ಲ್ಯಾಪ್ಸ್ ಆದ ಅನುದಾನ ವಾಪಸ್ ಪಡೆಯಲು ಪ್ರಯತ್ನ: ಬೆಳಗಾವಿ ಸಿಇಒ
ಬೆಳಗಾವಿ, ಸೆಪ್ಟೆಂಬರ್ 18: ಬಳಸದೇ ನಷ್ಟವಾದ, ಕಳೆದ ವರ್ಷದ ಜಿಲ್ಲಾ ಪಂಚಾಯಿತಿ ಅನುದಾನವನ್ನು ಮರಳಿ ಪಡೆಯುವ ಕುರಿತು ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸುವುದು ಸೇರಿದಂತೆ ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ದರ್ಶನ ಎಚ್.ವಿ. ಅವರು ತಿಳಿಸಿದರು.
ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ನಷ್ಟವಾಗಿರುವ ಅನುದಾನದ ಬಗ್ಗೆ ಈಗಾಗಲೇ ಮಾಹಿತಿ ಪಡೆದುಕೊಂಡಿದ್ದು, ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು. ಕಳೆದ ವರ್ಷದ ಈ ಅನುದಾನವನ್ನು ಮತ್ತೆ ಒದಗಿಸಲು ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕರಿಸಿ ಸರಕಾರಕ್ಕೆ ಕಳಿಸಬಹುದು. ಆಗ ಮಾತ್ರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬಹುದು ಎಂದರು. ಖಜಾನೆ ಅಧಿಕಾರಿಗಳ ಪ್ರತ್ಯೇಕ ಸಭೆ ಕರೆದು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ತನಿಖೆಗೆ ಸಮಿತಿ ರಚನೆ: ಅನುದಾನ ಲ್ಯಾಪ್ಸ್ ಆಗಿರುವ ಬಗ್ಗೆ ಸಮಗ್ರ ತನಿಖೆಯನ್ನು ನಡೆಸಲು ಉಪ ಕಾರ್ಯದರ್ಶಿಗಳ ನೇತೃತ್ವದ ಮೂರು ಅಧಿಕಾರಿಗಳ ಸಮಿತಿಯನ್ನು ರಚಿಸಲಾಗುವುದು. ಸಮಿತಿಯು ಸಮಗ್ರ ಮಾಹಿತಿಯನ್ನು ಕಲೆ ಹಾಕುವುದರ ಜತೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ನೋಟೀಸ್ ನೀಡಲಿದೆ. ಇದಾದ ಬಳಿಕ ಅಧಿಕಾರಿಗಳ ತಪ್ಪು ಕಂಡುಬಂದರೆ ನಿಯಮಾವಳಿ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಿಇಓ ತಿಳಿಸಿದರು.












Click it and Unblock the Notifications