ಬೆಳಗಾವಿಯಲ್ಲಿ ಅಧಿವೇಶನ, ಸಾಲು-ಸಾಲು ಪ್ರತಿಭಟನೆ
ಬೆಳಗಾವಿ, ನ.18 : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ.9ರಿಂದ ಚಳಿಗಾಲದ ಅಧಿವೇಶನ ನಡೆಸುವುದಾಗಿ ಸರ್ಕಾರ ಘೋಷಿಸಿದೆ. ಪ್ರತಿಪಕ್ಷ ಬಿಜೆಪಿ ಮತ್ತು ಹಲವು ಸಂಘಟನೆಗಳು ಅಧಿವೇಶನದ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲು ಸಜ್ಜಾಗಿವೆ. ಸೌಧದ ಭದ್ರತೆಗಾಗಿ 5000 ಪೊಲೀಸರನ್ನು ನಿಯೋಜಿಸಲಾಗುತ್ತದೆ.
ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ಭದ್ರತೆಗಾಗಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಬೆಳಗಾವಿ ಪೊಲೀಸ್ ಆಯುಕ್ತ ಎಸ್.ರವಿ ಹೇಳಿದ್ದಾರೆ. ಒಟ್ಟು 5000 ಪೊಲೀಸರನ್ನು ನಿಯೋಜಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಅಧಿವೇಶನದ ಸಂದರ್ಭದಲ್ಲಿ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಇಲಾಖೆ ಕೆಲಸ ಪ್ರಾರಂಭಿಸಿದೆ. ಬೆಳಗಾವಿ ಸೇರಿದಂತೆ ಬೇರೆ ಜಿಲ್ಲೆಗಳಿಂದಲೂ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗುತ್ತದೆ ಎಂದು ರವಿ ತಿಳಿಸಿದ್ದಾರೆ.[ಹತ್ತು ದಿನದ ಅಧಿವೇಶನಕ್ಕೆ 14 ಕೋಟಿ ಖರ್ಚು]
1 ಲಕ್ಷ ಜನರೊಂದಿಗೆ ಪ್ರತಿಭಟನೆ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಬೆಂಗಳೂರಿನಲ್ಲಿ ಹೇಳಿದ್ದಾರೆ. ನವೆಂಬರ್ 20ರಂದು ಬೆಂಗಳೂರಲ್ಲಿ ಪ್ರತಿಭಟನೆ ನಡೆಸಿ, ಡಿಸೆಂಬರ್ 9ರಂದು 1 ಲಕ್ಷ ಜನರು ಬೆಳಗಾವಿಯಲ್ಲಿ ಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ ಎಂದು ಹೇಳಿದ್ದಾರೆ.
ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯಿಸಿ, ರೈತರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಹಲವಾರು ಸಂಘಟನೆಗಳು 10 ದಿನದ ಅಧಿವೇಶನದ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲು ಯೋಜನೆ ರೂಪಿಸಿದ್ದು, ಪೊಲೀಸರು ಅಗತ್ಯ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಅಧಿವೇಶನ ನಡೆಯುವಾಗ ಕಬ್ಬಿಗೆ ಬೆಂಬಲ ಬೆಲೆ ನೀಡಬೇಕೆಂದು ಪ್ರತಿಭಟನೆ ನಡೆಸುತ್ತಿದ್ದ ರೈತ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದ.












Click it and Unblock the Notifications