ಮತ್ತೆ ಸಂಪುಟ ವಿಸ್ತರಣೆ; ಬೆಳಗಾವಿಗೆ ಮತ್ತೊಂದು ಸಚಿವ ಸ್ಥಾನ!
ಬೆಳಗಾವಿ, ಜನವರಿ 26: "ಮಾರ್ಚ್ ನಂತರ ಸಂಪುಟ ಪುನಾರಚನೆ ಸಾಧ್ಯತೆ ಇದೆ. ಬೆಳಗಾವಿ ಜಿಲ್ಲೆಗೆ ಮೊತ್ತೊಂದು ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ. ಅಭಯ ಪಾಟೀಲ ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಪ್ರಯತ್ನ ಕೂಡ ಮಾಡುತ್ತಿದ್ದಾರೆ" ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ಮಂಗಳವಾರ 72ನೇ ಗಣರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡಿದರು. ಬಳಿಕ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಚಿಕ್ಕಮಗಳೂರು ಪ್ರವಾಸ ಒಂದು ವಾರದ ಮೊದಲೇ ನಿಗದಿಯಾಗಿತ್ತು. ನನ್ನ ಪ್ರವಾಸದ ಮಾಹಿತಿ ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ಮೊದಲೇ ಕಳುಹಿಸಲಾಗಿತ್ತು" ಎಂದು ಹೇಳಿದರು.

"ಸಂಪುಟ ವಿಸ್ತರಣೆ, ಖಾತೆ ಬದಲಾವಣೆ ಮಾಹಿತಿಯೇ ನನಗಿರಲಿಲ್ಲ. ಆದರೆ ನಮಗೆ ಡ್ಯಾಮೇಜ್ ಆಗುವ ರೀತಿಯಲ್ಲಿ ಮಾಧ್ಯಮಗಳಲ್ಲಿ ವರದಿ ಬಂದವು. ಸಂಪುಟ ವಿಸ್ತರಣೆ ವಿಚಾರದಲ್ಲಿ ಸಿಎಂ ನಿರ್ಧಾರಕ್ಕೆ ಬದ್ಧನಾಗಿದ್ದೇನೆ" ಎಂದು ಸ್ಪಷ್ಟಪಡಿಸಿದರು.
"ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ. ಪ್ರತಿಭಟನೆ ನಡೆಸುವ ಹಕ್ಕು ಎಲ್ಲರಿಗೂ ಇದೆ. ರೈತರ ಸಮಸ್ಯೆಗಳನ್ನು ಪ್ರಧಾನಿ, ಮುಖ್ಯಮಂತ್ರಿಗಳು ಬಗೆಹರಿಸುತ್ತಾರೆ" ಎಂದು ಸಚಿವರು ಹೇಳಿದರು.
"ಭಾರತದ ಕೋವಿಡ್ ವ್ಯಾಕ್ಸಿನ್ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಲಸಿಕೆ ಪಡೆಯಲು ಯಾರೂ ಹಿಂದೇಟು ಹಾಕಬಾರದು. ಕೆಲವರು ಕೊರೊನಾ ಲಸಿಕೆ ಬಗ್ಗೆ ಸುಳ್ಳು ವದಂತಿ ಹಬ್ಬಿಸುತ್ತಿದ್ದಾರೆ. ಭಾರತ ವ್ಯಾಕ್ಸಿನ್ ಬಗ್ಗೆ ಜಾಗತಿಕ ಮಟ್ಟದಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ" ಎಂದರು.
ಬೆಳಗಾವಿಯ ಸಚಿವರು; ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟದಲ್ಲಿ ಬೆಳಗಾವಿ ಜಿಲ್ಲೆಯ ಐವರು ಶಾಸಕರು ಸಚಿವರಾಗಿದ್ದಾರೆ. ಅತಿ ಹೆಚ್ಚು ಸಚಿವರನ್ನು ಹೊಂದಿರುವ ಹೆಗ್ಗಳಿಕೆ ಸಹ ಬೆಳಗಾವಿಯದ್ದಾಗಿದೆ.
ರಮೇಶ್ ಜಾರಕಿಹೊಳಿ, ಉಮೇಶ್ ಕತ್ತಿ, ಶಶಿಕಲಾ ಜೊಲ್ಲೆ, ಲಕ್ಷ್ಮಣ ಸವದಿ ಮತ್ತು ಶ್ರೀಮಂತ ಪಾಟೀಲ್ ಬೆಳಗಾವಿ ಜಿಲ್ಲೆಯನ್ನು ಪ್ರತಿನಿಧಿಸುತ್ತಿದ್ದು, ಎಲ್ಲರೂ ಸಚಿವರು.












Click it and Unblock the Notifications