ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ, ತುಮಕೂರು ಕಾಂಗ್ರೆಸ್ ಅಧ್ಯಕ್ಷ ಬಂಧನ
ಬೆಂಗಳೂರು, ಫೆಬ್ರವರಿ 11 : ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ರಾಮಕೃಷ್ಣಯ್ಯ ಅವರನ್ನು ಉಚ್ಚಾಟನೆ ಮಾಡುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿದಾಗ ಅವರನ್ನು ಬಂಧಿಸಲಾಗಿದೆ.
ಸಿಸಿಬಿ ಅಧಿಕಾರಿಗಳು ಬೆಂಗಳೂರಿನ ಪೀಣ್ಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ದೊಡ್ಡಬಿದರಕಲ್ಲು ಬಳಿಯ ಮನೆಯ ಮೇಲೆ ಶನಿವಾರ ರಾತ್ರಿ ದಾಳಿ ನಡೆಸಿದ್ದರು. ವೇಶ್ಯಾವಾಟಿಕೆ ನಡೆಯುತ್ತಿದ್ದ ಆರೋಪದ ಮೇಲೆ ದಾಳಿ ನಡೆಸಲಾಗಿತ್ತು.
ಈ ಸಂದರ್ಭದಲ್ಲಿ ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣಯ್ಯ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ಇಬ್ಬರು ಯುವತಿಯರನ್ನು ರಕ್ಷಣೆ ಮಾಡಲಾಗಿದೆ.
ರಾಮಕೃಷ್ಣಯ್ಯ ಬಂಧಿಸಿದ ಸಿಸಿಬಿ ಪೊಲೀಸರು, ಪೀಣ್ಯ ಪೊಲೀಸರಿಗೆ ಅವರನ್ನು ಹಸ್ತಾಂತರ ಮಾಡಿದ್ದರು. ಪೀಣ್ಯ ಪೊಲೀಸರು ರಾಮಕೃಷ್ಣಯ್ಯ ವಿರುದ್ದ ಎಫ್ಐಆರ್ ದಾಖಲು ಮಾಡಿದ್ದು, ಇಂದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಆಪ್ತ ವಲಯದಲ್ಲಿ ರಾಮಕೃಷ್ಣಯ್ಯ ಅವರು ಗುರುತಿಸಿಕೊಂಡಿದ್ದರು. ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆದಾಗ ರಾಮಕೃಷ್ಣಯ್ಯ ಸಿಕ್ಕಿಬಿದ್ದಿದ್ದು ಪಕ್ಷದ ನಾಯಕರಿಗೆ ಮುಜುಗರ ತಂದಿದೆ.
ರಾಮಕೃಷ್ಣಯ್ಯ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡುವ ಸಾಧ್ಯತೆ ಇದೆ. ಪರಮೇಶ್ವರ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕಾರ್ಯಕ್ರಮದಲ್ಲಿ ಬ್ಯುಸಿಯಾಗಿದ್ದು, ಬೆಂಗಳೂರಿಗೆ ಆಗಮಿಸಿದ ತಕ್ಷಣ ಈ ಕುರಿತು ಆದೇಶ ಹೊರಡಿಸುವ ನಿರೀಕ್ಷೆ ಇದೆ.