ಮಹಾರಾಷ್ಟ್ರದಲ್ಲಿ ಮಳೆ, ಬೆಳಗಾವಿಯಲ್ಲಿ ಪ್ರವಾಹ, ಕಾಳಜಿ ಕೇಂದ್ರ ಆರಂಭ
ಬೆಳಗಾವಿ, ಜುಲೈ 29: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಕಾರಣ ಬೆಳಗಾವಿಯಲ್ಲಿ ಪ್ರವಾಹ ಉಂಟಾಗಿದೆ. ವಿವಿಧ ತಾಲೂಕುಗಳಲ್ಲಿ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರ ನೆರವಿಗಾಗಿ ಕಾಳಜಿ ಕೇಂದ್ರಗಳನ್ನು ಜಿಲ್ಲಾಡಳಿತ ತೆರೆದಿದೆ.
ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಗೋಕಾಕ್ ನಗರದ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿದರು. ಅತಿವೃಷ್ಟಿ ಹಾಗೂ ನದಿಯ ಹಿನ್ನೀರು ಮನೆಗಳಿಗೆ ನುಗ್ಗಿರುವ ಹಿನ್ನೆಲೆಯಲ್ಲಿ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಗೊಂಡಿರುವ ಕುಟುಂಬಸ್ಥರನ್ನು ಭೇಟಿ ಮಾಡಿ, ಸಂತ್ರಸ್ತರಿಗೆ ಸಂಪೂರ್ಣ ನೆರವು ಕಲ್ಪಿಸುವ ಭರವಸೆ ನೀಡಿದರು.

ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಹಾಗೂ ಕೃಷ್ಣಾ, ಮಲಪ್ರಭಾ ಮತ್ತು ಘಟಪ್ರಭಾ ಸೇರಿದಂತೆ ಎಲ್ಲ ನದಿಗಳ ಒಳಹರಿವು ಹೆಚ್ಚಾಗಿದೆ. ಆದ ಪರಿಣಾಮ ನದಿಪಾತ್ರದ ಅನೇಕ ಗ್ರಾಮಗಳಲ್ಲಿ ಮನೆಗಳಿಗೆ ನೀರು ನುಗ್ಗಿರುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಗೋಕಾಕ್, ಅಥಣಿ, ಕಾಗವಾಡ, ಚಿಕ್ಕೋಡಿ, ಮೂಡಲಗಿ ಹಾಗೂ ನಿಪ್ಪಾಣಿ ತಾಲ್ಲೂಕಿನ ನದಿತೀರದ ಗ್ರಾಮಸ್ಥರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.
ಕಾಳಜಿ ಕೇಂದ್ರದಲ್ಲಿ ಮೂಲ ಸೌಲಭ್ಯ: ಕಾಳಜಿ ಕೇಂದ್ರಗಳಲ್ಲಿ ಕಲ್ಪಿಸಲಾಗಿರುವ ಊಟೋಪಹಾರ ಮತ್ತಿತರ ಮೂಲಸೌಕರ್ಯಗಳನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪರಿಶೀಲಿಸಿದರು. ಗೋಕಾಕ್ ನಗರದ ಸರಕಾರಿ ಮುನ್ಸಿಪಲ್ ಪದವಿಪೂರ್ವ ಕಾಲೇಜಿನಲ್ಲಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು, "ಸರಕಾರವು ಸಂತ್ರಸ್ತರಿಗೆ ಎಲ್ಲ ರೀತಿಯ ನೆರವು ನೀಡುತ್ತಿದ್ದು, ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬಾರದು" ಎಂದು ಹೇಳಿದರು.
ಕಾಳಜಿ ಕೇಂದ್ರದಲ್ಲಿರುವ ಎಲ್ಲರಿಗೂ ಉತ್ತಮಗುಣಮಟ್ಟದ ಊಟೋಪಹಾರ ವ್ಯವಸ್ಥೆ ಕಲ್ಪಿಸಲಾಗಿದ್ದು, ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಕೂಡ ಒದಗಿಸಲಾಗಿರುತ್ತದೆ. ನದಿತೀರದ ಕೆಲವು ಗ್ರಾಮಸ್ಥರು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಗೊಳ್ಳಲು ನಿರಾಕರಿಸುತ್ತಿರುವ ಬಗ್ಗೆ ಪ್ರಸ್ತಾಪಿಸಿದ ಅವರು, ಪ್ರತಿಯೊಬ್ಬರ ಜೀವ ಅಮೂಲ್ಯವಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಾಳಜಿ ಕೇಂದ್ರ ಅಥವಾ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಮನವಿ ಮಾಡಿದರು.
ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದುಕೊಂಡಿದ್ದ ತುಂಬು ಗರ್ಭಿಣಿಯೊಬ್ಬರನ್ನು ಮಾತನಾಡಿಸಿದ ಜಿಲ್ಲಾಧಿಕಾರಿಗಳು, ಕೂಡಲೇ ಆಸ್ಪತ್ರೆಗೆ ದಾಖಲಾಗುವಂತೆ ತಿಳಿಸಿದರು. ಕಾಳಜಿ ಕೇಂದ್ರದಲ್ಲಿ ಸಮಯಕ್ಕೆ ಸರಿಯಾಗಿ ಊಟೋಪಹಾರ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ತಹಶೀಲ್ದಾರರಿಗೆ ಸೂಚನೆ ನೀಡಿದರು.
ಪ್ರತಿ ತಾಲ್ಲೂಕುಗಳಿಗೆ ನಿಯೋಜಿಸಲಾಗಿರುವ ನೋಡಲ್ ಅಧಿಕಾರಿಗಳು ಕೂಡ ಪ್ರತಿದಿನ ತಮ್ಮ ವ್ಯಾಪ್ತಿಯ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಸಂತ್ರಸ್ತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು. ಗೊಡಚಿನಮಲ್ಕಿ ಜಲಪಾತ ಪ್ರದೇಶವನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ನೀರಿನಹರಿವು ಹೆಚ್ಚಾಗಿರುವುದರಿಂದ ಅಗತ್ಯ ಎಚ್ಚರಿಕೆ ವಹಿಸುವಂತೆ ಪೊಲೀಸ್ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗೆ ನಿರ್ದೇಶನ ಕೊಟ್ಟರು.
ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಪ್ರವಾಹ ಪೀಡಿತ, ಮಳೆ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪರಿಶೀಲನೆ ನಡೆಸಿದರು. ತಾಲೂಕಿನ ಕಾಡಂಚಿನ 15 ಗ್ರಾಮಗಳನ್ನು ಪಟ್ಟಿ ಮಾಡಲಾಗಿದ್ದು, ಅವರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಇಲ್ಲವೇ ಅಲ್ಲಿನ ಜನರನ್ನು ಸ್ಥಳಾಂತರಿಸುವ ಕುರಿತು ಯೋಚಿಸಲಾಗುವುದು ಎಂದು ಹೇಳಿದರು.












Click it and Unblock the Notifications