ಬೆಳಗಾವಿಗೆ ಕಾನೂನು ಸುವ್ಯವಸ್ಥೆ ಕಾಪಾಡಲು ಎಡಿಜಿಪಿ ತಂಡ
ಬೆಳಗಾವಿ, ಆಗಸ್ಟ್ 28: ಬೆಳಗಾವಿಯ ಪೀರನವಾಡಿಯಲ್ಲಿ ರಾಯಣ್ಣ ಪುತ್ಥಳಿ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಎಡಿಜಿಪಿ ನೇತೃತ್ವದ ಅಧಿಕಾರಿಗಳ ತಂಡವನ್ನು ಕಳುಹಿಸಿಕೊಡಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಳಗಾವಿ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಘಟನೆ ಸಂಬಂಧ ಈಗಾಗಲೇ ಸಭೆ ಮಾಡಿದ್ದಾರೆ. ಸೌಹಾರ್ದಯುತವಾಗಿ ಸಮಸ್ಯೆ ಪರಿಹರಿಸಿಕೊಳ್ಳಲು ತೀರ್ಮಾನ ಕೈಗೊಳ್ಳಲಾಗಿದೆ. ಇಂದು ಅನಿವಾರ್ಯ ಪರಿಸ್ಥಿತಿಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಬೆಳಗಾವಿ ಪೊಲೀಸರ ಜೊತೆ ಮಾತುಕತೆ ನಡೆಸುತ್ತೇನೆ ಎಂದು ಹೇಳಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಎರಡು ಗುಂಪಿನ ಮುಖಂಡರ ಸಭೆ ಮಾಡಿ ಸೌಹಾರ್ದಯುತವಾಗಿ ಈ ಸಮಸ್ಯೆಯನ್ನು ಬಗೆಹರಿಸಬೇಕು. ಸಂಗೊಳ್ಳಿ ರಾಯಣ್ಣ ಹಾಗೂ ಶಿವಾಜಿ ಮಹಾರಾಜ್ ಇಬ್ಬರೂ ದೇಶ ಭಕ್ತರು. ದೇಶ ಭಕ್ತರ ಗೌರವ ಕಾಪಾಡುವ ಕೆಲಸ ಮಾಡುವುದು ನಮ್ಮೆಲ್ಲರ ಕರ್ತವ್ಯ. ಈ ಹಿನ್ನೆಲೆಯಲ್ಲಿ ಇಂದು ಎರಡೂ ಕಡೆಯ ಮುಖಂಡರ ಸಭೆ ನಡೆಸಿ ಸಮಸ್ಯೆಯನ್ನು ಪರಿಹರಿಸುವ ಕೆಲಸ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರ ನೇತೃತ್ವದಲ್ಲಿ ನಡೆಸಲಿದೆ ಎಂದರು.












Click it and Unblock the Notifications