ಸತೀಶ್ ಜಾರಕಿಹೊಳಿಗೆ ಜೈ ಎಂದ ಬಿಜೆಪಿ ಕಾರ್ಯಕರ್ತರು
ಬೆಳಗಾವಿ, ನವೆಂಬರ್ 29: ಬೆಳಗಾವಿಯ ಶಾಸಕರ ಹಿಲ್ ಗಾರ್ಡನ್ ಗೃಹ ಕಚೇರಿಯಲ್ಲಿ ಹೊನಗಾ ಗ್ರಾಮದ ಬಿಜೆಪಿ ಕಾರ್ಯಕರ್ತರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಅಧಿಕೃತವಾಗಿ ಇಂದು ಕಾಂಗ್ರೆಸ್ ಸೇರ್ಪಡೆಗೊಂಡರು.
ಯಮಕನಮರಡಿ ಕ್ಷೇತ್ರದಲ್ಲಿ ಶಾಸಕರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿದ ಕಾರ್ಯಕರ್ತರು ಕೈ ಸೇರಿದ್ದಾರೆ. ಜತೆಗೆ ಕಾಂಗ್ರೆಸ್ ಪಕ್ಷ ಸಂಘಟನೆಗೆ ನಿಷ್ಠೆಯಿಂದ ಕೆಲಸ ಮಾಡುವುದಾಗಿ ಕಾರ್ಯಕರ್ತರು ಒಮ್ಮತದ ಸಂದೇಶವನ್ನು ನೀಡಿದರು.
ಸಾಂಬ್ರಾ ಜಿ.ಪಂ ಸದಸ್ಯ ರಾಜೀನಾಮೆ: ಶಾಸಕಿ ಹೆಬ್ಬಾಳ್ಕರ್ಗೆ ಶಾಕ್ ಕೊಟ್ಟ ಜಾರಕಿಹೊಳಿ
ಕಳೆದ ಒಂದು ದಶಕಗಳಿಂದ ಬಿಜೆಪಿ ಕಾರ್ಯಕರ್ತರಾಗಿ ಕೆಲಸ ಮಾಡಿದ್ದರು. ಪಕ್ಷ ನಮ್ಮ ಸಮಸ್ಯೆಗಳಿಗೆ ಸ್ಪಂದಿಸಲಿಲ್ಲ. ಕಾರ್ಯಕರ್ತರಿಗೆ ಸ್ಥಾನಮಾನಗಳು ಸಿಗಲಿಲ್ಲ. ಹಾಗಾಗಿ ಅಭಿವೃದ್ಧಿ ಪರ ಇರುವ ಕಾಂಗ್ರೆಸ್ ಪಕ್ಷ ಸೂಕ್ತವೆನಿಸಿ, ನಾವು ಇಂದು ಶಾಸಕರ ನೇತೃತ್ವದಲ್ಲಿ ವಿದ್ಯುಕ್ತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದೇವೆ ಎಂದು ಹೇಳಿದರು.
ಈಗಾಗಲೇ ಕಾಕತಿ, ಹೊನಗಾ ಗ್ರಾಮದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಕುಡಿಯುವ ನೀರು, ರಸ್ತೆ, ವಿದ್ಯುತ್, ಜನರ ಆರೋಗ್ಯ, ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಶಾಸಕರ ಕಾರ್ಯಸಾಧನೆ ನಮಗೆ ಸಂತೃಪ್ತಿ ನೀಡಿದೆ. ಮುಂದೆಯೂ ಕೂಡಾ ಇನ್ನು ಹೆಚ್ಚಿನ ಅಭಿವೃದ್ಧಿ ಮಾಡುತ್ತಾರೆ ಎಂದು ಕಾಂಗ್ರೆಸ್ ಸೇರ್ಪಡೆಗೊಂಡ ಅಶೋಕ ಚನ್ನಪ್ಪ ಪಟ್ಟಣ ವಿಶ್ವಾಸ ವ್ಯಕ್ತಪಡಿಸಿದರು.
ನೂರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಶಾಸಕ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.