ಕೆಎಸ್ಆರ್ಟಿಸಿ ಕಂಡಕ್ಟರ್ ವಿರುದ್ಧ ಫೋಕ್ಸೊ ಕೇಸ್: ಮಹಾರಾಷ್ಟ್ರ ಕರ್ನಾಟಕ ನಡುವೆ ಬಸ್ ಸೇವೆ ಸ್ಥಗಿತ
ಬೆಳಗಾವಿ ಫೆಬ್ರವರಿ 23: ಕನ್ನಡ ಮಾತನಾಡಿ ಎಂದಿದ್ದಕ್ಕೆ ಕೆಎಸ್ಆರ್ಟಿಸಿ ಕಂಡಕ್ಟರ್ ಮೇಲೆ ಮರಾಠಿ ಯುವಕರು ಹಲ್ಲೆ ಮಾಡಿದ ಘಟನೆ ರಾಜ್ಯದಲ್ಲಿ ಕೋಲಾಹಲವನ್ನೇ ಸೃಷ್ಟಿ ಮಾಡಿದೆ. ಮರಾಠಿಗರ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ರಾಜ್ಯದಾದ್ಯಂತ ಕನ್ನಡಪರ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. ಅತ್ತ ಮರಾಠಿಗರು ಕಂಡಕ್ಟರ್ ವಿರುದ್ಧ ಫೋಕ್ಸೊ ಪ್ರಕರಣ ದಾಖಲಿಸಿ, ಮಹಾರಾಷ್ಟ್ರ ಕರ್ನಾಟಕ ನಡುವೆ ಬಸ್ ಸೇವೆ ಸ್ಥಗಿತಗೊಳಿಸಿದ್ದಾರೆ.
ಫೆಬ್ರವರಿ 21ರಂದು ಶುಕ್ರವಾರ ಮಧ್ಯಾಹ್ನ ಬೆಳಗಾವಿಯಿಂದ ಸುಳೇಬಾವಿಗೆ ಹೊರಟಿದ್ದ ಬಸ್ನಲ್ಲಿ ಓರ್ವ ಯುವಕ ಹಾಗೂ ಯುವತಿ ಪ್ರಯಾಣಿಸುತ್ತಿದ್ದರು. ಕೆಎಸ್ಆರ್ಟಿಸಿ ಬಸ್ನಲ್ಲಿ ಅವರಿಗೆ ಕನ್ನಡದಲ್ಲಿ ಕಂಡಕ್ಟರ್ ಟಿಕೆಟ್ ಕೇಳಿದ್ದಕ್ಕೆ ಗಲಾಟೆ ನಡೆದಿದೆ. ಟಿಕೆಟ್ ಪಡೆಯಲು ಕೇಳಿದಾಗ ಮರಾಠಿ ಭಾಷೆಯಲ್ಲಿ ಯುವಕ ಉತ್ತರಿಸಿದ್ದಾನೆ. ಮರಾಠಿ ಭಾಷೆ ಅರ್ಥವಾಗಲ್ಲ ಕನ್ನಡದಲ್ಲಿ ಮಾತನಾಡಿ ಎಂದು ಕಂಡಕ್ಟರ್ ಹೇಳಿದ್ದಾರೆ. ಈ ಕಾರಣಕ್ಕೆ ಯುವಕ-ಯುವತಿ ಇಬ್ಬರೂ ಕಂಡಕ್ಟರ್ ಜೊತೆ ಜಗಳವಾಡಿದ್ದಾರೆ.

ಬಸ್ ಸುಳೇಬಾವಿ ಗ್ರಾಮ ಪ್ರವೇಶಿಸುತ್ತಿದ್ದಂತೆ ತಮ್ಮೂರಿನ ನಾಲ್ವರನ್ನು ಕರೆದ ಯುವಕ ಕಂಡಕ್ಟರ್ ಮಹಾದೇವ ಮೇಲೆ ಹಲ್ಲೆ ಮಾಡಿಸಿದ್ದಾನೆ. ಈ ಘಟನೆ ಕನ್ನಡಿಗರನ್ನು ಕೆರಳಿಸಿದೆ. ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಇದರಿಂದ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುಂಜಾಗ್ರತಾವಾಗಿ ಮಹಾರಾಷ್ಟ್ರ, ಕರ್ನಾಟಕ ನಡುವೆ ಸಾರಿಗೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ಕೊಲ್ಲಾಪುರದಲ್ಲಿ ಶಿವಸೇನೆ ಪ್ರತಿಭಟನೆ ಮಾಡಿದೆ. ಹೀಗಾಗಿ ಕರ್ನಾಟಕದಿಂದ ಹೊರಡುವ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಬೆಳಗಾವಿ, ನಿಪ್ಪಾಣಿ, ಚಿಕ್ಕೋಡಿ, ಮಾರ್ಗವಾಗಿ ಕೊಲ್ಲಾಪುರಕ್ಕೆ ತೆರಳುವ ಎಲ್ಲಾ ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಬಂದ್ ಮಾಡಲಾಗಿದೆ. ಪ್ರತಿದಿನ 120 ಬಸ್ಗಳ ಸಂಚಾರ ನಡೆಸುತ್ತಿದ್ದು, ಸಂಜೆ ಬಳಿಕ ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ.
ಅಲ್ಲದೆ ಬೆಂಗಳೂರಿನಿಂದ ಮುಂಬೈಗೆ ಹೊರಡುತ್ತಿದ್ದ ಎಂಎಸ್ಆರ್ಟಿಸಿ ಬಸ್ ಮೇಲೆ ಕನ್ನಡಪರ ಕಾರ್ಯಕರ್ತರು ದಾಳಿ ಮಾಡಿ, ಕಾರ್ಯಕರ್ತರು ಚಾಲಕ ಭಾಸ್ಕರ್ ಜಾಧವ್ ಅವರ ಮುಖಕ್ಕೂ ಕಪ್ಪು ಬಣ್ಣ ಬಳಿದು ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದ್ದು, ಈ ಸಂಬಂಧ ಕರ್ನಾಟಕ ಸರ್ಕಾರ ಈ ವಿಷಯದ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸದ ಹೊರತು ಕರ್ನಾಟಕಕ್ಕೆ ಬಸ್ ಸೇವೆಗಳನ್ನು ಪುನರಾರಂಭಿಸಲಾಗುವುದಿಲ್ಲ ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಆದೇಶಿಸಿದ್ದಾರೆ. ಇನ್ನೊಂದೆಡೆ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಸಂಚರಿಸುವ ಎಲ್ಲಾ ಬಸ್ ಸಹ ಸ್ಥಗಿತಗೊಳಿಸಲಾಗಿದೆ. ಜೊತೆಗೆ ಬಸ್ ಕಂಡಕ್ಟರ್ ಮೇಲೆ ಮರಾಠಿಗರು ಫೊಕ್ಸೊ ಪ್ರಕರಣವನ್ನು ದಾಖಲಿಸಿದ್ದಾರೆ.












Click it and Unblock the Notifications