ಬೆಂಗಳೂರು ಉಸ್ತುವಾರಿ ಸಚಿವರು ಯಾರಾಗ್ತಾರೆ? ಗರಿಗೆದರಿದ ಕುತೂಹಲ
ಬೆಂಗಳೂರು, ಜೂನ್ 5: ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜಧಾನಿ ಬೆಂಗಳೂರಿನ ಉಸ್ತುವಾರಿ ಪಟ್ಟ ಯಾರಿಗೆ ದಕ್ಕಲಿದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.
ರಾಜಧಾನಿಯ ಆಡಳಿತ ಉಸ್ತುವಾರಿ ನೋಡಿಕೊಳ್ಳುವ ಬಿಬಿಎಂಪಿಯಲ್ಲಿ ಈಗಾಗಲೇ ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಆಡಳಿತ ಇದ್ದು, ರಾಜ್ಯದಲ್ಲೂ ಕಾಂಗ್ರೆಸ್ ಜಡಿಎಸ್ ಆಡಳಿತವೇ ಅಸ್ತಿತ್ವಕ್ಕೆ ಬಂದಿರುವುದು ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚು ಸಹಕಾರಿಯಾಗಲಿದೆ ಎಂದು ನಿರೀಕ್ಷಿಸಲಾಗುತ್ತಿದೆ.
ಖಾತೆ ಹಂಚಿಕೆ: ಜೆಡಿಎಸ್ ಗೆ ಯಾವ ಖಾತೆ? ಕಾಂಗ್ರೆಸಿಗೆ ಯಾವ ಖಾತೆ?
ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಪಟ್ಟ ಸರ್ವಜ್ಞನಗರದ ಶಾಸಕ ಕೆಜೆ ಜಾರ್ಜ್ ಅವರಿಗೆ ಸಿಕ್ಕಿತ್ತು, ಈ ಹಿಂದೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು ಉಸ್ತುವಾರಿ ಪಟ್ಟ ದಕ್ಕಿಸಿಕೊಳ್ಳುತ್ತಿದ್ದರು. ಆದರೆ ಕಳೆದ ಬಾರಿ ರಾಮಲಿಂಗಾರೆಡ್ಡಿಯವರಿಗೆ ನೆರೆಯ ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ನೀಡಲಾಗಿತ್ತು.
ಹೈಕಮಾಂಡ್ನಿಂದ ನೇರವಾಗಿ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟವನ್ನು ದಕ್ಕಿಸಿಕೊಳ್ಳಲು ಕೆ.ಜೆ. ಜಾರ್ಜ್ ಯಶಸ್ವಿಯಾಗಿದ್ದರು. ಆದರೆ ಈಸಲ ಜಾರ್ಜ್ ಅವರಿಗೆ ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನ ಲಭಿಸುವುದು ಅನುಮಾನ ಎನ್ನಲಾಗುತ್ತಿದೆ. ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಶಾಸಕರಾದ ರಾಮಲಿಂಗಾರೆಡ್ಡಿ, ಕೆಜೆ ಜಾರ್ಜ್, ಕೃಷ್ಣ ಬೈರೇಗೌಡ, ಎಂ ಕೃಷ್ಣಪ್ಪ, ದಿನೇಶ್ ಗುಂಡೂರಾವ್ ಮತ್ತಿತರೆ ಹಿರಿಯ ಶಾಸಕರು ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ.
ಈ ಪೈಕಿ ಕೆಲ ಹಿರಿಯ ಶಾಸಕರು ಸಚಿವರಾಗುವುದು ಅನುಮಾನ ಎನ್ನಲಾಗುತ್ತಿದೆ. ಹೀಗಾಗಿ ಈ ಬಾರಿಯೂ ಕೆ.ಜೆ ಜಾರ್ಜ್ ಹಾಗೂ ರಾಮಲಿಂಗಾರೆಡ್ಡಿ ಬೆಂಗಳೂರು ಉಸ್ತುವಾರಿ ಸಚಿವರಾಗುತ್ತಾರೆ ಎನ್ನುವುದು ಅನುಮಾನ. ಈ ಹಿನ್ನೆಲೆಯಲ್ಲಿ ಒಂದು ವೇಳೆ ಜೆಡಿಎಸ್ ಬೆಂಗಳೂರಿನಿಂದ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ ನೀಡಿದಲ್ಲಿ ಆಗ ಬೆಂಗಳೂರು ಉಸ್ತುವಾರಿ ಪಟ್ಟ ಜೆಡಿಎಸ್ ಗೆ ಹೋಗಬಹುದು. ಮಹಾಲಕ್ಷ್ಮೀ ಲೇಔಟ್ ಶಾಸಕ ಗೋಪಾಲಯ್ಯ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದು ಅದೇ ಕ್ಷೇತ್ರದಿಂದ ಎರಡನೇ ಬಾರಿ ಆಯ್ಕೆಯಾಗಿದ್ದಾರೆ.
ಈಗಾಗಲೇ ಬಿಬಿಎಂಪಿಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಇರುವುದರಿಂದ ಸರಿಸುಮಾರು 8 ಸಾವಿರ ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿ ಪ್ರಗತಿ ಹಂತದಲ್ಲಿದೆ. ಹಿಂದಿನ ಸರ್ಕಾರ ಘೋಷಿಸಿದ್ದ ಅನುದಾನದ ಪೈಕಿ ಇನ್ನು ಸರಿಸುಮಾರು ನಾಲ್ಕು ಸಾವಿರ ಕೋಟಿ ರೂಪಾಯಿಗಳ ಕಾಮಗಾರಿಗಳು ಬಾಕಿ ಉಳಿದಿವೆ. ಹೊಸ ಸರ್ಕಾರ ಬೆಂಗಳೂರು ಅಭಿವೃದ್ಧಿಗೆ ಎಷ್ಟು ಪ್ರಾಧಾನ್ಯತೆ ನೀಡುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಅಭಿವೃದ್ಧಿ ಖಾತೆ ಹಾಗೂ ಬೆಂಗಳೂರು ಉಸ್ತುವಾರಿ ಸಚಿವರ ಸ್ಥಾನ ಯಾರಿಗೆ ಸಿಗುತ್ತದೆ ಎನ್ನುವುದರ ಮೇಲೆ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಬೆಂಗಳೂರು ಯಾವ ರೀತಿಯಲ್ಲಿ ಅಭಿವೃದ್ಧಿ ಹೊಂದುತ್ತದೆ ಎನ್ನುವುದು ನಿರ್ಧಾರವಾಗಲಿದೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.