Vinay Kulkarni: ರಾಜ್ಯದ ಅನೇಕ ನಾಯಕರ ಮೇಲೆ ಬಿಜೆಪಿ ಷಡ್ಯಂತ್ರ: ಕುಲಕರ್ಣಿ
ಬೆಳಗಾವಿ, ಮೇ 01: ಕರ್ನಾಟಕದ ಅನೇಕ ನಾಯಕರ ಮೇಲೆ ಬಿಜೆಪಿ ಷಡ್ಯಂತ್ರ ರೂಪಿಸಿದೆ. ಬಿಜೆಪಿ ಕುತಂತ್ರದ ರಾಜಕಾರಣ ಮಾಡುತ್ತಿದೆ. ನನ್ನ ಮೇಲೆ ಬಿಜೆಪಿ ಕುತಂತ್ರ ನಡೆಸಿದೆ ಎಂಬ ಹೇಳಿಕೆಗೆ ಈಗಲೂ ನಾನು ಬದ್ಧ ಎಂದು ಧಾರವಾಡ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಹೇಳಿದರು.
ಸೋಮವಾರ ಕಿತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿನಯ್ ಕುಲಕರ್ಣಿ, ನ್ಯಾಯಾಲಯದಲ್ಲಿ ಯಾರು ಬಂದು ಕುಳಿತಿರುತ್ತಾರೆ ಎಂಬದನ್ನು ನೋಡಿದರೆ ಬಿಜೆಪಿ ನನ್ನ ಮೇಲಷ್ಟೇ ಅಲ್ಲದೇ ರಾಜ್ಯ ಅನೇಕ ನಾಯಕರ ಮೇಲೆ ಬಿಜೆಪಿ ಷಡ್ಯಂತ್ರ ನಡೆಸಿರುವುದು ಗೊತ್ತಾಗುತ್ತದೆ. ಇಂದಿಗೂ ಅನೇಕರ ಮೇಲೆ ಐಟಿ ರೇಡ್ ಮಾಡಿಸಲಾಗುತ್ತಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿಯವರು ನಮ್ಮ ಪಿಎ ಮನೆಗಳ ಮೇಲೆ ಐಟಿ ದಾಳಿ ನಡೆಸಿಹೊ ರಗಡೆ ಬರದಂತೆ ಮಾಡಿತು ಎಂದರು.

ಇಷ್ಟು ದಿನ ಬಿಜೆಪಿ ಶಾಸಕರನ್ನೇ ಬೈದಾಡಿಕೊಂಡು ಓಡಾಡುತ್ತಿದ್ದ ಬಸವರಾಜ ಕೊರವರ ಇಂದು ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿ ನನ್ನನ್ನು ಬೈಯುತ್ತಿದ್ದಾರೆ. ಇದನ್ನು ನೋಡಿದರೆ ಅವರು ಹಣಕ್ಕೆ ಬುಕ್ ಆಗಿದ್ದಾರೆ ಎಂಬುದು ಗೊತ್ತಾಗುತ್ತದೆ. ಆದರೆ ನಾನು ದುಡ್ಡು ಪಡೆದು ಮಾತನಾಡುವವರಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಮರಳಿ ನನಗೆ ಅವಕಾಶ ಸಿಗಲಿದೆ: ಕುಲಕರ್ಣಿ ವಿಶ್ವಾಸ
ಸದ್ಯ ಕೋರ್ಟ್ ನನಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ಕೊಟ್ಟಿಲ್ಲ. ಹೊರಗಡೆ ಇದ್ದುಕೊಂಡೇ ನಾನು ಕೆಲಸ ಮಾಡುತ್ತಿದ್ದೇನೆ. ಕ್ಷೇತ್ರದ ಜನ ಇದೀಗ ಕಾಂಗ್ರೆಸ್ನತ್ತ ಮುಖ ಮಾಡಿದ್ದಾರೆ. ಮರಳಿ ನನಗೆ ಅವಕಾಶ ಕೊಡಲು ಉತ್ಸುಕರಾಗಿದ್ದಾರೆ ಎಂದು ಅವರ ವಿಶ್ವಾಸ ವ್ಯಕ್ತಪಡಿಸಿದರು.

ಕ್ಷೇತ್ರದಲ್ಲಿ ನಾನು ಮಾಡಿದ ಕೆಲಸಗಳನ್ನು ಮುಂದಿಟ್ಟುಕೊಂಡು ನನ್ನ ಪತ್ನಿ ಹಾಗೂ ಕಾರ್ಯಕರ್ತರು ಮತ ಕೇಳುತ್ತಿದ್ದಾರೆ. ರೈತರಿಗೆ, ವಿದ್ಯಾರ್ಥಿಗಳಿಗೆ, ಯುವಕರಿಗೆ ನಾವು ಕೊಟ್ಟಂತ ಯೋಜನೆಗಳು ಇಂದು ನನ್ನ ಕೈ ಹಿಡಿಯುತ್ತಿವೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ಬಿಜೆಪಿ ಶಾಸಕರು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನೇ ಮಾಡಿಲ್ಲ. ಒಂದೂ ಜನಸಂಪರ್ಕ ಸಭೆ ನಡೆಸಿಲ್ಲ. ಕಾಂಗ್ರೆಸ್ಗೆ ಬೆಂಬಲ ನೀಡಿದಂತವರಿಗೆ ಕಿರುಕುಳ ನೀಡುವ ಕೆಲಸ ಮಾಡಿದ್ದಾರೆ.
ಒಂದು ಲಕ್ಷ ರೂ. ಕೊಟ್ಟಂತವರಿಗೆ ಮಾತ್ರ ಮನೆ ಹಾಕಿಸಿಕೊಟ್ಟಿದ್ದಾರೆ. ವಿನಯ್ ಕುಲಕರ್ಣಿ ಯಾರು ಎಂಬುದು ನನ್ನ ಕ್ಷೇತ್ರದ ಜನರಿಗೆ ಗೊತ್ತಿದೆ. ನ್ಯಾಯಾಂಗದ ಮೇಲೆ ನನಗೆ ಭರವಸೆ ಇದೆ. ಸತ್ಯಕ್ಕೆ ಜಯ ಸಿಕ್ಕೇ ಸಿಗುತ್ತದೆ. ಬಿಜೆಪಿಯವರು ಹಾಲಿನಲ್ಲಿ ಹರಳು ಒಗೆಯುವ ಕೆಲಸ ಮಾಡಿದ್ದಾರೆ ಎಂದರು.
ಇಂದಿಗೂ ಫೋನ್ ಟ್ಯಾಫ್ ಆಗುತ್ತಿದೆ
ಅಭಿವೃದ್ಧಿ ಯಾರು ಮಾಡುತ್ತಾರೋ ಅವರಿಗೆ ಮತ ಹಾಕಿ ಎಂದು ಅಮ್ಮಿನಭಾವಿಯಲ್ಲಿ ನಟ ಸುದೀಪ್ ಅವರು ಸರಿಯಾಗಿಯೇ ಹೇಳಿದ್ದಾರೆ. ಇವತ್ತಿಗೂ ನಮ್ಮ ಫೋನ್ಗಳನ್ನು ಟ್ಯಾಪ್ ಮಾಡಲಾಗುತ್ತಿದೆ. ಕಾಲ್ ರೆಕಾರ್ಡ್ ಮಾಡಲಾಗುತ್ತಿದೆ. ನಾವು ಏನಾದರೂ ಮಾತನಾಡಿದರೆ ಅದು 10 ನಿಮಿಷಕ್ಕೆ ಬಿಜೆಪಿಯವರಿಗೆ ಮಾಹಿತಿ ಮುಟ್ಟುತ್ತದೆ. ಈ ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ಆಗುತ್ತಿದೆ ಎಂದು ಅವರು ಆರೋಪಿಸಿದರು.
ಈ ಸಲ ಧಾರವಾಡದಲ್ಲಿ ಮಾತ್ರವಲ್ಲ ರಾಜ್ಯದಲ್ಲೇ ಕಾಂಗ್ರೆಸ್ ಪರ ಅಲೆ ಇದೆ. ಈಗಿನ ಸರ್ಕಾರ ಮಾಡಿದಷ್ಟು ಭ್ರಷ್ಟಾಚಾರವನ್ನು ಯಾವ ಸರ್ಕಾರವೂ ಮಾಡಿಲ್ಲ. ನಾನು ಮಾಡಿದ ಕೆರೆಗೆ ನೀರು ತುಂಬಿಸುವ ಕೆಲಸ, ಮಂದಿರ ನಿರ್ಮಾಣ ಸೇರಿದಂತೆ ಇತ್ಯಾದಿ ಕೆಲಸಗಳಿಗೆ ಬಿಜೆಪಿ ಶಾಸಕರು ತಮ್ಮ ಹೆಸರು ಹಾಕಿಸಿಕೊಳ್ಳುವ ಕೆಲಸ ಮಾಡಿದ್ದಾರೆ. ನನ್ನ ಕ್ಷೇತ್ರಕ್ಕೆ ಯಾವುದೇ ಸ್ಟಾರ್ ಪ್ರಚಾರಕರ ಅವಶ್ಯಕತೆ ಇಲ್ಲ. ನನ್ನ ಕಾರ್ಯಕರ್ತರೇ ನನ್ನ ಸ್ಟಾರ್ ಪ್ರಚಾರಕರು. ಸಿದ್ದರಾಮಯ್ಯ ಒಬ್ಬರು ನನ್ನ ಕ್ಷೇತ್ರಕ್ಕೆ ಬರುತ್ತೇನೆ ಎಂದಿದ್ದಾರೆ ಎಂದು ತಿಳಿಸಿದರು.












Click it and Unblock the Notifications