ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರನ್ನು ಸೆಳೆಯುತ್ತಿಲ್ಲ : ಸಾ.ರಾ.ಮಹೇಶ್
ಬೆಳಗಾವಿ, ಜನವರಿ 16 : 'ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಪ್ರಯತ್ನ ಮಾಡುತ್ತಿಲ್ಲ. ಬಿಜೆಪಿಯ 6 ರಿಂದ 8 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ' ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳಿದರು.
ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ ಆಪರೇಷನ್ ಕಮಲ ಮಾಡುತ್ತಿದೆ ಎಂಬ ಆರೋಪದ ನಡುವೆ ಸಚಿವರ ಈ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ. 'ಬಿಜೆಪಿ ಸಮ್ಮಿಶ್ರ ಸರ್ಕಾರವನ್ನು ಕೆಡವಲು ಪ್ರಯತ್ನ ನಡೆಸಿಲ್ಲ' ಎಂದು ಸಚಿವರು ಹೇಳಿದ್ದಾರೆ.
'ಕರ್ನಾಟಕದ 104 ಬಿಜೆಪಿ ಶಾಸಕರು ಗುರುಗ್ರಾಮದ ಐಟಿಸಿ ಹೋಟೆಲ್ನಲ್ಲಿದ್ದಾರೆ. ಪಕ್ಷದ ಸಭೆಗಾಗಿ ಅವರು ಅಲ್ಲಿಗೆ ತೆರಳಿದ್ದರು. ಯಾವುದೇ ಕಾಂಗ್ರೆಸ್ ಶಾಸಕರು ಪಕ್ಷವನ್ನು ತೊರೆದು ಬಿಜೆಪಿ ಜೊತೆ ಹೋಗುವುದಿಲ್ಲ' ಎಂದು ಸಚಿವರು ಸ್ಪಷ್ಟಪಡಿಸಿದರು.

'ನಾವು ಕೆಲವು ಬಿಜೆಪಿ ನಾಯಕರೊಂದಿಗೆ ಸಂಪರ್ಕದಲ್ಲಿರುವುದು ನಿಜ. ಅವರು ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಹೋಗಿದ್ದಾರೆ. ಮುಂದಿನ ಲೋಕಸಭಾ ಚುನಾವಣೆ ಕುರಿತು ಚರ್ಚೆ ನಡೆಸಲು ಅವರ ಜೊತೆ ಸಂಪರ್ಕದಲ್ಲಿದ್ದೇವೆ' ಎಂದು ಸಾ.ರಾ.ಮಹೇಶ್ ಹೇಳಿದರು.
ಜೆಡಿಎಸ್ ನಂಜನಗೂಡು ಕ್ಷೇತ್ರದ ಬಿಜೆಪಿ ಶಾಸಕ ಹರ್ಷವರ್ಧನ್, ತುರುವೇಕೆರೆ ಶಾಸಕ ಜಯರಾಂ ಅವರನ್ನು ಸಂಪರ್ಕಿಸಿದೆ ಎಂಬ ಮಾಹಿತಿ ಸಿಕ್ಕಿದೆ. ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಜೆಡಿಎಸ್ ಎಂಟು ಶಾಸಕರನ್ನು ಸಂಪರ್ಕಿಸಿದ್ದು ಕುತೂಹಲಕ್ಕೆ ಕಾರಣವಾಗಿದೆ.












Click it and Unblock the Notifications