ಶಾಮನೂರು ಶಿವಶಂಕರಪ್ಪಗೆ ಡಿಸಿಎಂ ಸ್ಥಾನ ನೀಡಿ: ವೀರಶೈವ ಮಹಾಸಭಾ
ಬೆಂಗಳೂರು, ಮೇ 20: ಕಾಂಗ್ರೆಸ್ನ ಹಿರಿಯ ಮುಖಂಡ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಒತ್ತಾಯಿಸಿದೆ.
ಈ ಕುರಿತು ಅಖಿಲ ಭಾರತ ವೀರಶೈವ ಮಹಾಸಭಾ ಪತ್ರ ಬರೆದಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಲ್ಲಿ ಬೇರೆ ಸಮುದಾಯಗಳಿಗಿಂತಲೂ ಹೆಚ್ಚು ಜನ ವೀರಶೈವ-ಲಿಂಗಾಯತ ಸಮುದಾಯದ ಶಾಸಕರು ಗೆದ್ದಿದ್ದು, ನಮ್ಮ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರಿಗೆ ಉಪ ಮುಖ್ಯಮಂತ್ರಿಸ ಸ್ಥಾನ ಕೊಡಬೇಕು ಎಂದು ಒತ್ತಾಯಿಸಲಾಗಿದೆ.
ಹಿಂದಿನಿಂದಲೂ ವೀರಶೈವ ಮಹಾಸಭಾ ಕಾಂಗ್ರೆಸ್ಗೆ ಬೆಂಬಲ ನೀಡುತ್ತಾ ಬಂದಿದ್ದು, ಕಾಂಗ್ರೆಸ್ನಿಂದ ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ 17 ಜನ ಶಾಸಕರನ್ನು ಗೆಲ್ಲಿಸಿದ್ದೇವೆ ಹಾಗಾಗಿ ನಮ್ಮ ನಮವಿಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಹಾಸಭಾ ಪತ್ರದಲ್ಲಿ ಹೇಳಿದೆ.
ಶಾಮನೂರು ಶಿವಶಂಕರಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನದ ಜೊತೆಗೆ ಕಾಂಗ್ರೆಸ್-ಜೆಡಿಎಸ್ ಪಕ್ಷದಲ್ಲಿನ ವೀರಶೈವ-ಲಿಂಗಾಯತ ಶಾಸಕರ ಪೈಕಿ ಕನಿಷ್ಠ 5 ಜನಕ್ಕಾದರೂ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.