ಬೆಳಗಾವಿ ಉಪ ಚುನಾವಣೆ; ಜಾರಕಿಹೊಳಿ ಕುಟುಂಬದ ಸ್ಪಷ್ಟನೆ
ಬೆಳಗಾವಿ, ಅಕ್ಟೋಬರ್ 14 : "ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ, ಬಿಜೆಪಿ ಅಭ್ಯರ್ಥಿ ಗೆಲುವಿಗಾಗಿ ಕೆಲಸ ಮಾಡುತ್ತೇನೆ" ಎಂದು ಅಮರನಾಥ ಜಾರಕಿಹೊಳಿ ಸ್ಪಷ್ಟನೆ ನೀಡಿದರು.
ಬೆಳಗಾವಿ ಸಂಸದರಾಗಿದ್ದ ಸುರೇಶ್ ಅಂಗಡಿ ಕೋವಿಡ್ ಸೋಂಕಿನಿಂದಾಗಿ ನಿಧನ ಹೊಂದಿದ್ದಾರೆ. ಈಗ ಕ್ಷೇತ್ರದ ಉಪ ಚುನಾವಣೆ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಅದರಲ್ಲೂ ಬಿಜೆಪಿ ಅಭ್ಯರ್ಥಿ ಬಗ್ಗೆ ಚರ್ಚೆಗಳು ಜೋರಾಗಿವೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮೇಲೆ ಪ್ರಭಾಕರ್ ಕೋರೆ ಕಣ್ಣು
ಅಮರನಾಥ ಜಾರಕಿಹೊಳಿ ಬಿಜೆಪಿಯಿಂದ ಉಪ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಸಚಿವ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ ಜಾರಕಿಹೊಳಿ ಈ ಸುದ್ದಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.
ಬೆಳಗಾವಿ: ನಾನು ಮಂತ್ರಿಯಾಗಲು ದೇವೇಂದ್ರ ಫಡ್ನವಿಸ್ ಆಶೀರ್ವಾದವಿದೆ
ರಮೇಶ್ ಜಾರಕಿಹೊಳಿ ಬಿಜೆಪಿ ಸೇರಿದ ಮೇಲೆ ಬೆಳಗಾವಿ ರಾಜಕೀಯದ ಚಿತ್ರಣ ಬದಲಾಗಿದೆ. ಯಡಿಯೂರಪ್ಪ ಸಂಪುಟದಲ್ಲಿ ಜಲಸಂಪನ್ಮೂಲ ಸಚಿವರಾಗಿರುವ ಅವರು ತಮ್ಮ ಪುತ್ರನನ್ನು ಉಪ ಚುನಾವಣೆ ಕಣಕ್ಕಿಳಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು.
ಬೆಳಗಾವಿ: ದಿ.ಸುರೇಶ ಅಂಗಡಿ ಕುಟುಂಬಕ್ಕೆ ರಾಜ್ಯಪಾಲ ವಜುಭಾಯ್ ವಾಲಾ ಸಾಂತ್ವನ
ಜವಾಬ್ದಾರಿ ನನ್ನ ಮೇಲಿದೆ
"ನಾನು ಕೆಲವು ದಿನಗಳ ಹಿಂದೆ ಬಿಜೆಪಿ ಸೇರಿದ್ದೇನೆ. ಪಕ್ಷದ ಕಾರ್ಯಕರ್ತನಾಗಿ ಸಾಕಷ್ಟು ಕೆಲಸ ಮಾಡುವ ಮನಸ್ಸಿದೆ. ತಂದೆ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಗೋಕಾಕ್ ಕ್ಷೇತ್ರದ ಜನರ ಸಮಸ್ಯೆ ಆಲಿಸಿ ಬಗೆಹರಿಸುವ ಜವಾಬ್ದಾರಿ ನನ್ನ ಮೇಲಿದೆ" ಎಂದು ಅಮರನಾಥ ಜಾರಕಿಹೊಳಿ ಹೇಳಿದ್ದಾರೆ.
ಬಿಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು
"ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರು ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದಾರೆ. ಅವುಗಳನ್ನು ಮುಂದುವರೆಸಿಕೊಂಡು ಹೋಗಲು ಬಿಜೆಪಿ ಅಭ್ಯರ್ಥಿಯನ್ನು ಬಹುಮತದಿಂದ ಆಯ್ಕೆ ಮಾಡುವ ಜವಾಬ್ದಾರಿ ಕ್ಷೇತ್ರದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ" ಎಂದು ಅಮರನಾಥ ಜಾರಕಿಹೊಳಿ ಹೇಳಿದ್ದಾರೆ.
ಗೆಲುವಿಗಾಗಿ ದುಡಿಯುತ್ತೇನೆ
"ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳನ್ನು ನೋಡಿದ್ದೇನೆ. ನನಗೆ ರಾಜಕೀಯದಲ್ಲಿ ಬೆಳೆಯಲು ಸಾಕಷ್ಟು ಅವಕಾಶಗಳಿವೆ. ಅಭ್ಯರ್ಥಿ ಆಗುವ ಮನಸ್ಸು ನನ್ನಲ್ಲಿ ಇಲ್ಲ. ಎಲ್ಲಾ ಕಾರ್ಯಕರ್ತರ ಜೊತೆ ಬಿಜೆಪಿ ಅಭ್ಯರ್ಥಿ ಗೆಲುವಿಗಾಗಿ ದುಡಿಯುತ್ತೇನೆ" ಎಂದು ಅಮರನಾಥ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಹಲವು ಹೆಸರುಗಳು ಕೇಳಿ ಬರುತ್ತಿವೆ
ಸುರೇಶ್ ಅಂಗಡಿ ಅವರ ನಿಧನದಿಂದಾಗಿ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದೆ. ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಸೇರಿದಂತೆ ಹಲವು ಹೆಸರುಗಳು ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಕೇಳಿ ಬರುತ್ತಿದೆ.