ಬೆಳಗಾವಿ; ಸ್ವಾತಂತ್ರ್ಯ ಸಂಗ್ರಾಮ ಅಮೃತ ಮಹೋತ್ಸವಕ್ಕೆ ಮೋದಿ ಚಾಲನೆ
ಬೆಳಗಾವಿ, ಮಾರ್ಚ್ 05: ದೇಶದ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಮಹತ್ವ ಸಾರುವ 'ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ' ವರ್ಷಾಚರಣೆ ಅಂಗವಾಗಿ ದೇಶದ 75 ಸ್ಥಳಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕದ 2 ಕಡೆ ಕಾರ್ಯಕ್ರಮಗಳು ನಡೆಯಲಿವೆ.
ಬೆಳಗಾವಿ ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ ಈ ಕುರಿತು ಮಾಹಿತಿ ನೀಡಿದರು. "ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ವರ್ಷಾಚರಣೆ ಅಂಗವಾಗಿ ಕಿತ್ತೂರಿನಲ್ಲಿ ಮಾರ್ಚ್ 12 ರಂದು ಆಯೋಜಿಸಲಾಗುವ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ವರ್ಷಾಚರಣೆ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ವೇದಿಕೆ ಮೂಲಕ ಚಾಲನೆ ನೀಡಲಿದ್ದಾರೆ" ಎಂದರು.
ಅಮೃತ ಮಹೋತ್ಸವದ ವರ್ಷಾಚರಣೆ ಅಂಗವಾಗಿ ದೇಶದ 75 ಸ್ಥಳಗಳ ಪೈಕಿ ಕರ್ನಾಟಕದ ಎರಡು ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ರಾಣಿ ಕಿತ್ತೂರು ಚೆನ್ನಮ್ಮನ ಪಾತ್ರ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಕಿತ್ತೂರು ಕೋಟೆಯ ಆವರಣದಲ್ಲಿ ಅಮೃತ ಮಹೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಅಮೃತ ಮಹೋತ್ಸವದ ವರ್ಷಾಚರಣೆ ಅಂಗವಾಗಿ ಸೈಕಲ್ ಜಾಥಾವನ್ನು ಆಯೋಜನೆ ಮಾಡಲಾಗಿದೆ. ಕಿತ್ತೂರಿನಿಂದ ಬೆಳಗಾವಿ ತನಕ 75 ಜನ ಸೈಕ್ಲಿಸ್ಟ್ ಗಳು ಜಾಥಾವನ್ನು ನಡೆಸಲಿದ್ದಾರೆ. ಮಾರ್ಗದಲ್ಲಿ ಸಿಗುವ ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೂ ಸೈಕ್ಲಿಸ್ಟ್ಗಳು ಭೇಟಿ ಕೊಡಲಿದ್ದಾರೆ.

ವಿವಿಧ ಕಾರ್ಯಕ್ರಮಗಳ ಆಯೋಜನೆ
"ಮುಂದಿನ 75 ವಾರಗಳ ಕಾಲ ಬೆಳಗಾವಿ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು, ಕಂದಾಯ ಹೋಬಳಿ ಕೇಂದ್ರಗಳಲ್ಲಿ ಸ್ವಾತಂತ್ರ್ಯ ಸಂಗ್ರಾಮ, ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಮಹನೀಯರ ಹೋರಾಟ ಮೆಲುಕು ಹಾಕುವ ಮತ್ತು ಸ್ವಾತಂತ್ರ್ಯದ ಮಹತ್ವ ಸಾರುವ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು" ಎಂದು ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ ಹೇಳಿದರು.

ಪ್ರಬಂಧ ಸ್ಪರ್ಧೆ, ಛಾಯಾಚಿತ್ರ ಪ್ರದರ್ಶನ, ಯೋಗ ಶಿಬಿರ
ಮಾರ್ಚ್ 12 ರಂದು ಶಾಲಾ-ಕಾಲೇಜುಗಳಲ್ಲಿ 'ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ' ವಿಷಯಗಳ ಕುರಿತು ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ. ಮುಂದಿನ 75 ವಾರಗಳ ಕಾಲ ಛಾಯಾಚಿತ್ರ ಪ್ರದರ್ಶನ, ಪ್ರಬಂಧ ಸ್ಪರ್ಧೆ, ಯೋಗ ಶಿಬಿರ, ಡಿಜಿಟಲ್ ಪ್ರದರ್ಶನ, ಪಾದಯಾತ್ರೆ ಮುಂತಾದ ಕಾರ್ಯಕ್ರಮಗಳನ್ನು ವಾರಕ್ಕೊಂದರಂತೆ ಹಮ್ಮಿಕೊಳ್ಳಲಾಗುತ್ತದೆ.

ಕೋವಿಡ್ ಮಾರ್ಗಸೂಚಿ ಪಾಲನೆ
ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಘಟ್ಟಗಳನ್ನು ಪರಿಚಯಿಸುವಂತಹ ವಿವಿಧ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲಾಗುತ್ತದೆ. ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಪ್ರಧಾನಿ ಮೋದಿಯಿಂದ ಚಾಲನೆ
ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಮಾತನಾಡಿ, "ಸ್ವಾತಂತ್ರ್ಯೋತ್ಸವದ 75 ವರ್ಷಗಳ ಹಿನ್ನೆಲೆಯಲ್ಲಿ ದೇಶದಾದ್ಯಂತ 75 ಕಡೆಗಳಲ್ಲಿ ಮಾರ್ಚ್ 12ರಂದು ವರ್ಚುವಲ್ ವೇದಿಕೆಯ ಮೂಲಕ ಸಮಾರಂಭ ನಡೆಯಲಿದೆ. ನರೇಂದ್ರ ಮೋದಿ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಲಿದ್ದು, ಎಲ್ಲಾ ರೀತಿಯ ಪೂರ್ವಸಿದ್ಧತೆಗಳನ್ನು ನಡೆಸಲಾಗುತ್ತಿದೆ" ಎಂದರು.












Click it and Unblock the Notifications