ಬೆಳಗಾವಿ ಉಪ ಚುನಾವಣೆ; ಕಣದಲ್ಲಿ ಬಿಜೆಪಿಯದ್ದೇ ಪ್ರಾಬಲ್ಯ!
ಬೆಳಗಾವಿ, ಮಾರ್ಚ್ 22: ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಜಿಲ್ಲೆಯಲ್ಲಿ ಬಿಜೆಪಿ ಸಾಕಷ್ಟು ಪ್ರಭಾವವನ್ನು ಹೊಂದಿದ್ದು, ಚುನಾವಣಾ ಕಣದಲ್ಲಿ ಬಿಜೆಪಿಯ ಪ್ರಾಬಲ್ಯವೇ ಎದ್ದು ಕಾಣುತ್ತಿದೆ.
ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದಾಗಿ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದೆ. ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಹಲವಾರು ಹೆಸರು ಕೇಳಿ ಬರುತ್ತಿದ್ದು, ಟಿಕೆಟ್ ಯಾರಿಗೆ? ಎಂಬುದು ಖಚಿತವಾಗಿಲ್ಲ.
ಮಾರ್ಚ್ 23ರ ಮಂಗಳವಾರ ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಮಾರ್ಚ್ 30ರ ತನಕ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಏಪ್ರಿಲ್ 4 ನಾಮಪತ್ರ ವಾಪಾಸ್ ಪಡೆಯಲು ಕೊನೆ ದಿನ. ಏಪ್ರಿಲ್ 17ರಂದು ಮತದಾನ ನಡೆಯಲಿದೆ. ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಪ್ರತಿಷ್ಠೆಯ ಪ್ರಶ್ನೆ. ಎರಡೂ ಪಕ್ಷಗಳ ನಡುವೆ ನೇರ ಹಣಾಹಣಿ ನಡೆಯಲಿದೆ. ಕಾಂಗ್ರೆಸ್ನಿಂದ ಸತೀಶ್ ಜಾರಕಿಹೊಳಿ ಅಭ್ಯರ್ಥಿಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

6 ಜನ ಬಿಜೆಪಿ ಶಾಸಕರು
ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 8 ವಿಧಾನಸಭಾ ಕ್ಷೇತ್ರಗಳಿವೆ. ಇವುಗಳಲ್ಲಿ 6 ಕ್ಷೇತ್ರಗಳಲ್ಲಿ ಬಿಜೆಪಿಯ ಶಾಸಕರೇ ಇದ್ದಾರೆ. ಬೆಳಗಾವಿ ಉತ್ತರ, ಬೆಳಗಾವಿ ದಕ್ಷಿಣ, ಗೋಕಾಕ, ಅರಭಾವಿ, ರಾಮದುರ್ಗ, ಸವದತ್ತಿ ಎಲ್ಲಮ್ಮ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರು ಇದ್ದು, ಎಲ್ಲರೂ ಒಟ್ಟಾದರೆ ಗೆಲವು ಕಷ್ಟವೇನಲ್ಲ. ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿಯೂ ಬಿಜೆಪಿ ಬೆಂಬಲಿಗರೇ ಹೆಚ್ಚಾಗಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಬಲಾಬಲವೇನು?
ಬೆಳಗಾವಿ ಗ್ರಾಮೀಣ ಮತ್ತು ಬೈಲಹೊಂಗಲ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ. ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕರಾಗಿರುವ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲೆಯಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದಾರೆ. ಆದ್ದರಿಂದ ಕಾಂಗ್ರೆಸ್ ಪಕ್ಷವೂ ಸಹ ಸಾಕಷ್ಟು ಪ್ರಭಾವವನ್ನು ಹೊಂದಿದೆ.

ಬಿಜೆಪಿ ಅಭ್ಯರ್ಥಿ ಯಾರು?
ಬೆಳಗಾವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಲು ಸಾಕಷ್ಟು ಆಕಾಂಕ್ಷಿಗಳಿದ್ದಾರೆ. ದಿ. ಸುರೇಶ್ ಅಂಗಡಿ ಪುತ್ರಿ, ಸಚಿವ ಜಗದೀಶ್ ಶೆಟ್ಟರ್ ಸೊಸೆ ಶ್ರದ್ಧಾ ಶೆಟ್ಟರ್ ಹೆಸರು ಕೇಳಿ ಬರುತ್ತಿದೆ. ಜಗದೀಶ್ ಶೆಟ್ಟರ್ ಅವರೇ ಕಣಕ್ಕಿಳಿಯಲಿದ್ದಾರೆ ಎಂಬ ಮಾತಿದೆ. ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಸಹ ಟಿಕೆಟ್ಗಾಗಿ ಬೇಡಿಕೆ ಇಟ್ಟಿದ್ದಾರೆ. ಕೇಂದ್ರ ನಾಯಕರು ಅಭ್ಯರ್ಥಿ ಯಾರು? ಎಂದು ತೀರ್ಮಾನ ಮಾಡಲಿದ್ದಾರೆ.
ಕಾಂಗ್ರೆಸ್ನಿಂದ ಸತೀಶ್ ಜಾರಕಿಹೊಳಿ ಅಭ್ಯರ್ಥಿಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ರಮೇಶ್ ಜಾರಕಿಹೊಳಿ ದೂರ
ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಉಪ ಚುನಾವಣೆ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ ಎಂಬ ಮಾತುಗಳಿತ್ತು. ಆದರೆ, ಸಿಡಿ ಪ್ರಕರಣದಿಂದಾಗಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಉಪ ಚುನಾವಣೆ ಉಸ್ತುವಾರಿ ಬೇರೆ ನಾಯಕರ ಹೆಗಲೇರುವ ಸಾಧ್ಯತೆ ಇದೆ. ರಮೇಶ್ ಜಾರಕಿಹೊಳಿ ಉಪ ಚುನಾವಣೆಯಿಂದ ಅಂತರ ಕಾಯ್ದುಕೊಳ್ಳಲಿದ್ದಾರೆಯೇ? ಕಾದು ನೋಡಬೇಕು.












Click it and Unblock the Notifications