ಬೆಳಗಾವಿಗೆ ಅಮಿತ್ ಶಾ; ಸಮಾವೇಶದಲ್ಲಿ 2 ಲಕ್ಷ ಜನರು ಭಾಗಿ
ಬೆಳಗಾವಿ, ಜನವರಿ 17: ಕರ್ನಾಟಕ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಬಿ ಅಮಿತ್ ಶಾ ಭಾನುವಾರ ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಬಿಜೆಪಿಯ ಆಯೋಜನೆ ಮಾಡಿರುವ ಜನಸೇವಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಸುಮಾರು 2 ಲಕ್ಷ ಜನರು ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಮಧ್ಯಾಹ್ನ ಆಯೋಜಿಸಿರುವ ಜನಸವೇಕ ಸಮಾವೇಶದಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ. ಅಮಿತ್ ಶಾ ಸ್ವಾಗತಕ್ಕೆ ಕುಂದಾನಗರಿ ಸಜ್ಜಾಗಿದೆ. ಬೆಳಗಾವಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮೊದಲು ಅಮಿತ್ ಶಾ ಆಗಮನ ಕಾರ್ಯಕರ್ತರಲ್ಲಿ ಹುರುಪು ತುಂಬಿದೆ.
ಜನಸೇವಕ ಸಮಾವೇಶಕ್ಕಾಗಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಎರಡೂವರೆ ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಅಮಿತ್ ಶಾ ಅವರಿಗೆ ಸ್ವಾಗತ ಕೋರುವ ದೊಡ್ಡ ದೊಡ್ಡ ಬ್ಯಾನರ್ ಹಾಗೂ ಕಟೌಟ್ ಗಳು ರಾರಾಜಿಸುತ್ತಿವೆ. ಪ್ರಮುಖ ವೃತ್ತಗಳಲ್ಲಿ ಬಿಜೆಪಿ ಧ್ವಜಗಳನ್ನು ಕಟ್ಟಲಾಗಿದೆ.

ಉಪ ಚುನಾವಣೆ; ಕೇಂದ್ರ ಸಚಿವರಾಗಿದ್ದ ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಕ್ಷೇತ್ರಕ್ಕೆ ಶೀಘ್ರವೇ ಉಪಚುನಾವಣೆ ಘೋಷಣೆ ಆಗಲಿದೆ. ಇದೀಗ ಅಮಿತ್ ಶಾ ಆಗಮನ ಬಿಜೆಪಿ ಕಾರ್ಯಕರ್ತರ ಉತ್ಸಾಹ ಇಮ್ಮುಡಿಗೊಳಿಸಿದೆ. ಅಮಿತ್ ಶಾ ಸಮಾವೇಶವನ್ನು ಬಿಜೆಪಿ ಶಕ್ತಿ ಪ್ರದರ್ಶನ ಎಂದೇ ಭಾವಿಸಿದೆ.
ಬಿಜೆಪಿ ಸಮಾವೇಶಕ್ಕೂ ಮುನ್ನ ಅಮಿತ್ ಶಾ ಅವರು ವಿಶ್ವೇಶ್ವರಯ್ಯ ನಗರದ ದಿ. ಸುರೇಶ ಅಂಗಡಿ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಸುರೇಶ್ ಅಂಗಡಿ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವಾನ ಹೇಳಲಿದ್ದಾರೆ.
ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಆಕಾಂಕ್ಷಿಗಳು ಅಮಿತ್ ಶಾ ಭೇಟಿ ಮಾಡಲು ತುದಿಗಾಲ ಮೇಲೆ ನಿಂತಿದ್ದಾರೆ. ಬಿಜೆಪಿಯ ರಾಜ್ಯ ಪದಾಧಿಕಾರಿಗಳ ಜೊತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ. ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆಯೂ ಇದೆ.












Click it and Unblock the Notifications