ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ; ಬಿಜೆಪಿ ಮಹತ್ವದ ಸಭೆ
ಬೆಳಗಾವಿ, ಆಗಸ್ಟ್ 16; ಕರ್ನಾಟಕ ಬಿಜೆಪಿ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಸಿದ್ಧತೆಯನ್ನು ಬಿರುಸಿನಿಂದ ಮಾಡುತ್ತಿದೆ. ಸೋಮವಾರ ಚುನಾವಣಾ ಅಧಿಸೂಚನೆ ಪ್ರಕಟವಾಗಿದ್ದು,3/9/2021ರಂದು ಮತದಾನ ನಡೆಯಲಿದೆ.
ಮಂಗಳವಾರ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ವಿಶೇಷ ಸಭೆಯನ್ನು ನಡೆಸಿದರು. ಈ ಮೂಲಕ ಚುನಾವಣೆ ಪ್ರಚಾರವನ್ನು ಅಧಿಕೃತವಾಗಿ ಆರಂಭಿಸಿದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಚುನಾವಣೆ ಮೇಲೆ ಹೇಗೆ ಪ್ರಭಾವ ಬೀರಲಿದ್ದಾರೆ? ಎಂದು ಕಾದು ನೋಡಬೇಕಿದೆ.
ಮಹಾನಗರ ಪಾಲಿಕೆ ಚುನಾವಣೆ ಘೋಷಣೆ; ಈಶ್ವರಪ್ಪಗೆ ಅಚ್ಚರಿ
ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಸಚಿವರಾದ ಎಂ. ಗೋವಿಂದ ಕಾರಜೋಳ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಬೆಳಗಾವಿ ಸಂಸದೆ ಮಂಗಲಾ ಸುರೇಶ್ ಅಂಗಡಿ, ಶಾಸಕರಾದ ಅಭಯ್ ಪಾಟೀಲ್ ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಕಲಬುರಗಿ ಮಹಾನಗರ ಪಾಲಿಕೆಗೆ ಚುನಾವಣೆ ಘೋಷಣೆ
ಬೆಳಗಾವಿಯಲ್ಲಿ ಈ ಬಾರಿ ಪಕ್ಷದ ಚಿನ್ಹೆಯ ಆಧಾರದ ಮೇಲೆ ಚುನಾವಣೆ ಎದುರಿಸಲು ಬಿಜೆಪಿ ಬಯಸಿದೆ. ರಾಜ್ಯ ರಾಜಕೀಯ ಒಂದು ರೀತಿಯಾದರೆ ಬೆಳಗಾವಿಯ ರಾಜಕೀಯವೇ ಬೇರೆ ರೀತಿ. ಆದ್ದರಿಂದ ಮಹಾನಗರ ಪಾಲಿಕೆ ಚುನಾವಣೆ ತಯಾರಿಯನ್ನು ಆರಂಭಿಸಲಾಗಿದೆ.
ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಕಲಬುರಗಿ ಪಾಲಿಕೆ ಚುನಾವಣೆ: ನಾಮಪತ್ರ ಸಲ್ಲಿಕೆ ಆರಂಭ
ಕರ್ನಾಟಕ ಬಿಜೆಪಿ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಪಕ್ಷದ ಉಸ್ತುವಾರಿಗಳಾಗಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಶಾಸಕ ಅಭಯ್ ಪಾಟೀಲರನ್ನು ನೇಮಕ ಮಾಡಿದೆ. ಸೋಮವಾರ ಚುನಾವಣಾ ಅಧಿಸೂಚನೆ ಪ್ರಕಟವಾಗಿದೆ. ಆಗಸ್ಟ್ 23ರ ತನಕ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಅವಕಾಶವಿದೆ.
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 58 ವಾರ್ಡ್ಗಳಿವೆ. ಒಟ್ಟು 4,28,364 ಮತದಾರರು ಇದ್ದಾರೆ. ಇವರಲ್ಲಿ 2,13,526 ಪುರುಷರು. 2,14,838 ಮಹಿಳೆಯರು. ಮತದಾನಕ್ಕಾಗಿ ಒಟ್ಟು 402 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ.
ಕಾಂಗ್ರೆಸ್ ತಯಾರಿ ಜೋರು; ಬೆಳಗಾವಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತವರು ಜಿಲ್ಲೆಯಾಗಿದೆ. ಆದ್ದರಿಂದ ಪಾಲಿಕೆಯಲ್ಲಿ ಅಧಿಕಾರ ಹಿಡಿಯಬೇಕು ಎಂದು ಕಾಂಗ್ರೆಸ್ ಸಹ ತಯಾರಿಯನ್ನು ಜೋರಾಗಿ ನಡೆಸುತ್ತಿದೆ.
ಮಾಜಿ ಸಚಿವ ಎಂ. ಬಿ. ಪಾಟೀಲ್, ನಾಸೀರ್ ಹುಸೇನ್, ಹನುಮಂತಯ್ಯರನ್ನು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಉಸ್ತುವಾರಿಯಾಗಿ ಕಾಂಗ್ರೆಸ್ ನೇಮಕ ಮಾಡಿದೆ. ಕಳೆದ ಬಾರಿ ಕಾಂಗ್ರೆಸ್ ಪಾಲಿಕೆ ಮೇಲೆ ಹಿಡಿತ ಸಾಧಿಸಿತ್ತು. ಈ ಬಾರಿಯೂ ಅಧಿಕಾರ ಪಡೆಯಲು ಕಾಂಗ್ರೆಸ್ ತಂತ್ರ ರೂಪಿಸುತ್ತಿದೆ.
"ಪಕ್ಷದ ಚಿನ್ಹೆ ಮೇಲೆ ಚುನಾವಣೆ ಎದುರಿಸಲು ನಮಗೆ ಸೂಚನೆ ಬಂದಿದೆ. ಕೋವಿಡ್ ಇರುವುದರಿಂದ ಚುನಾವಣೆ ಬೇಡ ಎಂದು ಸರ್ಕಾರ ತಿಳಿಸಿದರೂ ಚುನಾವಣೆ ಆಯೋಗ ಚುನಾವಣೆ ನಡೆಸಲು ಮುಂದಾಗಿದೆ. ಹಾಗಾಗಿ ನಾವು ಅನಿವಾರ್ಯವಾಗಿ ಚುನಾವಣೆಗೆ ಸಿದ್ಧತೆ ನಡೆಸಬೇಕಿದೆ" ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ತಮ್ಮ ನಿವಾಸದಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಜೊತೆ ಸತೀಶ್ ಜಾರಕಿಹೊಳಿ ಒಂದು ಸುತ್ತಿನ ಸಭೆಯನ್ನು ನಡೆಸಿದ್ದಾರೆ. "ಕಳೆದ ಅವಧಿಯಲ್ಲೂ ಕಾಂಗ್ರೆಸ್ ಪಾಲಿಕೆಯಲ್ಲಿ ಹಿಡಿತ ಸಾಧಿಸಿತ್ತು. ಈಗಲೂ ಹೆಚ್ಚಿನ ಸ್ಥಾನದಲ್ಲಿ ಗೆಲ್ಲಲು ಪ್ರಯತ್ನ ಮಾಡುತ್ತೇವೆ. ಗೆಲ್ಲುವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡುತ್ತೇವೆ" ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿ ನಾಮಪತ್ರದೊಂದಿಗೆ ಠೇವಣಿ ಇಡಬೇಕು. ಸಾಮಾನ್ಯ ವರ್ಗದವರು 5000 ರೂ. ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಮಹಿಳೆಯರು 2500 ರೂ. ಠೇವಣಿ ಇಡಬೇಕು.
"ಚುನಾವಣಾ ಅಧಿಸೂಚನೆ ಪ್ರಕಟವಾಗಿದೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಿಕೊಂಡು, ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಲಾಗುತ್ತದೆ" ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ ಹೇಳಿದ್ದಾರೆ.