಶ ಹೊರಡಿಸಿದ್ದಾರೆ. [ಜಯಾ ಸಾಮಾನ್ಯ ಕೈದಿ]
ಇತರ ನಿಬಂಧನೆಗಳು
1) ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವಂತಿಲ್ಲ.
2) ಮೆರವಣಿಗೆ ಮತ್ತು ಸಭೆಗಳನ್ನು ನಡೆಸುವಂತಿಲ್ಲ.
3) ಶಸ್ತ್ರಗಳನ್ನು, ದೊಣ್ಣೆಗಳನ್ನು, ಕತ್ತಿಗಳು, ಈಟಿಗಳು, ಗದೆಗಳು, ಕಲ್ಲು, ಇಟ್ಟಿಗೆ, ಚಾಕು ಇನ್ನೂ ಮುಂತಾದ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.
4) ಯಾವುದೇ ಸಂರಕ್ಷಾರ ಪದಾರ್ಥ ಅಥವಾ ಸ್ಪೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಮತ್ತು ಶೇಖರಿಸುವುದನ್ನು ಮಾಡುವಂತಿಲ್ಲ.
5) ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು, ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿ ಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ.
ಸೆಪ್ಟೆಂಬರ್ 27ರಂದು ಪರಪ್ಪನ ಅಗ್ರಹಾರದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಾನ್ ಮೈಕಲ್ ಡಿಕುನ್ಹಾ ಅವರು ಜಯಲಲಿತಾ ಅವರಿಗೆ 4 ವರ್ಷಗಳ ಜೈಲು ಶಿಕ್ಷೆ ಮತ್ತು 100 ಕೋಟಿ ರು. ದಂಡ ವಿಧಿಸಿದ್ದಾರೆ. ಜಯಾ ಅವರೊಂದಿಗೆ ಅವರ ಸ್ನೇಹಿತೆ ಶಶಿಕಲಾ, ಸಾಕುಮಗ ಸುಧಾಕರ್ ಮತ್ತು ಇಳವರಸಿ ಕೂಡ ಶಿಕ್ಷೆಗೆ ಗುರಿಯಾಗಿದ್ದಾರೆ.