ರಮೇಶ ಜಾರಕಿಹೊಳಿ ವಿರುದ್ಧ ಬಿಜೆಪಿಗರ ಅಸಮಾಧಾನ!
ಬೆಳಗಾವಿ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ?. ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಡೆ ಬಗ್ಗೆ ಹಲವಾರು ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಬೆಳಗಾವಿ, ಮಾರ್ಚ್ 12; ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿಯನ್ನು ಅತಿ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಬೇಕು ಎಂದು ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಬೆಳಗಾವಿ ಬಿಜೆಪಿಯಲ್ಲಿ ಎಲ್ಲವೂ ಸರಿಯಲ್ಲ. ಹಲವಾರು ಬಿಜೆಪಿ ನಾಯಕರು ಬಹಿರಂಗವಾಗಿಯೇ ರಮೇಶ್ ಜಾರಕಿಹೊಳಿ ಕಾರ್ಯ ವೈಖರಿಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಶುಕ್ರವಾರ ರಮೇಶ್ ಜಾರಕಿಹೊಳಿ ಮಾತನಾಡಿ, "ಅಥಣಿಯಲ್ಲಿ ಹಾಲಿ ಶಾಸಕ ಮಹೇಶ್ ಕುಮಟಳ್ಳಿಗೆ ಬಿಜೆಪಿ ಟಿಕೆಟ್ ನೀಡದಿದ್ದರೆ ನಾನೂ ಗೋಕಾಕ್ನಿಂದ ಸ್ಪರ್ಧಿಸಲಾರೆ" ಎಂದು ಹೇಳಿದ್ದರು. ಈ ಹೇಳಿಕೆ ಈ ಬಾರಿಯ ಚುನಾವಣೆಯಲ್ಲಿ ಅಥಣಿಯಲ್ಲಿ ಬಿಜೆಪಿ ಟಿಕೆಟ್ ಯಾರಿಗೆ ಎಂಬ ಪ್ರಶ್ನೆ ಹುಟ್ಟು ಹಾಕಿತ್ತು. ಮಹೇಶ್ ಕುಮಟಳ್ಳಿಗೆ ಟಿಕೆಟ್ ನೀಡಿದರೆ ಲಕ್ಷ್ಮಣ ಸವದಿಗೆ ಟಿಕೆಟ್ ಸಿಗುವುದಿಲ್ಲವೇ? ಎಂಬ ವಿಶ್ಲೇಷಣೆಗಳು ಶುರುವಾದವು.

ಈ ಹೇಳಿಕೆಗೆ ಮಾಜಿ ಸಚಿವ ಲಕ್ಷ್ಮಣ ಸವದಿ, ಅವರ ಪುತ್ರ ಚಿದಾನಂದ ಸವದಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪರೋಕ್ಷವಾಗಿ ರಮೇಶ್ ಜಾರಕಿಹೊಳಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, "ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಂದೆ ಲಕ್ಷ್ಮಣ ಸವದಿ ಅವರು ಅಥಣಿಯಿಂದಲೇ ಸ್ಪರ್ಧಿಸುವುದು ಖಚಿತ" ಎಂದು ಚಿದಾನಂದ ಸವದಿ ಹೇಳಿದ್ದಾರೆ.
"ರಮೇಶ್ ಜಾರಕಿಹೊಳಿಗೆ ಅವರ ಸ್ನೇಹಿತನ ಮೇಲೆ ಅಷ್ಟು ಪ್ರೀತಿ ಇದ್ದರೆ ತಾವು ಪ್ರತಿನಿಧಿಸುತ್ತಿರುವ ಗೋಕಾಕ್ ಕ್ಷೇತ್ರವನ್ನೇ ಬಿಟ್ಟುಕೊಡಲಿ. ನಾವು ಅಥಣಿ ಕ್ಷೇತ್ರ ಬಿಟ್ಟುಕೊಡಲಾರೆವು. ಕಳೆದ 20 ವರ್ಷದಿಂದ ನಮ್ಮ ತಂದೆ ರಾಜಕಾರಣ ಮಾಡುತ್ತಿದ್ದಾರೆ. ಪಕ್ಷಕ್ಕಾಗಿ ದುಡಿದಿದ್ದಾರೆ. ನಾವು ಯಾವುದೇ ಕಾರಣಕ್ಕೂ ಅಥಣಿ ಬಿಟ್ಟುಕೊಡುವ ಮಾತಿಲ್ಲ. ಚುನಾವಣೆಗೆ ನಿಲ್ಲುವುದು ನಿಶ್ಚಿತ. ನಮ್ಮ ತಂದೆ ಹೊರತಾಗಿ ಯಾರಿಗೂ ಟಿಕೆಟ್ ಕೊಡುವಂತಿಲ್ಲ" ಎಂದು ಚಿದಾನಂದ ಸವದಿ ಸ್ಪಷ್ಟಪಡಿಸಿದ್ದಾರೆ.

ಲಕ್ಷ್ಮಣ ಸವದಿ ಟಾಂಗ್; ಮಾಜಿ ಸಚಿವ ಲಕ್ಷ್ಮಣ ಸವದಿ ಸಹ ರಮೇಶ್ ಜಾರಕಿಹೊಳಿಗೆ ಪರೋಕ್ಷ ಟಾಂಗ್ ನೀಡಿದ್ದಾರೆ, "ಒಬ್ಬರ ಕ್ಷೇತ್ರದಲ್ಲಿ ಮತ್ತೊಬ್ಬರು ಹಸ್ತಕ್ಷೇಪ ಮಾಡಬೇಡಿ ಎಂದು ಅಮಿತ್ ಶಾ ಸ್ಪಷ್ಟವಾಗಿ ಹೇಳಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ನಡೆಯಬೇಕಿದೆ. ಅಥಣಿ ಕ್ಷೇತ್ರದ ಜನರು ನಾನು ಸ್ಪರ್ಧೆ ಮಾಡಲಿ ಎಂದು ಹೇಳುತ್ತಿದ್ದಾರೆ. ಪಕ್ಷದ ಹೈಕಮಾಂಡ್ ಏನು ನಿರ್ಧಾರ ಕೈಗೊಳ್ಳಲಿದೆ ನೋಡಬೇಕು" ಎಂದು ಹೇಳುವ ಮೂಲಕ ರಮೇಶ್ ಜಾರಕಿಹೊಳಿ ಅಥಣಿ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಪರೋಕ್ಷವಾಗಿ ಹೇಳಿದ್ದಾರೆ.
ಏನಿದು ಅಥಣಿ ಟಿಕೆಟ್ ವಿವಾದ; ಅಥಣಿಯ ಹಾಲಿ ಶಾಸಕರು ಮಹೇಶ್ ಕುಮಟಳ್ಳಿ. ಆದರೆ 2018ರ ವಿಧಾನಸಭೆ ಚುನಾವಣೆಯಲ್ಲಿ ಮಹೇಶ್ ಕುಮಟಳ್ಳಿ ಅಥಣಿಯಲ್ಲಿ ಕಾಂಗ್ರೆಸ್ನಿಂದ ಕಣಕ್ಕಿಳಿದು ಗೆದ್ದಿದ್ದರು. ಅವರ ಎದುರಾಳಿಯಾಗಿದ್ದ ಬಿಜೆಪಿಯ ಲಕ್ಷ್ಮಣ ಸವದಿ ಸೋಲು ಕಂಡಿದ್ದರು. ಚುನಾವಣೆಯಲ್ಲಿ ಸೋತರು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಸವದಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟದಲ್ಲಿ ಉಪ ಮುಖ್ಯಮಂತ್ರಿ, ಸಾರಿಗೆ ಸಚಿವರಾದರು.
ವಿಧಾನ ಪರಿಷತ್ ಚುನಾವಣೆಗೆ ಲಕ್ಷ್ಮಣ ಸವದಿಗೆ ಟಿಕೆಟ್ ದೊರೆಯಿತು. ಆದರೆ ಸಾರಿಗೆ ಸಂಸ್ಥೆ ನೌಕರರ ಮುಷ್ಕರ ವಿಚಾರವನ್ನು ಅವರು ನಿರ್ವಹಣೆ ಮಾಡಿದ ರೀತಿ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಯಿತು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಬೀಳಿಸಿದ ಮಹೇಶ್ ಕುಮಟಳ್ಳಿ ಅಥಣಿ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾದರು. ಆದ್ದರಿಂದ ಲಕ್ಷ್ಮಣ ಸವದಿ ಕ್ಷೇತ್ರವನ್ನು ಬಿಟ್ಟುಕೊಟ್ಟರು.
ಈಗ ಮತ್ತೆ ಚುನಾವಣೆ ಎದುರಾಗಿದೆ. ಬಿಜೆಪಿ ಲಕ್ಷ್ಮಣ ಸವದಿ ಅಥವ ಮಹೇಶ್ ಕುಮಟಳ್ಳಿ ಇಬ್ಬರನ್ನೂ ಕಡೆಗಣಿಸುವಂತಿಲ್ಲ. ಒಬ್ಬರು ಬಿಜೆಪಿ ಸರ್ಕಾರ ರಚನೆ ಮಾಡಲು ಬೆಂಬಲ ನೀಡಿದವರು, ರಮೇಶ್ ಜಾರಕಿಹೊಳಿ ಆಪ್ತ ಸ್ನೇಹಿತರು. ಮತ್ತೊಬ್ಬರು ಬಿ. ಎಸ್. ಯಡಿಯೂರಪ್ಪ ಆಪ್ತರು ಮಹಾರಾಷ್ಟ್ರದ ಬಿಜೆಪಿ ನಾಯಕರು, ಹೈಕಮಾಂಡ್ ಮಟ್ಟದಲ್ಲಿ ತಮ್ಮದೇ ಆದ ಪ್ರಭಾವ ಹೊಂದಿರುವವರು. ಆದ್ದರಿಂದ, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ತೀರ್ಮಾನ ಕುತೂಹಲಕ್ಕೆ ಕಾರಣವಾಗಿದೆ.












Click it and Unblock the Notifications