ಕುಡಚಿಯಲ್ಲಿ ಮತ್ತೆ ಆಶಾ, ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಹಲ್ಲೆ
ಬೆಳಗಾವಿ, ಏಪ್ರಿಲ್ 07: ರಾಜ್ಯದಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಮತ್ತೊಮ್ಮೆ ಹಲ್ಲೆಯಾಗಿದೆ. ಬೆಳಗಾವಿಯ ಕುಡಚಿ ಪಟ್ಟಣದಲ್ಲಿ ಆರೋಗ್ಯ ಮಾಹಿತಿ ಸಂಗ್ರಹಕ್ಕೆ ಹೋದ ಇಬ್ಬರು ಆಶಾ ಕಾರ್ಯಕರ್ತೆಯರು ಹಾಗೂ ಒಬ್ಬರು ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಲಾಗಿದೆ.
ಎರಡು ದಿನಗಳ ಹಿಂದಷ್ಟೇ ಬೆಳಗಾವಿಯ ಕುಡಚಿಯಲ್ಲಿ ನಾಲ್ಕು ಕೊರೊನಾ ವೈರಸ್ ಪ್ರಕರಣಗಳು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಕುಡಚಿ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿತ್ತು. ಹೀಗಾಗಿ ಮಾಹಿತಿ ಸಂಗ್ರಹಕ್ಕೆ ತೆರಳಿದ್ದ ಕಾರ್ಯಕರ್ತೆಯರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.
ರಾಯಬಾಗ ತಾಲೂಕಿನ ಕುಡಚಿ ಪಟ್ಟಣ ಪಂಚಾಯಿತಿ ಹಾಗೂ ನಿಶಾನ್ದಾರ ಗಲ್ಲಿ ಹತ್ತಿರ ಕಾರ್ಯಕರ್ತೆಯರ ಮೊಬೈಲ್ ಕಸಿದುಕೊಂಡು, ಸಂಗ್ರಹಿಸಿದ ಮಾಹಿತಿ ದಾಖಲಾತಿ ಹರಿದು ಹಾಕಿ ಹಲ್ಲೆ ನಡೆಸಲಾಗಿದೆ.

ಸ್ಥಳಕ್ಕೆ ರಾಯಬಾಗ ತಹಶೀಲ್ದಾರ್, ಅಥಣಿ ಡಿವೈಎಸ್ ಪಿ ಭೇಟಿ ನೀಡಿದ್ದಾರೆ. ಈ ನಡುವೆ ಹಲ್ಲೆಕೋರರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯವೂ ಕೇಳಿಬಂದಿದೆ. ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಿದರೆ ಪ್ರಕರಣ ದಾಖಲಿಸಲು ಸಚಿವ ಜಗದೀಶ್ ಶೆಟ್ಟರ್ ಕಟ್ಟುನಿಟ್ಟಿನ ಸೂಚನೆ ಹೊರಡಿಸಿದ್ದಾರೆ.
ಚಿಕ್ಕೋಡಿಯ ಲೋಕೋಪಯೋಗಿ ಇಲಾಖೆಯ ನೌಕರರ ಭವನದಲ್ಲಿ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, "ಕುಡಚಿ ಪಟ್ಟಣವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಿರುವುದರಿಂದ ಆರೋಗ್ಯದ ದೃಷ್ಟಿಯಿಂದ ಎಲ್ಲರ ಮೇಲೆ ನಿಗಾ ಇಡುವ ಅಗತ್ಯತೆ ಇದೆ. ಈ ಬಗ್ಗೆ ಮೊದಲು ಸೂಕ್ತ ತಿಳಿವಳಿಕೆ ನೀಡಬೇಕು. ಆದಾಗ್ಯೂ ಒಪ್ಪದಿದ್ದರೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು" ಎಂದು ನಿರ್ದೇಶನ ನೀಡಿದ್ದಾರೆ.












Click it and Unblock the Notifications