ರಮೇಶ್ ಜಾರಕಿಹೊಳಿ ವಿರುದ್ಧ 'ಕೈ' ತಪ್ಪಿದ ಟಿಕೆಟ್; ಸಭೆ ಕರೆದ ನಾಯಕ!
ಬೆಳಗಾವಿ, ಏಪ್ರಿಲ್ 10; ಬೆಳಗಾವಿ ರಾಜಕೀಯದ ಬಗ್ಗೆ ಕರ್ನಾಟಕದ ಮಟ್ಟದಲ್ಲಿ ಸದಾ ಚರ್ಚೆ ಆಗುತ್ತದೆ. ಬಿಜೆಪಿ ಮತ್ತು ಕಾಂಗ್ರೆಸ್ನ ಪ್ರಭಾವಿ ನಾಯಕರು ಇರುವ ಕ್ಷೇತ್ರಗಳು ಬೆಳಗಾವಿಯಲ್ಲಿವೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನಲೆಯಲ್ಲಿ ನಾಯಕರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಂದಿನ ನಡೆ ಬಗ್ಗೆ ಚರ್ಚಿಸಲು ಬೆಂಬಲಿಗರ ಸಭೆ ಕರೆದಿದ್ದಾರೆ.
ಗುರುವಾರ ಕಾಂಗ್ರೆಸ್ ಪಕ್ಷದ 42 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೊಂಡಿತು. ಪಕ್ಷ ಗೋಕಾಕ್ ಕ್ಷೇತ್ರದಲ್ಲಿ ಮಹಾಂತೇಶ್ ಕಡಾಡಿ ಅಭ್ಯರ್ಥಿ ಎಂದು ಘೋಷಣೆ ಮಾಡಿತು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿನಿಧಿಸುವ ಕ್ಷೇತ್ರದಲ್ಲಿ ಅಶೋಕ್ ಪೂಜಾರಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈಗ ಟಿಕೆಟ್ 'ಕೈ' ತಪ್ಪಿರುವ ಕಾರಣ ಅವರು ಮುಂದಿನ ನಡೆ ಬಗ್ಗೆ ತೀರ್ಮಾನ ಕೈಗೊಳ್ಳಬೇಕಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಏಪ್ರಿಲ್ 13ರಂದು ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 20ರ ತನಕ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಮೇ 10ರಂದು ಚುನಾವಣೆ ನಡೆಯಲಿದ್ದು, 13ಕ್ಕೆ ಫಲಿತಾಂಶ ಘೋಷಣೆಯಾಗಲಿದೆ. ಈ ಹಿನ್ನಲೆಯಲ್ಲಿ ಅಶೋಕ್ ಪೂಜಾರಿ ಮುಂದಿನ ನಡೆ ಬಗ್ಗೆ ತೀರ್ಮಾನ ಕೈಗೊಳ್ಳಲು ಬೆಂಬಲಿಗರ ಸಭೆ ನಡೆಸಲು ಮುಂದಾಗಿದ್ದಾರೆ.
ಆಯೋಗದಿಂದ ಸಿಗದ ಒಪ್ಪಿಗೆ; ಅಶೋಕ್ ಪೂಜಾರಿ ಗೋಕಾಕ್ನ ಜ್ಞಾನ ಮಂದಿರದಲ್ಲಿ ಸಭೆ ನಡೆಸಲು ಮುಂದಾಗಿದ್ದರು. ಆದರೆ ಅಲ್ಲಿಗೆ ಭೇಟಿ ನೀಡಿದ ಚುನಾವಣಾ ಅಧಿಕಾರಿಗಳು ಸಭೆ ನಡೆಸಲು ಒಪ್ಪಿಗೆ ನೀಡಿಲ್ಲ. ಈ ಹಿನ್ನಲೆಯಲ್ಲಿ ಗೋಕಾಕ ಸಮುದಾಯ ಭವನದಲ್ಲಿ ಸಭೆ ನಡೆಸಲು ಮುಂದಾಗಿದ್ದಾರೆ. ಒಪ್ಪಿಗೆಗಾಗಿ ಚುನವಣಾ ಅಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ. ಒಪ್ಪಿಗೆ ಸಿಕ್ಕರೆ ಸಂಜೆ ಅಲ್ಲಿಯೇ ಸಭೆ ನಡೆಯಲಿದೆ. ಆದರೆ ನೂರಾರು ಬೆಂಬಲಿಗರು ಅಶೋಕ್ ಪೂಜಾರಿ ಮನೆಗೆ ಆಗಮಿಸುತ್ತಿದ್ದು, ನಾಯಕನ ಜೊತೆ ನಿಂತಿದ್ದಾರೆ.

2021ರಲ್ಲಿ ಅಶೋಕ್ ಪೂಜಾರಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡಿದ್ದರು. "ಗೋಕಾಕ್ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ತವರು ಮನೆಯಾಗಿದೆ. ಅಶೋಕ್ ಪೂಜಾರಿ ಕಾಂಗ್ರೆಸ್ ಸೇರ್ಪಡೆ ಐತಿಹಾಸಿಕ ದಿನವಾಗಿದೆ. 2023ರಲ್ಲಿ ತಾಲೂಕಿನಲ್ಲಿ ಕಾಂಗ್ರೆಸ್ ಬಾವುಟವನ್ನು ಹಾರಿಸೋಣ" ಎಂದು ಡಿ. ಕೆ. ಶಿವಕುಮಾರ್ ಕರೆ ನೀಡಿದ್ದರು. ಆದರೆ ಅಶೋಕ್ ಪೂಜಾರಿಗೆ ಈಗ ಟಿಕೆಟ್ ಸಿಕ್ಕಿಲ್ಲ.
ಪ್ರಭಾವಿ ನಾಯಕ; ಅಶೋಕ್ ಪೂಜಾರಿ ಬೆಳಗಾವಿಯ ಪ್ರಭಾವಿ ನಾಯಕ. 2008 ಮತ್ತು 2013ರ ಚುನಾವಣೆಯಲ್ಲಿ ಅವರು ಜೆಡಿಎಸ್ ಅಭ್ಯರ್ಥಿಯಾಗಿ ರಮೇಶ್ ಜಾರಕಿಹೊಳಿ ವಿರುದ್ಧ ಕಣಕ್ಕಿಳಿದಿದ್ದರು. 2018ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ರಮೇಶ್ ಜಾರಕಿಹೊಳಿ ವಿರುದ್ಧ 75,969 ಮತಗಳನ್ನು ಪಡೆದಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ರಮೇಶ್ ಜಾರಕಿಹೊಳಿ ಬಿಜೆಪಿಗೆ ಬಂದರು. ಉಪ ಚುನಾವಣೆಯಲ್ಲಿ ಅಶೋಕ್ ಪೂಜಾರಿ ಜೆಡಿಎಸ್ ಅಭ್ಯರ್ಥಿಯಾಗಿ ಮತ್ತೆ ಸೋತರು.
ಲಿಂಗಾಯತ ಸಮುದಾಯಕ್ಕೆ ಸೇರಿದ ಅಶೋಕ್ ಪೂಜಾರಿಗೆ ಅಪಾರ ಬೆಂಬಲಿಗರು ಇದ್ದಾರೆ. ಕಳೆದ ಚುನಾವಣೆಯಲ್ಲಿ ಅವರು 75 ಸಾವಿರ ಮತಗಳನ್ನು ಪಡೆದಿದ್ದೇ ಅದಕ್ಕೆ ಸಾಕ್ಷಿ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಬಯಸಿಯೇ ಅವರು ಡಿ. ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದರು. ಆದರೆ ಟಿಕೆಟ್ ಕೈತಪ್ಪಿದ್ದು, ಮುಂದೇನು? ಎಂದು ಚಿಂತನೆ ನಡೆಸುತ್ತಿದ್ದಾರೆ.
ವೃತ್ತಿಯಲ್ಲಿ ವೈದ್ಯರಾಗಿರುವ ಡಾ. ಮಹಾಂತೇಶ್ ಕಡಾಡಿ ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪಡೆಯುವ ಮೂಲಕ ಹಲವರಲ್ಲಿ ಅಚ್ಚರಿ ಮೂಡಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗುವ ಭರವಸೆಯ ಮೇಲೆಯೇ ಅಶೋಕ್ ಪೂಜಾರಿ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಆದರೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಅವರಿಗೆ ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ ಬಳಿಕ ನಿರಾಸೆಯಾಗಿದೆ. ಪಟ್ಟಿ ಪ್ರಕಟವಾದ ದಿನವೇ ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು ಸೋಮವಾರ ಬೆಂಬಲಿಗರ ಸಭೆ ನಡೆಸುತ್ತೇನೆ ಎಂದು ಘೋಷಣೆ ಮಾಡಿದ್ದರು.
ಪಟ್ಟಿ ಬಿಡುಗಡೆ ಬಳಿಕ ಮಾತನಾಡಿದ್ದ ಅವರು. "ಕಾಂಗ್ರೆಸ್ ಟಿಕೆಟ್ ಘೋಷಣೆ ಬಳಿಕ ನನ್ನ ಮೇಲಿದ್ದ ಒತ್ತಡ ಕಡಿಮೆಯಾಗಿದೆ. ಎರಡು ಮೂರು ದಿನಗಳ ಕಾಲ ವಿಶ್ರಾಂತಿ ಪಡೆದು ಬಳಿಕ ನನ್ನ ರಾಜಕೀಯ ನಿಲುವು ಪ್ರಕಟಿಸುತ್ತೇನೆ" ಎಂದು ಹೇಳಿದ್ದರು. ಈ ಮೂಲಕ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸೂಚನೆಯನ್ನು ನೀಡಿದ್ದರು.












Click it and Unblock the Notifications