ಬೆಳಗಾವಿ ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿ ಶಾಸಕ ಭಾಗಿ!
ಬೆಳಗಾವಿ, ಜನವರಿ 21: ಬೆಳಗಾವಿಯಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷದ 'ಜೈ ಬಾಪು, ಜೈ ಭೀಮ, ಜೈ ಸಂವಿಧಾನ' ಹೆಸರಿನ ಸಮಾವೇಶ ಆರಂಭವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದೆ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಅಚ್ಚರಿ ಎಂಬಂತೆ ಈ ಸಮಾವೇಶದಲ್ಲಿ ಬಿಜೆಪಿ ಶಾಸಕರೊಬ್ಬರು ಭಾಗವಹಿಸಿದ್ದಾರೆ.
ಈ ಸಮಾವೇಶದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ನಡೆಯುತ್ತಿದೆ. ಕರ್ನಾಟಕದ ಪ್ರತಿಪಕ್ಷವಾದ ಬಿಜೆಪಿ ಕಾಂಗ್ರೆಸ್ ಪಕ್ಷದ ಸಮಾವೇಶವನ್ನು ಸರ್ಕಾರದ ದುಡ್ಡಿನಲ್ಲಿ ಮಾಡುತ್ತಿದ್ದಾರೆ ಎಂದು ಆರೋಪ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿಯೇ ಬಿಜೆಪಿ ಶಾಸಕರು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

ಬೆಂಗಳೂರು ನಗರದ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಟಿ. ಸೋಮಶೇಖರ್ ಮಂಗಳವಾರ ಬೆಳಗಾವಿಯಲ್ಲಿ ನಡೆಯುತ್ತಿರುವ 'ಜೈ ಬಾಪು, ಜೈ ಭೀಮ, ಜೈ ಸಂವಿಧಾನ' ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ, ಈ ಮೂಲಕ ಪಕ್ಷದ ನಾಯಕರಲ್ಲಿ ಅಚ್ಚರಿಯನ್ನು ಉಂಟು ಮಾಡಿದ್ದಾರೆ.
ಎಸ್. ಟಿ. ಸೋಮಶೇಖರ್ ಪ್ರತಿಕ್ರಿಯೆ: ಬೆಳಗಾವಿಯಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಪಾಲ್ಗೊಂಡ ಎಸ್. ಟಿ. ಸೋಮಶೇಖರ್ ಮಾಧ್ಯಮಗಳ ಜೊತೆ ಮಾತನಾಡಿದ್ದು, "ಇದು ಸರ್ಕಾರಿ ಕಾರ್ಯಕ್ರಮವಾಗಿದೆ. ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಅನಾವರಣ ಮಾಡಲಾಗುತ್ತಿದೆ. ಸರ್ಕಾರದ ಆಹ್ವಾನವಿತ್ತು ಮಹಾತ್ಮ ಗಾಂಧಿ ಅವರ ಅನುಯಾಯಿಯಾಗಿ, ಒಬ್ಬ ಶಾಸಕನಾಗಿ ನನ್ನ ಕರ್ತವ್ಯ ಇದಕ್ಕೆ ಗೌರವ ಕೊಡುವುದು. ಆದ್ದರಿಂದ ಬೆಂಗಳೂರಿನಿಂದ ಈ ಕಾರ್ಯಕ್ರಮಕ್ಕಾಗಿ ಬಂದಿದ್ದೇನೆ" ಎಂದರು.
"ಯಾರಿಗೆ ಮಹಾತ್ಮ ಗಾಂಧಿ ಅವರ ಮೇಲೆ ಗೌರವವಿದೆ ಅವರು ಇಂತಹ ಕಾರ್ಯಕ್ರಮಗಳಿಗೆ ಬರಬೇಕು, ನಾನು ಬಂದಿದ್ದೇನೆ. ನಾನು ಮೂಲ ಕಾಂಗ್ರೆಸಿಗ, ಗಾಂಧಿ ಅನುಯಾಯಿ. ಸಂತೋಷದಿಂದ ಕಾರ್ಯಕ್ರಮಕ್ಕೆ ಬಂದಿದ್ದೇನೆ" ಎಂದು ಎಸ್. ಟಿ. ಸೋಮಶೇಖರ್ ಸ್ಪಷ್ಟಪಡಿಸಿದರು.
ಕೇಂದ್ರ ಸಚಿವರ ಪೋಸ್ಟ್: ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ 'ಜೈ ಬಾಪು, ಜೈ ಭೀಮ, ಜೈ ಸಂವಿಧಾನ' ಹೆಸರಿನ ಸಮಾವೇಶದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. "ಕಾಂಗ್ರೆಸ್ ( ಐ) ಪಕ್ಷವು ಬೆಳಗಾವಿಯಲ್ಲಿ ಸಮಾವೇಶ ನಡೆಸಲಿದೆ. ಈ ಸಮಾವೇಶ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರ ಬೆಳಗಾವಿಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ನೆನಪಿಗಾಗಿ. 1924ರ ಕಾಂಗ್ರೆಸ್ಗೂ ಇವತ್ತಿನ ಕಾಂಗ್ರೆಸ್ (ಐ) ಪಕ್ಷಕ್ಕೂ ಎಲ್ಲಿಯ ಸಂಬಂಧ?" ಎಂದು ಪ್ರಶ್ನಿಸಿದ್ದಾರೆ.
"ಸ್ವತಃ ರಾಷ್ಟ್ರಪಿತ ಮಹಾತ್ಮಗಾಂಧಿ ಸ್ವಾತಂತ್ರ್ಯನಂತರ ಕಾಂಗ್ರೆಸ್ ವಿಸರ್ಜಿಸಲು ಕರೆ ಕೊಟ್ಟಿದ್ದರು. ಇಂದಿನ ನಕಲಿ ಗಾಂಧಿಗಳು ಸೇರಿ ನಕಲಿ ಕಾಂಗ್ರೆಸ್ ಪಕ್ಷದ ಸಮಾವೇಶವನ್ನು ಸರ್ಕಾರದ ದುಡ್ಡಿನಲ್ಲಿ ಮಾಡುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ.
"ಈ ಸಮಾವೇಶ ಜೈ ಬಾಪು, ಜೈ ಭೀಮ, ಜೈ ಸಂವಿಧಾನ ಹೆಸರಿನಲ್ಲಿ ನಡೆಯುತ್ತಿದೆ. ಡಾ. ಬಾಬಾಸಾಹೇಬ ಅಂಬೇಡ್ಕರ ಅವರನ್ನು ಅವರ ಜೀವಿತಾವಧಿಯಲ್ಲಿ ಕಾಂಗ್ರೆಸ್ ಯಾವ ರೀತಿ ಅಪಮಾನಿಸಿತು ಎಂಬುವದು ಎಲ್ಲರಿಗೂ ಗೊತ್ತಿರುವ ವಿಷಯ. ಡಾ. ಬಿ. ಆರ್. ಅಂಬೇಡ್ಕರ್ ಅವರಿಗೆ ಮಾಡಿದ ಅಪಮಾನವನ್ನು ರಾಷ್ಟ್ರ ಎಂದಿಗೂ ಮರೆಯುವುದಿಲ್ಲ. ಡಾ. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಒಂದಲ್ಲ ಎರಡು ಬಾರಿ. ಪಂಡಿತ್ ನೆಹರೂ ಅವರ ವಿರುದ್ಧ ಪ್ರಚಾರ ಮಾಡಿ, ಅವರ ಸೋಲನ್ನು ಪ್ರತಿಷ್ಠೆಯ ವಿಷಯವನ್ನಾಗಿ ಮಾಡಿಕೊಂಡರು" ಎಂದು ಜೋಶಿ ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾರೆ.
"ಡಾ. ಅಂಬೇಡ್ಕರ್ ಅವರಿಗೆ ಭಾರತ ರತ್ನ ಗೌರವ ನೀಡದೆ ನಿರಾಕರಿಸಿದರು. ನೆಹರು ಮತ್ತು ಇಂದಿರಾ ಗಾಂಧಿ ತಮಗೆ ತಾವೆ ಭಾರತರತ್ನ ತೆಗೆದುಕೊಂಡರು ಮತ್ತು ರಾಜೀವ ಗಾಂಧಿ ಅವರಿಗೆ ಕಾಂಗ್ರೆಸ್ ಪಕ್ಷ ಭಾರತ ರತ್ನ ನೀಡಿತು. ಡಾ. ಬಾಬಾ ಸಾಹೇಬ ಅಂಬೇಡ್ಕರ ಅವರಿಗೆ ಭಾರತೀಯ ಜನತಾ ಪಕ್ಷದ ಬೆಂಬಲದ ಸರ್ಕಾರ ಅಧಿಕಾರದಲ್ಲಿದ್ದಾಗ ಆಗಿನ ಪ್ರಧಾನಿ ಶ್ರೀ ವಿ. ಪಿ. ಸಿಂಗ್ ಅವರ ಸರ್ಕಾರ ಭಾರತ ರತ್ನ ನೀಡಿತು" ಎಂದು ಹೇಳಿದ್ದಾರೆ.
"ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಬಾಬಾಸಾಹೇಬರ ಭಾವಚಿತ್ರಕ್ಕೆ ಹೆಮ್ಮೆಯ ಸ್ಥಾನವನ್ನು ನಿರಾಕರಿಸಿದರು. ಸಂವಿಧಾನ ಶಿಲ್ಪಿಯ ಶವಸಂಸ್ಕಾರಕ್ಕೂ ಜಾಗ ನೀಡಲಿಲ್ಲ. ಅವರ ವಾಸ ಮಾಡುತ್ತಿದ್ದ ಮನೆಯನ್ನು ಸ್ಮಾರಕ ಮಾಡಲು ಅವಕಾಶ ನೀಡಲಿಲ್ಲ. ಮುಂಬಯಿಯಲ್ಲಿಯೂ ಅವರ ಸ್ಮಾರಕ ಮಾಡಲಿಲ್ಲ. ನೆಹರು ಅವರು ಡಾ. ಬಾಬಾಸಾಹೇಬ ಅಂಬೇಡ್ಕರ ಅವರು ಮಂತ್ರಿಮಡಲಕ್ಕೆ ರಾಜಿನಾಮೆ ನೀಡಿದಾಗ ಅವರ ರಾಜಿನಾಮೆಯಿಂದ ಏನೂ ಆಗುವದಿಲ್ಲ ಎಂದು ಹೇಳಿಕೆ ನೀಡಿದ್ದರು" ಎಂದು ಜೋಶಿ ಪೋಸ್ಟ್ನಲ್ಲಿ ತಿಳಿಸಿದ್ದಾರೆ.












Click it and Unblock the Notifications