ಸುವರ್ಣ ಸೌಧದ ಮುಂದೆ ವೈದ್ಯನ ಆತ್ಮಹತ್ಯೆ ಯತ್ನ
ಬೆಳಗಾವಿ, ಡಿ. 3 : ತುರ್ತು ಸಂದರ್ಭದಲ್ಲಿ ಆಲೋಪತಿ ಔಷಧಿಗಳನ್ನು ಬಳಸಲು ಅನುಮತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂದೆ ಆಯುಷ್ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ ವೈದ್ಯರೊಬ್ಬರು ಪ್ರತಿಭಟನಾ ಸ್ಥಳದಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತುರ್ತು ಸಂದರ್ಭದಲ್ಲಿ ಆಲೋಪತಿ ಔಷಧಿಗಳನ್ನು ಬಳಸಲು ಅನುಮತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಯುಷ್ ವೈದ್ಯರು ಹಾಗೂ ವಿದ್ಯಾರ್ಥಿಗಳು ಕಳೆದ ಆರು ದಿನಗಳಿಂದ ಸುವರ್ಣ ವಿಧಾನಸೌಧದ ಮುಂದೆ ಮುಷ್ಕರ ನಡೆಸುತ್ತಿದ್ದಾರೆ. ಮಂಗಳವಾರ ಸ್ಥಳಕ್ಕೆ ಆರೋಗ್ಯ ಸಚಿವ ಯು.ಟಿ.ಖಾದರ್ ಆಗಮಿಸಬೇಕೆಂದು ವೈದ್ಯರು ಒತ್ತಾಯಿಸುತ್ತಿದ್ದರು ಈ ಸಂದರ್ಭದಲ್ಲಿ ವೈದ್ಯರೊಬ್ಬರು ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ವೈದ್ಯರನ್ನು ಹಿರೆಕೆರೂರಿನ ಡಾ.ಬಾಬು ಮೆನನ್ ಎಂದು ಗುರುತಿಸಲಾಗಿದೆ. ಪ್ರತಿಭಟನೆ ನಡೆಸುತ್ತಿದ್ದ ಇತರ ವೈದ್ಯರು ಬಾಬು ಅವರು ಆತ್ಮಹತ್ಯೆಗೆ ಯತ್ನಿಸಿದ್ದನ್ನು ಗಮನಿಸಿ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಸದ್ಯ ಬಾಬು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೇಡಿಕೆಗಳು : ತುರ್ತು ಸಂದರ್ಭದಲ್ಲಿ ಆಲೋಪತಿ ಔಷಧಿಗಳನ್ನು ಬಳಸಲು ಅನುಮತಿ ನಿಡಬೇಕೆಂಬುದು ಆಯುಷ್ ವೈದ್ಯರ ಪ್ರಮುಖ ಬೇಡಿಕೆ. ಈಗಾಗಲೇ 12 ರಾಜ್ಯಗಳಲ್ಲಿ ಆಯುಷ್ ವೈದ್ಯರಿಗೆ ತುರ್ತು ಸಂದರ್ಭದಲ್ಲಿ ಆಲೋಪತಿ ಔಷಧಿಗಳನ್ನು ಬಳಸಲು ಅನುಮತಿ ನೀಡಿಲಾಗಿದೆ. ಇದೇ ಮಾದರಿಯಲ್ಲಿ ಕರ್ನಾಟಕದಲ್ಳೂ ಅನುಮತಿ ನೀಡಬೇಕು ಎಂದು ಮುಷ್ಕರ ನಿರತ ವೈದ್ಯರು ಒತ್ತಾಯಿಸುತ್ತಿದ್ದಾರೆ.
ಹಲವಾರು ಬಾರಿ ಈ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗಲೂ ಮನವಿ ಮಾಡಿದ್ದೇವೆ ಎಂಬುದು ವೈದ್ಯರು ಹೇಳುತ್ತಿದ್ದಾರೆ. ಸುವರ್ಣ ವಿಧಾನಸೌಧದ ಮುಂದೆ ಆರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ನಮ್ಮೊಂದಿಗೆ ಮಾತುಕತೆ ನಡೆಸಿಲ್ಲ ಎಂದು ವೈದ್ಯರು ಆರೋಪಿಸುತ್ತಿದ್ದಾರೆ.
ನ.27ರಂದು ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಸುವರ್ಣ ಸೌಧದ ಮುಂದೆ ಪ್ರತಿಭಟನೆ ನಡೆಸುವಾಗಲೇ ರೈತ ವಿಠಲ ಅರಭಾವಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಮೃತಪಟ್ಟಿದ್ದರು. (ಕೀಟನಾಶಕ ಸೇವಿಸಿ ಬೆಳಗಾವಿಯಲ್ಲಿ ರೈತ ಆತ್ಮಹತ್ಯೆ)












Click it and Unblock the Notifications