671 ಕೋಟಿ ರೂ.ಕಾಮಗಾರಿಗೆ ಭೂಪೂಜೆ, ಕನ್ನಡಿಗರ ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ
ಬೆಳಗಾವಿ, ಡಿಸೆಂಬರ್ 02: ಕನ್ನಡಿಗರು ವಿಶ್ವದ ಯಾವುದೇ ಮೂಲೆಯಲ್ಲಿರಲಿ, ದೇಶದ ಯಾವುದೇ ರಾಜ್ಯದಲ್ಲಿರಲಿ ಅವರ ಅಭಿವೃದ್ಧಿ ಮತ್ತು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ರಾಜ್ಯದ ನಾಡು-ನುಡಿ ಅಭಿವೃದ್ಧಿಪಡಿಸುವುದು ಸರ್ಕಾರದ ಸಂಕಲ್ಪವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಸಂನ್ಮೂಲ ಇಲಾಖೆ, ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ರಾಮದುರ್ಗದಲ್ಲಿ ಅಂದಾಜು ರೂ. 671.28 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಿ ಬೊಮ್ಮಾಯಿ ಮಾತನಾಡಿದರು.
ಉನ್ನತ ಶಿಕ್ಷಣ ಪರಿಷತ್ತಿಗೆ 10 ಮಂದಿ ನಾಮನಿರ್ದೇಶನ: ಅಶ್ವತ್ಥನಾರಾಯಣ
ನವ ಕರ್ನಾಟಕ ನಿರ್ಮಿಸಲು ಎಲ್ಲರು ಕೈಜೋಡಿಸಬೇಕು. ಸುಮಾರು 2,739 ಕೋಟಿ ರೂ.ಗಳ ಅನುದಾನ ಇಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಮಾಡಿ ರಾಮದುರ್ಗ ಕ್ಷೇತ್ರವನ್ನು ಅಭಿವೃದ್ಧಿ ಶೀಲ ಕ್ಷೇತ್ರವನ್ನಾಗಿ ಮಾಡಲಾಗಿದೆ. ನೀರಾವರಿ, ಮೂಲಭೂತ ಸೌಕರ್ಯ, ವಿದ್ಯುತ್, ಶಿಕ್ಷಣ, ಆಸ್ಪತ್ರೆ, ಬ್ಯಾರೇಜ್ ನಿರ್ಮಾಣ, ಬೃಹತ್ ನೀರಾವರಿ ಯೋಜನೆ ಸೇರಿದಂತೆ ಅಭಿವೃದ್ಧಿ ಕೆಲಸಗಳು ಪ್ರಗತಿಯಲ್ಲಿವೆ ಎಂದರು.
ಗಡಿಭಾಗದ 1800 ಗ್ರಾ.ಪಂ. ಅಭಿವೃದ್ಧಿ
ಸರ್ಕಾರ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಚಿಂತನೆ ನಡೆಸಿದೆ. ರಾಜ್ಯದ ಮಧ್ಯ ಭಾಗದಿಂದ ಹಿಡಿದು ಗಡಿಭಾಗದವರೆಗೆ ಕೆಲ ಯೋಜನೆಗಳ ಜಾರಿಗೆ ಮುಂದಾಗಿದೆ. ಕಲ್ಯಾಣ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ಬೆಳಗಾವಿ ಹಾಗೂ ಬಿಜಾಪುರ ಜಿಲ್ಲೆಗಳ ಗಡಿ ಭಾಗದ ಗ್ರಾಮಗಳಲ್ಲಿ 2 ನೂತನ ಕಾರ್ಯಕ್ರಮ ರೂಪಿಸಿದೆ.
ಗಡಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರ, ತಮಿಳುನಾಡು, ಕೇರಳ ಗೋವಾ ಹಾಗೂ ತೆಲಂಗಾಣ ರಾಜ್ಯದ ಗಡಿಭಾಗದಲ್ಲಿರುವ ರಾಜ್ಯದ ಜಿಲ್ಲೆಗಳಲ್ಲಿ 1,800 ಗ್ರಾಮ ಪಂಚಾಯತಿಗಳ ಪೂರ್ಣ ಅಭಿವೃದ್ಧಿ ಕಾರ್ಯ ಮಾಡಲಾಗುವುದು. ಗಡಿಯಲ್ಲಿನ ರಸ್ತೆಗಳ ಸುಧಾರಣೆ ಕ್ರಮ ವಹಿಸಲಾಗಿದೆ. ಇದೇ ಭಾಗದಲ್ಲಿ ಪ್ರಧಾನಮಂತ್ರಿಗಳ ಜಲ್ ಜೀವನ್ ಮಿಷನ್ ಯೋಜನೆಯಡಿ ಈ ವರ್ಷ ಕುಡಿಯುವ ನೀರು ಒದಗಿಸಲಾಗುವುದು ಎಂದು ತಿಳಿಸಿದರು.
ಗಡಿಭಾಗದ ಶಾಲೆಗಳ ಅಭಿವೃದ್ಧಿಗೆ 100 ಕೋಟಿ: ಸಿಎಂ
ಗಡಿಯಾಚೆ ಇರುವವರು ಕನ್ನಡ ಶಾಲೆಗಳನ್ನು ಅಲ್ಲಿನ ರಾಜ್ಯ ಸರ್ಕಾರ ಕಡೆಗಣಿಸಿರುವುದರಿಂದ ಮೂಲಸೌಕರ್ಯ ಕಲ್ಪಿಸುವುದು ಸಾಧ್ಯವಾಗಿರುವುದಿಲ್ಲ. ಹೀಗಾಗಿ ಅಲ್ಲಿನ ಕನ್ನಡ ಶಾಲೆಗಳ ಅಭಿವೃದ್ಧಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಇದೇ ವರ್ಷ 100 ಕೋಟಿ ರೂ. ವ್ಯಯಿಸಲಾಗುವುದು. ಗೋವಾದಲ್ಲಿ 10ಕೋಟಿ ರೂ.ನಲ್ಲಿ 'ಕನ್ನಡ ಭವನ' ನಿರ್ಮಾಣ ಮಾಡಲಾಗುವುದು.
ಸೋಲಾಪುರ ಹಾಗೂ ಕಾಸರಗೋಡಿನಲ್ಲಿ ನಿರ್ಮಿಸಲಾಗುವುದು.
ರಾಜ್ಯದ ವ್ಯಾಪ್ತಿ ಧಾರ್ಮಿಕ ಕ್ಷೇತ್ರಗಳಾದ ಪಂಡರಾಪುರ, ತುಳಜಾಪುರ, ಶ್ರೀಶೈಲ, ಅಯ್ಯಪ್ಪ ದೇವಾಲಯಗಳಲ್ಲಿ ಯಾತ್ರಿ ನಿವಾಸ ನಿರ್ಮಿಸಲು ಅನುಮತಿ ನೀಡಲಾಗಿದೆ. ಕನ್ನಡಿಗರ ಹಿತ ಚಿಂತನೆ, ರಕ್ಷಣೆ ಹಾಗೂ ಅಭಿವೃದ್ಧಿ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ವಿಶ್ವದ ಯಾವುದೇ ಭಾಗದಲ್ಲಿರಲಿ, ಭಾರತದ ಯಾವುದೇ ರಾಜ್ಯದಲ್ಲಿರಲಿ ಅವರ ಅಭಿವೃದ್ಧಿ, ಹಿತಿ ಕಾಯಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.
ತಡೆಗೋಡೆಗೆ 120 ಕೋಟಿ ರೂ. ಅನುಮೋದನೆ
ಕೋವಿಡ್ ಕಾಲದಲ್ಲಿ ಅಭಿವೃದ್ಧಿ ಕೆಲಸಗಳು ನಿಂತಿಲ್ಲ. 75 ವರ್ಷದಲ್ಲಿ ಆಗದಿರುವ ಅಭಿವೃದ್ಧಿ 2 ವರ್ಷದಲ್ಲಿ ಆಗಿದೆ.
ದುಡಿಯುವ ವರ್ಗಕ್ಕೆ ವಿಶೇಷ ಸವಲತ್ತುಗಳನ್ನು ಒದಗಿಸಿದ್ದೇವೆ. ರಾಮದುರ್ಗ ತಾಲ್ಲೂಕಿನ ಕೆಲ ಗ್ರಾಮಗಳು ಪದೇ ಪದೇ ಪ್ರವಾಹದಿಂದ ಬಾಧಿತಗೊಳ್ಳುವುದನ್ನು ತಪ್ಪಿಸಲು ಮಲಪ್ರಭಾ ನದಿತೀರದಲ್ಲಿ ತಡೆಗೋಡೆ ನಿರ್ಮಿಸಲು ಸರ್ಕಾ ಮುಂದಾಗಿದೆ. ಅದಕ್ಕಾಗಿ 120 ಕೋಟಿ ರೂ.ಗಳಿಗಿಂತ ಹೆಚ್ವು ಅನುದಾನವನ್ನು ಅನುಮೋದಿಸಿ ಕಾಮಗಾರಿಗೆ ಅಡಿಗಲ್ಲು ಹಾಕಲಾಗಿದೆ. ಶಾಶ್ವತವಾಗಿ ಊರುಗಳನ್ನು ಉಳಿಸುವ ಕೆಲಸವನ್ನು ಶಾಸಕರು ಮಾಡಿದ್ದಾರೆ ಎಂದು ಶ್ಲಾಘಿಸಿದರು.
ಶಾಸಕರ ಒತ್ತಡ ಮೇರೆಗೆ ಏತ ನೀರಾವರಿ ವಂಚಿತ 19 ಗ್ರಾಮಗಳ ಕೆರೆ ತುಂಬಿಸುವ ಯೋಜನೆ ಜಾರಿಗೆ ತರಲಾಗುವುದು. ಅಷ್ಟು ಕೆರೆ ತುಂಬಿಸುವ ಯೋಜನೆಗೆ ಕೂಡಲೇ ಡಿಪಿಆರ್ ತಯಾರಿಸಿ ಮುಂದಿನ ಬಜೆಟ್ ನಲ್ಲಿ ಅನುದಾನ ಮೀಸಲಿಡಲಿದ್ದೇವೆ ಎಂದರು.
ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ವಿಶೇಷ ಯೋಜನೆ
ರಾಜ್ಯದ ಅತೀ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಕರ್ನಾಟಕ ಕಿರೀಟವಿದ್ದಂತೆ. ಈ ಜಿಲ್ಲೆಯ ನೀರಾವರಿ, ಕೈಗಾರಿಕೋದ್ಯಮ, ಕೃಷಿ ಅಭಿವೃದ್ಧಿಗೆ ಸರ್ಕಾರ ನೆರವು ನೀಡಲಿದೆ. ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಮುಂಬರುವ ದಿನಗಳಲ್ಲಿ ಸರ್ಕಾರ ವಿಶೇಷ ಯೋಜನೆ ರೂಪಿಸಲಿದ್ದೇವೆ.
ಹತ್ತು ಲಕ್ಷಕ್ಕೂ ಅಧಿಕ ಮಕ್ಕಳಿಗೆ 600 ಕೋಟಿ ರೂ.ಶಿಷ್ಯವೇತನ, ಇದೇ ರೀತಿ ಕೃಷಿ ಕೂಲಿಕಾರರು, ಮೀನುಗಾರರು, ಚಾಲಕರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ ವಿಸ್ತರಿಸಲಾಗಿದೆ .ಎಲ್ಲ ಸಮುದಾಯಗಳಿಗೆ ಸರಕಾರಿ ಸೌಲಭ್ಯಗಳನ್ನು ಒದಗಿಸುವ ಮೂಲಕ ಸಾಮಾಜಿಕ ನ್ಯಾಯ ನೀಡಿದ್ದೇವೆ. 20 ಕುರಿ ಮತ್ತು 1ಮೇಕೆಯಂತೆ 20 ಸಾವಿರ ಕುರಿಗಾಹಿಗಳ ಸಂಘಗಳ ಸಹಾಯಾರ್ಥದ ಯೋಜನೆಗೆ 354 ಕೋಟಿ ರೂ. ನೀಡಲಾಗುತ್ತಿದೆ ಎಂದು ಅವರು ವಿವರಿಸಿದರು.
ಶಿಕ್ಷಣ, ಆರೋಗ್ಯ, ಉದ್ಯೋಗಕ್ಕೆ ಆದ್ಯತೆ
ಸರ್ಕಾರ ಕಾಯಕ, ಸ್ತ್ರೀ ಸಾಮರ್ಥ್ಯ , ವಿವೇಕಾನಂದ ಯುವಶಕ್ತಿ ಯೋಜನೆ ಮೂಲಕ ಎಲ್ಲ ವರ್ಗದ ಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸರಕಾರ ನೆರವು ನೀಡುತ್ತಿದೆ. ವಿವೇಕ ಯೋಜನೆಯಡಿ 8,000 ಶಾಲಾ ಕೊಠಡಿ ನಿರ್ಮಾಣ, 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ನಮ್ಮ ಕ್ಲಿನಿಕ್ ನಿರ್ಮಾಣ, ಆರೋಗ್ಯ ಸೌಲಭ್ಯ ಹೆಚ್ಚಳದಂತಹ ಅನೇಕ ಜನಪರ ಕೆಲಸ ಮಾಡಲಾಗಿದೆ. ಪ್ರಜಾಪ್ರಭುತ್ವ ಎಂದರೆ ಮತ ಹಾಕುವುದು ಮಾತ್ರವಲ್ಲ. ದೇಶ ಕಟ್ಟುವುದರಲ್ಲಿ ಸರ್ವರ ಪಾಲ್ಗೊಳ್ಳುವಿಕೆಯು ಪ್ರಜಾಪ್ರಭುತ್ವದ ಶಕ್ತಿಯಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಚಿವರಾದ ಶಶಿಕಲಾ ಜೊಲ್ಲೆ, ಸಿ.ಸಿ.ಪಾಟೀಲ, ಮುರುಗೇಶ್ ನಿರಾಣಿ, ಭೈರತಿ ಬಸವರಾಜ್, ಕೆಎಂಎಫ್ ಅಧ್ಯಕ್ಷರಾದ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಮಂಗಳಾ ಅಂಗಡಿ, ಈರಣ್ಣ ಕಡಾಡಿ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಿ.ರಾಜೀವ, ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾರುತಿ ಅಷ್ಟಗಿ, ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ಹನುಮಂತ ನಿರಾಣಿ, ಶಾಸಕರಾದ ಅನಿಲ್ ಬೆನಕೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ಮತ್ತಿತರರು ಉಪಸ್ಥಿತರಿದ್ದರು.