'ಬೆಳಗಾವಿಗೆ ಅಧಿವೇಶನದ ಹೆಸರಿನಲ್ಲಿ ಮಜಾ ಮಾಡಲು ಬರುವುದೇ?’
Recommended Video

ಬೆಳಗಾವಿ, ಅಕ್ಟೋಬರ್ 26 : 'ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚಿಸಲು ಬೆಳಗಾವಿಯಲ್ಲಿ ಸರ್ಕಾರ ಚಳಿಗಾಲದ ಅಧಿವೇಶನ ನಡೆಸುತ್ತದೆ. ಆದರೆ, ಸಮಗ್ರವಾಗಿ ಚರ್ಚೆ ನಡೆಯುವುದಿಲ್ಲ. ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಹೆಸರಿನಲ್ಲಿ ಸರ್ಕಾರ ಮಜಾ ಮಾಡಲಿಕ್ಕೆ ಬರುತ್ತದೆಯೇ?' ಎಂದು ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಪ್ರಶ್ನಿಸಿದರು.
ಗುರುವಾರ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು, 'ಉತ್ತರ ಕರ್ನಾಟಕದ ಭಾಗದ ಸಮಸ್ಯೆ ಚರ್ಚೆ ಚರ್ಚಿಸಲು ಬೆಳಗಾವಿಯಲ್ಲಿ 10 ದಿನದ ಅಧಿವೇಶನ ನಡೆಸುವ ಬದಲು, 30 ದಿನಗಳ ಕಾಲ ಅಧಿವೇಶನ ನಡೆಸಬೇಕು' ಎಂದು ಒತ್ತಾಯಿಸಿದರು.
'ಬೆಳಗಾವಿಯಲ್ಲಿ 30 ದಿನಗಳ ಕಾಲ ಅಧಿವೇಶನ ನಡೆಸಬೇಕು ಎಂದು ಸ್ಪೀಕರ್ ಕೆ.ಬಿ.ಕೋಳಿವಾಡ ಅವರಿಗೆ ಪತ್ರ ಬರೆದಿದ್ದೇನೆ. ಕಾಂಗ್ರೆಸ್ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ಕಡೆಗಣಿಸಿದೆ. ಈ ಬಾರಿಯ ಅಧಿವೇಶನದಲ್ಲಾದರೂ ಸಮಗ್ರವಾಗಿ ಚರ್ಚೆ ನಡೆಯಬೇಕು' ಎಂದು ಒತ್ತಾಯಿಸಿದರು.
'ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಧ್ವನಿ ಎತ್ತಿದ್ದಕ್ಕಾಗಿ ನನ್ನನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿ. ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಕಾಳಜಿ ಇದೆ. ಅದಕ್ಕಾಗಿ ಜೆಡಿಎಸ್ ಪಕ್ಷ ಸೇರುತ್ತಿದ್ದೇನೆ' ಎಂದು ಎ.ಎಸ್.ಪಾಟೀಲ ನಡಹಳ್ಳಿ ಘೋಷಣೆ ಮಾಡಿದರು.

ರಾಷ್ಟ್ರೀಯ ಪಕ್ಷಗಳ ರಾಜಕೀಯ
'ಕಳಸಾ-ಬಂಡೂರಿ ನಾಲಾ ಜೋಡಣೆ ವಿಚಾರದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ರಾಜಕೀಯ ಮಾಡುತ್ತಿವೆ. ಕುಡಿಯುವ ನೀರು ಕೊಡುವ ಯೋಗ್ಯತೆ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಇಲ್ಲ' ಎಂದು ಎ.ಎಸ್.ಪಾಟೀಲ ನಡಹಳ್ಳಿ ಆರೋಪಿಸಿದರು.

24 ಗಂಟೆಯೊಳಗೆ ಸಮಸ್ಯೆ ಬಗೆಹರಿಸುತ್ತೇವೆ
'ಕಳಸಾ-ಬಂಡೂರಿ ನಾಲಾ ಜೋಡಣೆ ಒಂದು ಸಮಸ್ಯೆಯೇ ಅಲ್ಲ. ಒಂದು ವೇಳೆ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕಳಸಾ ಬಂಡೂರಿ ಸಮಸ್ಯೆಯನ್ನು 24 ಗಂಟೆಯೊಳಗೆ ಬಗೆಹರಿಸುತ್ತೇವೆ' ಎಂದು ನಡಹಳ್ಳಿ ಹೇಳಿದರು.

ಕಾಂಗ್ರೆಸ್ ಅಭಿವೃದ್ಧಿ ಕಡೆಗಣಿಸಿದೆ
'ಬೆಳಗಾವಿಯನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು. ಬೆಳಗಾವಿಯನ್ನು ಬೆಂಗಳೂರಿನಂತೆ ಅಭಿವೃದ್ಧಿ ಮಾಡಬೇಕು. ಆದರೆ, ಕಾಂಗ್ರೆಸ್ ಸರ್ಕಾರ ಯಾವುದೇ ಅಭಿವೃದ್ಧಿ ಮಾಡುತ್ತಿಲ್ಲ' ಎಂದು ಆರೋಪಿಸಿದರು.

ಅಧಿವೇಶನಕ್ಕಾಗಿ ಪಾದಯಾತ್ರೆ
'ಬೆಳಗಾವಿಯಲ್ಲಿ ನ.14ರಿಂದ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷದಿಂದ ನವೆಂಬರ್ 6 ರಿಂದ ರಾಯಚೂರಿನಿಂದ ಬೆಳಗಾವಿ ತನಕ ಸ್ವಾಭಿಮಾನ ಯಾತ್ರೆ ಹಮ್ಮಿಕೊಳ್ಳಗಿದೆ' ಎಂದು ನಡಹಳ್ಳಿ ಹೇಳಿದರು.

ನಡಹಳ್ಳಿ ಜೆಡಿಎಸ್ ಪಕ್ಷಕ್ಕೆ
ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡಿ ಕಾಂಗ್ರೆಸ್ ನಾಯಕರಿಗೆ ಮುಜುಗರ ಉಂಟುಮಾಡಿದ್ದ ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಜೆಡಿಎಸ್ ಪಕ್ಷ ಸೇರುತ್ತಾನೆ ಎಂದು ನಡಹಳ್ಳಿ ಅವರು ಘೋಷಣೆ ಮಾಡಿದರು.












Click it and Unblock the Notifications