ಎಚ್ಡಿಕೆ ಹೇಳಿಕೆಯಿಂದ ಕಾಂಗ್ರೆಸ್ಗೆ ಮುಜುಗರವಾಗಿದೆ: ಜಾರಕಿಹೊಳಿ
ಬೆಂಗಳೂರು, ಜುಲೈ 31: ಉತ್ತರ ಕರ್ನಾಟಕ ವಿಭಜನೆ ಕುರಿತು ಎಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಮುಜುಗರವಾಗಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಕಾಂಗ್ರೆಸ್ ಪಕ್ಷದ ಮೇಲೆ ದುಷ್ಪರಿಣಾಮ ಉಂಟುಮಾಡಬಲ್ಲ ಆ ಹೇಳಿಕೆಯನ್ನು ಕುಮಾರಸ್ವಾಮಿ ಹೊಂಪಡೆಯಬೇಕು, ಸಿಎಂ ಯಾವ ಸಂದರ್ಭದಲ್ಲಿ, ಯಾವ ಅರ್ಥದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಬಗ್ಗೆ ವಿವಾದದ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ ಎಂದರು.
ಪ್ರತ್ಯೇಕ ರಾಜ್ಯದ ಕೂಗು, ಮಾಧ್ಯಮಗಳ ಮೇಲೆ ಗೂಬೆ ಕೂರಿಸಿದ ಸಿಎಂ!
ಸಮಗ್ರ ಕರ್ನಾಟದ ಅಭಿವೃದ್ಧಿಗೆ ನಮ್ಮ ಸಮ್ಮಿಶ್ರ ಸರ್ಕಾರ ಬದ್ಧವಾಗಿದೆ. ಬೆಂಗಳೂರು ಭಾಗದಲ್ಲಿ ಆಗಿರುವಷ್ಟು ಅಭಿವೃದ್ಧಿ ಉತ್ತರ ಕರ್ನಾಟಕದಲ್ಲಿ ಆಗಿಲ್ಲ. ಹಾಗಂತ, ಅಲ್ಲಿ ಅಭಿವೃದ್ಧಿಯೇ ಆಗಿಲ್ಲ ಎಂದು ಹೇಳಲು ಸಾಧ್ಯವಿಲ್ಲ.
ಸಚಿವ ಸಂಪುಟ ಸ್ಥಾನಗಳ ಭರ್ತಿಯಲ್ಲೂ ಅಸಮತೋಲನವಾಗಿದೆ. ಉತ್ತರ ಕರ್ನಾಟಕ ಮತ್ತು ಹೈದ್ರಾಬಾದ್ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದಿಂದ ಅತಿ ಹೆಚ್ಚು ಶಾಸಕರು ಆಯ್ಕೆಯಾಗಿದ್ದರೂ ಸಚಿವ ಸ್ಥಾನ ಮಾತ್ರ ಹೆಚ್ಚು ಸಿಗುತ್ತಿಲ್ಲ. ರಾಮಕೃಷ್ಣ ಹೆಗಡೆಯವರ ಕಾಲದಿಂದಲೂ ಈ ಪದ್ಧತಿ ಬೆಳೆದು ಬಂದಿದೆ ಎಂದರು.
ಯಾವ ರೀತಿಯ ಪರ್ಯಾಯ ವ್ಯವಸ್ಥೆ ಮಾಡಲಿದ್ದಾರೆ ಎಂಬ ಬಗ್ಗೆ ಸತೀಶ್ ಜಾರಕಿಹೊಳಿ ಬಿಟ್ಟುಕೊಟ್ಟಿಲ್ಲ. ಲೋಕಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಸಮಯವಿದೆ. ಅಷ್ಟರಲ್ಲಿ ಈ ಹಾನಿಯನ್ಮು ಸರಿಪಡಿಸಲು ಪರ್ಯಾಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಕುಮಾರಸ್ವಾಮಿಯವರಿಗೂ ತಮ್ಮ ಹೇಳಿಕೆಯನ್ನು ವಾಪಸ್ ಪಡೆಯಲು ಮನವಿ ಮಾಡುತ್ತೇವೆ ಎಂದು ತಿಳಿಸಿದರು.
ಪ್ರತ್ಯೇಕ ರಾಜ್ಯ: ಎಚ್ಡಿಕೆ ವಿರುದ್ಧ ಶ್ರೀರಾಮುಲು ಆಕ್ರೋಶ
ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೋಸ್ಕರ ಪ್ರತಿಭಟನೆ ನಡೆಯುತ್ತಿದೆ. ಅಲ್ಲಿ ಪ್ರತ್ಯೇಕತೆಯ ಬಗ್ಗೆ ಪ್ರತಿಭಟನೆಯಾಗುತ್ತಿಲ್ಲ. ಉತ್ತರ ಕರ್ನಾಟಕ ಅಭಿವೃದ್ಧಿ ಆಗಬೇಕು ಎಂಬುದು ನಮ್ಮ ಗುರಿಯೂ ಹೌದು ಎಂದಿದ್ದಾರೆ. ಕಳೆದ ಬಾರಿಯ ಸಿದ್ದರಾಮಯ್ಯ ಸರ್ಕಾರದ ಬಜೆಟ್ನಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಸಾಕಷ್ಟು ಅನುದಾನ ಕೊಟ್ಟಿದ್ದಾರೆ ಎಂದರು.