ಮಹಾ ಪ್ರವಾಹ : ಅಮಿತ್ ಶಾರಿಂದ ಇಂದು ವೈಮಾನಿಕ ಸಮೀಕ್ಷೆ
ಬೆಳಗಾವಿ, ಆಗಸ್ಟ್ 11 : ಮಹಾ ಪ್ರವಾಹದಿಂದಾಗಿ ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಪ್ರವಾಹ ಪರಿಸ್ಥಿತಿ ಬಗ್ಗೆ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಅಮಿತ್ ಶಾ ಭಾನುವಾರ ಬೆಳಗಾವಿ ಮತ್ತು ಬಾಗಲಕೋಟೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಳೆ ಮತ್ತು ಕೃಷ್ಣಾ ನದಿಯಿಂದ ಅಪಾರ ಪ್ರಮಾಣದಲ್ಲಿ ನೀರನ್ನು ಬಿಟ್ಟಿರುವ ಕಾರಣ ಎರಡೂ ಜಿಲ್ಲೆಗಳ ಹಲವು ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿವೆ.
ಬೆಳಗಾವಿಯ ಸಾಂಬ್ರ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅಮಿತ್ ಶಾ ಬಳಿಕ ಹೆಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಮಿತ್ ಶಾ ಜೊತೆ ಪಾಲ್ಗೊಳ್ಳಲಿದ್ದಾರೆ.

ಹಣಕಾಸು ಸಚಿವರು ಬಂದಿದ್ದರು : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ಕೈಗೊಂಡಿದ್ದರು.
ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು, "ಬೆಳಗಾವಿ, ಬಾಗಲಕೋಟೆ ಸೇರಿದಂತೆ ಪ್ರವಾಹ ಬಾಧಿತ ಪ್ರದೇಶಗಳಲ್ಲಿ ಮುಳುಗಿರುವ ಬೆಳೆಗೆ ತಕ್ಷಣವೇ ತಾತ್ಕಾಲಿಕ ಪರಿಹಾರವನ್ನು ನೀಡುವಂತೆ ವಿಮಾ ಕಂಪೆನಿಗಳಿಗೆ ಸೂಚನೆ ನೀಡಲಾಗುವುದು" ಎಂದು ಹೇಳಿದ್ದರು.
"ಬೆಳೆ ವಿಮೆ ಕಂಪನಿಗಳು ಪ್ರವಾಹ ಬಾಧಿತ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿ, ಮುಳುಗಡೆಯಾಗಿರುವ ಬೆಳೆಯ ಸಮೀಕ್ಷೆಗೆ ಮುಂದಾಗದೇ ತಕ್ಷಣವೇ ತಾತ್ಕಾಲಿಕವಾಗಿ ಪರಿಹಾರ ನೀಡಬೇಕು. ಸಮೀಕ್ಷೆ ಹಾಗೂ ಹೆಚ್ಚಿನ ಪರಿಹಾರದ ಬಗ್ಗೆ ನಂತರ ನಿರ್ಧರಿಸಬೇಕು ಎಂದು ಸೂಚನೆ ನೀಡಲಾಗುವುದು" ಎಂದು ತಿಳಿಸಿದ್ದರು.












Click it and Unblock the Notifications