ಅರುಣ್ ಸಿಂಗ್ಗೆ ಭಾರತದ ಇತಿಹಾಸ ಗೊತ್ತಿಲ್ಲ; ಸತೀಶ್ ಜಾರಕಿಹೊಳಿ
ಬೆಳಗಾವಿ, ಏಪ್ರಿಲ್ 11; "ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಭಾರತದ ಇತಿಹಾಸ ಗೊತ್ತಿಲ್ಲ. ಅವರು ಕರ್ನಾಟಕಕ್ಕೆ ಬರುವ ಮೊದಲು ಬಸವಣ್ಣನವರ ಇತಿಹಾಸ ತಿಳಿದುಕೊಂಡು ಬರಬೇಕು" ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದರು.
ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಕಾಂಗ್ರೆಸ್ ಅಭ್ಯರ್ಥಿ ಹಿಂದೂ ವಿರೋಧಿ" ಎಂಬ ಅರುಣ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟರು. "ಅರುಣ್ ಸಿಂಗ್ ಕರ್ನಾಟಕದಲ್ಲಿ ಕಾಲಿಡಬೇಕಾದರೆ, ಬಸವಣ್ಣನವರ ಇತಿಹಾಸ ತಿಳಿದುಕೊಳ್ಳಬೇಕು. ಯಾವ ರೀತಿಯಾಗಿ ಹೋರಾಟ ಮಾಡಿದ್ದಾರೆ ಎಂಬುವುದನ್ನು ಓದಿಕೊಳ್ಳಬೇಕು" ಎಂದು ಸಲಹೆ ನೀಡಿದರು.
"ಮೌಢ್ಯ ವಿರೋಧಿ ಹೋರಾಟ ಆರಂಭವಾಗಿದ್ದು 6ನೇ ಶತಮಾನದಲ್ಲಿ. ಸತೀಶ್ ಜಾರಕಿಹೊಳಿ ಆರಂಭ ಮಾಡಿದ್ದಲ್ಲ. ಬಸವಣ್ಣನವರು ಮಾಡಿದ್ದು, ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಬರೆದಿದ್ದಾರೆ. ಅವರ ವಿಚಾರಗಳನ್ನು ನಾವು ಪಾಲನೆ ಮಾಡುತ್ತಿದ್ದೇವೆ. ಅರುಣ್ ಸಿಂಗ್ ಏನೇ ಕೇಳಬೇಕಾದರೂ ಅವರನ್ನೇ ಕೇಳಬೇಕು" ಎಂದು ಹೇಳಿದರು.

"ಬಿಜೆಪಿ ಪಕ್ಷದವರಿಗೆ ಉಪಚುನಾವಣೆ ಪ್ರಚಾರದಲ್ಲಿ ಯಾವುದೇ ವಿಷಯಗಳಿಲ್ಲ. ಧರ್ಮ, ಜಾತಿ, ಬಾಂಗ್ಲಾದೇಶ ಅಷ್ಟೇ ಚುನಾವಣೆ ವಿಷಯವಾಗಿವೇ. ಚುನಾವಣೆ ಪ್ರಚಾರಕ್ಕೆ ಬಂದಿದ್ದಾರೆ. ಬಂದು ಏನೋ ಹೇಳಬೇಕು ಅಂತಾ, ಏನು ಬೇಕು ಅದನ್ನು ಮಾತನಾಡುತ್ತಿದ್ದಾರೆ" ಎಂದು ಟೀಕಿಸಿದರು.
ಕೋಮುಗಲಭೆ; "ಕೋಮುಗಲಭೆ ಮಾಡುವವರು ಬಿಜೆಪಿಯವರು, ಅವರಿಂದಲೇ ಆಗುವುದು. ಕಾಂಗ್ರೆಸ್ ನವರಿಂದ ಅಲ್ಲ. ಬಿಜೆಪಿಯ ಯಾವುದೇ ನಾಯಕರು, ರಾಷ್ಟ್ರ ನಾಯಕರು ಬಂದರು ಸಹ ಫಲಿತಾಂಶ ಬದಲಾಯಿಸಲು ಸಾಧ್ಯವಿಲ್ಲ" ಎಂದು ಸತೀಶ್ ಜಾರಕಿಹೊಳಿ ಹೇಳಿದರು.
"ಈಗಾಗಲೇ ಜನರು ಯಾರಿಗೆ ಮತ ಹಾಕಬೇಕು ಎಂಬುದನ್ನು ನಿರ್ಧರಿಸಿದ್ದಾರೆ. ಬೆಳಗಾವಿ ಮತದಾರರ ನಿರ್ಧಾರವನ್ನು ಬದಲಾಯಿಸಲು ಸಾಧ್ಯವಿಲ್ಲ" ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.












Click it and Unblock the Notifications