ಸ್ಪೀಕರ್ ಚುನಾವಣೆ:ಹಿಂದೆ ಸರಿದ ಸುರೇಶ್ ಕುಮಾರ್, ರಮೇಶ್ ಕುಮಾರ್ ಆಯ್ಕೆ
ಬೆಂಗಳೂರು, ಮೇ 25: ಸ್ಪೀಕರ್ ಸ್ಥಾನ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಬಿಜೆಪಿಯ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಅವರು ತಮ್ಮ ನಾಮಪತ್ರ ವಾಪಾಸ್ ಪಡೆದಿದ್ದಾರೆ. ಕಾಂಗ್ರೆಸ್ನ ರಮೇಶ್ ಕುಮಾರ್ ಅವರು ಸಭಾಧ್ಯಕ್ಷ ಆಗಿ ಆಯ್ಕೆ ಆಗುವುದು ಬಹುತೇಕ ಖಚಿತವಾಗಿದೆ.
ಸ್ಪೀಕರ್ ಸ್ಥಾನಕ್ಕೆ ಬಿಜೆಪಿಯಿಂದ ಸುರೇಶ್ ಕುಮಾರ್ ಅವರು ನಿನ್ನೆ ನಾಮಪತ್ರ ಸಲ್ಲಿಸಿದ್ದರು, ಕಾಂಗ್ರೆಸ್-ಜೆಡಿಎಸ್ ನಿಂದ ಶ್ರೀನಿವಾಸಪುರ ಶಾಸಕ ರಮೇಶ್ ಕುಮಾರ್ ಅವರು ನಾಮಪತ್ರ ಸಲ್ಲಿಸಿದ್ದರು. ಇಂದು ಸುರೇಶ್ ಕುಮಾರ್ ನಾಮಪತ್ರ ವಪಾಸ್ ಪಡೆದಿದ್ದು ರಮೇಶ್ ಕುಮಾರ್ ಅವರು ಬಹುಮತದಿಂದ ಸಭಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗಿದ್ದಾರೆ.
ಕರ್ನಾಟಕ ವಿಶ್ವಾಸಮತ LIVE: ಸ್ಪೀಕರ್ ಆಗಿ ರಮೇಶ್ ಕುಮಾರ್ ಆಯ್ಕೆ
ನಾಮಪತ್ರ ವಾಪಾಸ್ ಪಡೆಯುವ ಬಗ್ಗೆ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿರುವ ಸುರೇಶ್ ಕುಮಾರ್ ಅವರು, 'ಸಂಸದೀಯ ಸಂಪ್ರದಾಯಕ್ಕೆ ಅನುಗುಣವಾಗಿ ಸಭಾಧ್ಯಕ್ಷರು ಸರ್ವಾನುಮತದಿಂದ ಆಯ್ಕೆಯಾಗುವುದು ಸೂಕ್ತವೆಂದು ಅಭಿಪ್ರಾಯ ಪಟ್ಟ ಕಾರಣ ನನ್ನ ನಾಮಪತ್ರ ವಾಪಸ್ಸು ಪಡೆಯಲಿದ್ದೇನೆ' ಎಂದಿದ್ದಾರೆ.
ಇದೀಗ ಹೊಸ ಸ್ಪೀಕರ್ ರಮೇಶ್ ಕುಮಾರ್ ಅವರ ನೇತೃತ್ವದಲ್ಲೇ ವಿಶ್ವಾಸಮತ ನಿರ್ಣಯ ನಡೆಯಲಿದ್ದು, ಹಂಗಾಮಿ ಸ್ಪೀಕರ್ ಕೆ.ಜಿ.ಬೋಪಯ್ಯ ಅವರು ಸ್ಪೀಕರ್ ಸ್ಥಾನದಿಂದ ಕೆಳಗಿಳಿಯಲಿದ್ದಾರೆ.