ಉಪ ಚುನಾವಣೆ ಘೋಷಣೆ; ಬೆಳಗಾವಿ ಜಿಲ್ಲಾಧಿಕಾರಿ ವರ್ಗಾವಣೆ
ಬೆಳಗಾವಿ, ಮಾರ್ಚ್ 22: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಡಾ. ಕೆ. ಹರೀಶ ಕುಮಾರ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಕರ್ನಾಟಕ ಸರ್ಕಾರ ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿಯಾಗಿದ್ದ ಎಂ. ಜಿ. ಹಿರೇಮಠ ಅವರನ್ನು ವರ್ಗಾವಣೆ ಮಾಡಿದೆ. ಡಾ. ಕೆ. ಹರೀಶ್ ಕುಮಾರ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಿದೆ.
ಬೆಂಗಳೂರಿನಲ್ಲಿ ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತರಾಗಿ ಡಾ. ಕೆ. ಹರೀಶ ಕುಮಾರ್ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ಹಿಂದೆ ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ವೇಳೆ ಡಾ. ಕೆ. ಹರೀಶ ಕುಮಾರ್ ಅವರು ಕೋವಿಡ್ 19 ಪರಿಸ್ಥಿತಿ ನಿಭಾಯಿಸಲು ಕೈಗೊಂಡ ಕ್ರಮಗಳು ಯಶಸ್ವಿಯಾಗಿದ್ದ ಕಾರಣ ಐದು ದಿನಗಳ ಹಿಂದಷ್ಟೇ ಕರ್ನಾಟಕ ಕೋವಿಡ್ ನಿರ್ವಹಣಾ ಕಾರ್ಯಪಡೆಯ ನೋಡಲ್ ಆಫೀಸರ್ ಜವಾಬ್ದಾರಿಯನ್ನು ಕೂಡ ವಹಿಸಲಾಗಿತ್ತು.

ರಾಜ್ಯದ ಅತಿದೊಡ್ಡ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲೆಯಲ್ಲಿ ಚಿಕ್ಕೋಡಿ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರಗಳಿವೆ. ಕೇಂದ್ರ ಸಚಿವರಾಗಿದ್ದ ದಿ. ಸುರೇಶ್ ಅಂಗಡಿ ಅವರ ನಿಧನದಿಂದಾಗಿ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದೆ. ಏಪ್ರಿಲ್ 17ರಂದು ಮತದಾನ ನಡೆಯಲಿದೆ.
ಡಾ. ಹರೀಶ ಕುಮಾರ್ ಅವರು ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ವೇಳೆ ನಡೆಸಿದ ಅತ್ಯುತ್ತಮ ಚುನಾವಣಾ ಕಾರ್ಯಚಟುವಟಿಕೆಗಳಿಗಾಗಿ ಜನವರಿ 25ರಂದು ರಾಜ್ಯ ಮಟ್ಟದಲ್ಲಿ ಅವರಿಗೆ ಪ್ರಶಸ್ತಿಯನ್ನು ಚುನಾವಣಾ ಆಯೋಗ ನೀಡಿತ್ತು. ಎರಡು ವರ್ಷಗಳ ಕಾಲ ಉತ್ತರ ಕನ್ನಡದ ಜಿಲ್ಲಾಧಿಕಾರಿಯಾಗಿ ಅವರು ಕರ್ತವ್ಯ ನಿರ್ವಹಿಸಿದ್ದರು.
ಫೆ.13ರಂದು ಉದ್ಯೋಗ ಮತ್ತು ತರಬೇತಿ ಆಯುಕ್ತರಾಗಿ ವರ್ಗಾವಣೆಗೊಂಡಿದ್ದರು. ಹರೀಶ ಕುಮಾರ್ ಅವರು ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಲ್ಕು ಪ್ರಮುಖ ಚುನಾವಣೆಗಳನ್ನು ನಡೆಸಿದ್ದರು. ಲೋಕಸಭಾ ಚುನಾವಣೆ, ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ (ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ ನಂತರ), ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ಗ್ರಾಮ ಪಂಚಾಯತಿ ಚುನಾವಣೆಗಳಲ್ಲಿ ಉತ್ತಮವಾಗಿ ತಮ್ಮನ್ನು ತೊಡಗಿಸಿಕೊಂಡು, ಯಶಸ್ವಿಯಾಗಿ ನಡೆಸಿದ್ದರು.
ಚಾಮರಾಜನಗರ ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ಅವಧಿಯಲ್ಲೂ ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯರಾಗಿದ್ದರು. ನಿರ್ಣಾಯಕ ಚುನಾವಣೆಗಳನ್ನು ನಿರ್ವಹಿಸುವಲ್ಲಿನ ಅವರ ಅಗಾಧ ಅನುಭವ ಮತ್ತು ಅವರ ತಂಡದ ಕೆಲಸವನ್ನು ಪರಿಗಣಿಸಿ ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿಯನ್ನಾಗಿ ನೇಮಿಸಲಾಗಿದೆ.












Click it and Unblock the Notifications