ಬೆಳಗಾವಿಯಲ್ಲಿ ಕಾಂಗ್ರೆಸ್ಗೆ ಜಯ: ಸತೀಶ್ ಜಾರಕಿಹೊಳಿ ಕಾಲಿಗೆ ನಮಸ್ಕರಿಸಿದ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ ಡಿಸೆಂಬರ್ 14: ಬೆಳಗಾವಿ ವಿಧಾನ ಪರಿಷತ್ ಚುನಾವಣೆಯಲ್ಲಿ ಸಹೋದರ ಚೆನ್ನರಾಜ್ ಹಟ್ಟಿಹೊಳಿ ಗೆದ್ದ ನಂತರ ಲಕ್ಷ್ಮಿ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ಅವರ ಕಾಲಿಗೆ ನಮಸ್ಕರಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನೊಂದಿಗಿನ ಪ್ರಬಲ ಪೈಪೋಟಿ ನಡುವೆ ಬಿಜೆಪಿ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಆದರೆ ವಿಧಾನಪರಿಷತ್ ಚುನಾವಣೆಯಲ್ಲಿ ಎಲ್ಲರ ಕುತೂಹಲದ ಕೇಂದ್ರ ಬಿಂದುವಾಗಿದ್ದು ಬೆಳಗಾವಿ ಅಖಾಡದಲ್ಲಿ ಕಾಂಗ್ರೆಸ್ ಜಯ ಸಾಧಿಸಿದೆ. ಪಕ್ಷಾಂತರ ಹಾಗೂ ವೈಯಕ್ತಿಕ ಆರೋಪಗಳನ್ನು ಎದುರಿಸುತ್ತಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕೊನೆಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಜಯ ಸಾಧಿಸಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚೆನ್ನರಾಜ ಹಟ್ಟಿಹೊಳಿ ಗೆಲುವುದು ಸಾಧಿಸಿದ್ದಾರೆ. ಇದರಿಂದಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚೆನ್ನರಾಜ ಹಟ್ಟಿಹೊಳಿ ಅವರನ್ನು ಸೋಲಿಸಲೇಬೇಕೆಂದು ಪಣತೊಟ್ಟಿದ್ದ ರಮೇಶ್ ಜಾರಕಿಹೊಳಿಗೆ ಭಾರೀ ಮುಖಭಂಗವಾಗಿದೆ. ಮತ್ತೊಂದೆಡೆ ವಿಧಾನ ಪರಿಷತ್ ಚುನಾವಣೆಯಲ್ಲಿ ಸಹೋದರ ಚೆನ್ನರಾಜ ಗೆಲುವಿನ ಬಳಿಕ ಲಕ್ಷ್ಮೀ ಹೆಬ್ಬಾಳ್ಕರ್ ರಮೇಶ್ ಜಾರಕಿಹೊಳಿ ಸಹೋದರ ಸತೀಶ್ ಜಾರಕಿಹೊಳಿ ಕಾಲಿಗೆ ನಮಸ್ಕರಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, "ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಬೆಳಗಾವಿಯಲ್ಲಿ ಗೆದ್ದಿದ್ದಾರೆ. ಪ್ರತಿಯೊಬ್ಬರೂ ಹಗಲು ರಾತ್ರಿ ಶ್ರಮಿಸಿದ್ದಾರೆ. ತಮ್ಮದೇ ಪಕ್ಷ ಎಂಬಂತೆ ದುಡಿದಿದ್ದಾರೆ. ಇದರಿಂದ ನಮಗೆ ಸಂತೋಷವಾಗಿದೆ. ಕಾಂಗ್ರೆಸ್ ಪಕ್ಷ ಗೆಲ್ಲಲೇಬೇಕು ಎಂದು ಶ್ರಮದ ಫಲಿತಾಂಶ ಇದಾಗಿದೆ" ಎಂದಿದ್ದಾರೆ. ಜೊತೆಗೆ ರಮೇಶ್ ಜಾರಕಿಹೊಳಿ ಈ ಹಿಂದೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸೋಲಿಸುವುದೇ ನನ್ನ ಗುರಿ ಎಂದಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಲಕ್ಷ್ಮೀ ಹೆಬ್ಬಾಳ್ಕರ್, "ಯಾರು ಯಾರನ್ನು ಸೊಲಿಸುವುದಕ್ಕಿಂತ ನಾವು ನಮ್ಮ ಪಕ್ಷದ ಗೆಲುವಿಗೆ ಹೋರಾಡಿದ್ದೇವೆ" ಎಂದಿದ್ದಾರೆ.

ಇನ್ನೂ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, "ಯಾವ ಧರ್ಮಕ್ಕೂ ನೋವಾಗಬಾರದು. ಕಳೆದ ಬಾರಿ ನಾವು ಗೆದ್ದ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ. ಕಳೆದ ಬಾರಿ ಬಿಜೆಪಿ ಗೆದ್ದ ಕ್ಷೇತ್ರಗಳಲ್ಲಿ ನಾವು ಈ ಬಾರಿ ಜಯ ಸಾಧಿಸುತ್ತಿದ್ದೇವೆ. ಕೆಲವು ಕ್ಷೇತ್ರದಲ್ಲಿ ನಾವು ಸೋತರೂ ಅಧಿಕ ಮತಗಳನ್ನು ಪಡೆದಿದ್ದೇವೆ. ಜೊತೆಗೆ ತೀವ್ರ ಪೈಪೋಟಿ ನೀಡಿದ್ದೇವೆ ಅನ್ನೋ ಸಂತೋಷ ನನಗಿದೆ" ಎಂದು ಹೇಳಿದರು.
ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆಗೂ ಮುನ್ನ ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ರಾಜಕೀಯ ತಿಕ್ಕಾಟ ವೈಯಕ್ತಿಕ ಆರೋಪಗಳ ಮಟ್ಟಕ್ಕೆ ತಲುಪಿತ್ತು. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಗೆಲುವುದ್ದಕ್ಕಿಂತ ಹೆಚ್ಚಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚೆನ್ನರಾಜ ಹಟ್ಟಿಹೊಳಿ ಸೋಲಿಸಲು ರಮೇಶ್ ಪಣತೊಟ್ಟಿದ್ದರು. ಈ ನಿಟ್ಟಿನಲ್ಲಿ ಬೆಳಗಾವಿ ಕದನ ಕುತೂಹಲಕ್ಕೆ ಕಾರಣವಾಗಿತ್ತು. ಬೆಳಗಾವಿಯಲ್ಲಿ ಬಿಜೆಪಿಯಿಂದ ತಮ್ಮ ಸಹೋದರ ಲಖನ್ ಜಾರಕಿಹೊಳಿಯನ್ನು ಕಣಕ್ಕೆ ಇಳಿಸಲು ರಮೇಶ್ ಪ್ಲ್ಯಾನ್ ಮಾಡಿದ್ದರು. ಆದರೆ ಅವರಿಗೆ ಬಿಜೆಪಿಯಿಂದ ಟಿಕೆಟ್ ಸಿಗಲಿಲ್ಲ. ಈ ಕಾರಣದಿಂದಾಗಿ ಪಕ್ಷೇತರವಾಗಿ ಲಖನ್ ಕಣಕ್ಕಿಳಿದಿದ್ದಾರೆ. ಬಹಿರಂಗವಾಗಿ ರಮೇಶ್ ಲಖನ್ ಪರವಾಗಿ ಪ್ರಚಾರ ನಡೆಸದೆ ಇದ್ದರೂ ಆಂತರಿಕವಾಗಿ ಲಖನ್ ಪರವಾಗಿ ರಮೇಶ್ ಪ್ರಚಾರದಲ್ಲಿ ತೊಡಗಿದ್ದರು.

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಪ್ರಶ್ನೆ ಮಾಡಿದಾಗ ಥೂ ಥೂ ಎಂದಿದ್ದರು. ರಮೇಶ್ ಪ್ರತಿಕ್ರಿಯೆ ವ್ಯಾಪಕ ಚರ್ಚೆಗೂ ಗ್ರಾಸವಾಗಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್, ಲಿಂಗಾಯತ ಸಮುದಾಯದ ಹೆಣ್ಣು ಮಗಳ ನಾನು, ಥೂ ಅಂತಾರಲ್ಲ ನಾನೇನು ಮಾಡಿದ್ದೇನೆ. ನಮ್ಮ ವಿರುದ್ಧ ವ್ಯವಸ್ಥಿತ ಸಂಚು ನಡೆದಿದೆ. ನಾನು ಲಿಂಗಾಯತ ಸಮುದಾಯಕ್ಕೆ ಅವಮಾನ ಮಾಡಿದ್ದೇನೆ ಎಂದು ಹಬ್ಬಿಸುತ್ತಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದ್ದರು. ಈ ನಡುವೆ ರಮೇಶ್ ಜಾರಕಿಹೊಳಿ ಸಹೋದರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಗಟ್ಟಿಯಾಗಿ ನಿಂತಿದ್ದಾರೆ ಎಂದು ಸತೀಶ್ ಜಾರಕಿಹೊಳಿಯನ್ನು ಹೊಗಳಿದ್ದರು. ಒಂದೆಡೆ ರಮೇಶ್ ಜಾರಕಿಹೊಳಿ ವಿರೋಧ ಇನ್ನೊಂದೆಡೆ ಸತೀಶ್ ಜಾರಕಿಹೊಳಿ ಮೇಲಿನ ಗೌರವ ಎರಡನ್ನು ಲಕ್ಷ್ಮೀ ಹೆಬ್ಬಾಳ್ಕರ್ ನಯವಾಗಿ ನಿಭಾಯಿಸುತ್ತಿದ್ದಾರೆ.












Click it and Unblock the Notifications