ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಸರ್ಕಾರದ ಗಮನ ಸೆಳೆದ 'ಸಿಇಟಿ ಸಕ್ಷಮ್' ಕಾರ್ಯಕ್ರಮ
ಬೆಳಗಾವಿ, ನವೆಂಬರ್ 28: ಬಡ ಕುಟುಂಬಗಳ ಹಾಗೂ ಗ್ರಾಮೀಣ ಪ್ರದೇಶಗಳ ಸಾವಿರಾರು ವಿದ್ಯಾರ್ಥಿಗಳನ್ನು ಸಿಇಟಿ ಪರೀಕ್ಷೆ ಎದುರಿಸಲು ಸಶಕ್ತಗೊಳಿಸುವ 'ಸಿಇಟಿ ಸಕ್ಷಮ್' ಕಾರ್ಯಕ್ರಮ ಸರ್ಕಾರದ ಗಮನ ಸೆಳೆದಿದೆ. ಈ ಯೋಜನೆಗೆ 10 ಲಕ್ಷ ರೂಪಾಯಿ ಅನುದಾನ ಸಿಕ್ಕಿದೆ. ಸದ್ಯ ಬೆಳಗಾವಿ ಜಿಲ್ಲೆಯಲ್ಲಿ ಮಾತ್ರ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದಡಿ ಪ್ರಾಯೋಗಿಕ ತರಬೇತಿಯನ್ನು ನೀಡಲಾಗುತ್ತಿದೆ.
ಬೆಳಗಾವಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು 'ಸಿಇಟಿ ಸಕ್ಷಮ್' ಕಾರ್ಯಕ್ರಮದ ರೂವಾರಿ. ಈ ವಿನೂತನ ಮತ್ತು ಸೃಜನಾತ್ಮಕ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದ ಮೆಚ್ಚುಗೆ ಸಿಕ್ಕಿದೆ, ಜೊತೆಗೆ ಚಾಲೆಂಜ್ ಫಂಡ್ ಯೋಜನೆಯಡಿ 10 ಲಕ್ಷ ರೂಪಾಯಿ ಅನುದಾನ ಕೂಡ ಲಭಿಸಿದೆ.

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವ್ಯಾಸಂಗ ಮಾಡುತ್ತಿರುವ ಬೆಳಗಾವಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಮತ್ತು ಆರ್ಥಿಕವಾಗಿ ದುರ್ಬಲರಾಗಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗಾಗಿ ಸಿಇಟಿ ಸಕ್ಷಮ್ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದೆ. ಈ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಏನಿದು ಸಿಇಟಿ ಸಕ್ಷಮ್ ಕಾರ್ಯಕ್ರಮ?: ಬೆಳಗಾವಿ ಜಿಲ್ಲೆಯ ಎಲ್ಲಾ ಸರ್ಕಾರಿ ವಿಜ್ಞಾನ ಪದವಿ ಪೂರ್ವ ಕಾಲೇಜುಗಳಲ್ಲಿ ಕಲಿಯುತ್ತಿರುವ ಬಡ ಕುಟುಂಬಗಳ ಹಾಗೂ ಗ್ರಾಮೀಣ ಪ್ರದೇಶಗಳ ಸಾವಿರಾರು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಎದುರಿಸಲು ಸಶಕ್ತರಾಗುವಂತೆ ಮಾಡಲು ಹೊಸ, ಪ್ರಯೋಗಾತ್ಮಕ ಕಾರ್ಯಕ್ರಮ 'ಸಿಇಟಿ ಸಕ್ಷಮ್' ಅನ್ನು ಬೆಳಗಾವಿ ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ಶಿಂಧೆ ಆರಂಭಿಸಿದ್ದಾರೆ.
ಜಿಲ್ಲಾ ಪಂಚಾಯತಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಈ ವಿನೂತನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ವಿಜ್ಞಾನ ಪಿಯು ಕಾಲೇಜುಗಳ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳ 2ನೇ ಶನಿವಾರ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 4ನೇ ಶನಿವಾರ ಸಿದ್ಧತಾ ಪರೀಕ್ಷೆಗಳನ್ನು ನಡೆಸಲಾಗುತ್ತದೆ.
ಈ ಮೂಲಕ ಸಿಇಟಿ-ನೀಟ್ ಪರೀಕ್ಷೆಗಳಿಗೆ ಅವರನ್ನು ಸಜ್ಜುಗೊಳಿಸುವುದು ಸಿಇಟಿ-ಸಕ್ಷಮ್ ಕಾರ್ಯಕ್ರಮವಾಗಿದೆ. ಇಂತಹ ಪ್ರಯೋಗಾತ್ಮಕ ಮತ್ತು ಸೃಜನಾತ್ಮಕ ಕಾರ್ಯಕ್ರಮದಲ್ಲಿ ಗುಣಮಟ್ಟದ ಗುರಿಗಳನ್ನು ಸಾಧಿಸಲು ಅನುಕೂಲವಾಗುವಂತೆ ಅಗತ್ಯ ಅನುದಾನವನ್ನು ಒದಗಿಸಲು ಸರ್ಕಾರ ಚಾಲೆಂಜ್ ಫಂಡ್ ಸ್ಥಾಪಿಸಿರುತ್ತದೆ. ಇದರ ಮೂಲಕ ಈಗ ಕಾರ್ಯಕ್ರಮಕ್ಕೆ ಅನುದಾನ ಸಿಕ್ಕಿದೆ.
"ಈ ಪರಿಣಾಮಕಾರಿ ಕಾರ್ಯಕ್ರಮ ಜಾರಿಗೊಳಿಸಲು ಈ ಚಾಲೆಂಜ್ ಫಂಡ್ ಯೋಜನೆಯಡಿ ಸರ್ಕಾರವು 10 ಲಕ್ಷ ರೂಪಾಯಿ ಅನುದಾನವನ್ನು ಬಿಡುಗಡೆಗೊಳಿಸಿದೆ" ಎಂದು ಸಿಇಒ ರಾಹುಲ್ ಶಿಂಧೆ ತಿಳಿಸಿದ್ದಾರೆ.
ತಮ್ಮ ಕನಸಿನ ಯೋಜನೆಯಾಗಿರುವ 'ಸಿಇಟಿ-ಸಕ್ಷಮ್' ಅನುಷ್ಠಾನಕ್ಕೆ ಸರಕಾರವು ಅನುದಾನ ನೀಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಅವರು, ಮುಂಬರುವ ದಿನಗಳಲ್ಲಿ ಸಿಇಟಿ-ಸಕ್ಷಮ್ ಸಮರ್ಪಕ ಅನುಷ್ಠಾನ, ವಿಶ್ಲೇಷಣೆ ಹಾಗೂ ದತ್ತಾಂಶ ಸಂಗ್ರಹಕ್ಕೆ ವಿಶೇಷ ಸಾಫ್ಟ್ವೇರ್ ರೂಪಿಸಲಾಗುವುದು ಎಂದು ಹೇಳಿದ್ದಾರೆ.
ಈ ಸಾಫ್ಟ್ವೇರ್ ಮೂಲಕ ಪ್ರತಿಯೊಂದು ವಿದ್ಯಾರ್ಥಿಯ ಪರ್ಫಾಮೆನ್ಸ್ ಒಂದು ಕಡೆ ಸಂಗ್ರಹಿಸಿ ಅದನ್ನು ವಿಶ್ಲೇಷಣೆಗೊಳಪಡಿಸುವ ಯೋಚನೆ ಇದೆ. ಜಿಲ್ಲಾ ಪಂಚಾಯತಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಉಪನ್ಯಾಸಕರು ಸಿಇಟಿ-ಸಕ್ಷಮ್ ಕಾರ್ಯಕ್ರಮವನ್ನು ಅತ್ಯಂತ ಅಚ್ಚುಕಟ್ಟಾಗಿ ಜಾರಿಗೊಳಿಸುವ ಮೂಲಕ ಅದನ್ನು ಯಶಸ್ವಿಗೊಳಿಸುತ್ತಿದ್ದು, ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಸಿಇಟಿ-ಸಕ್ಷಮ್ ವಿನೂತನ ಕಾರ್ಯಕ್ರಮದ ಮೂಲಕ ನಡೆಸಲಾಗುವ ಸಿದ್ಧತಾ ಪರೀಕ್ಷೆಗಳು ವಿದ್ಯಾರ್ಥಿಗಳ ಸಿಇಟಿ/ ನೀಟ್ ಪರೀಕ್ಷೆಗಳನ್ನು ಎದುರಿಸಲು ಸಾಮರ್ಥ್ಯ ಬಲಪಡಿಸುವುದಲ್ಲದೇ, ಭವಿಷ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಪರಿಣಿತಿಯನ್ನು ಮತ್ತು ಮಾನಸಿಕ ಸ್ಥೈರ್ಯವನ್ನು ಹೆಚ್ಚಿಸಲು ಸಹಕಾರಿಯಾಗಲಿವೆ.
ಶಿವಮೊಗ್ಗ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳ ಅಧಿಕಾರಿಕಾರಿಗಳ ತಂಡಗಳು ಬೆಳಗಾವಿಗೆ ಭೇಟಿ ನೀಡಿ 'ಸಿಇಟಿ-ಸಕ್ಷಮ್' ಕಾರ್ಯಕ್ರಮದ ಮಾದರಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿರುತ್ತಾರೆ. ಮುಂದಿನ ದಿನಗಳಲ್ಲಿ ಬೇರೆ ಜಿಲ್ಲೆಯಲ್ಲಿಯೂ ಈ ಕಾರ್ಯಕ್ರಮ ಅನುಷ್ಠಾನಗೊಳ್ಳುವ ನಿರೀಕ್ಷೆ ಇದೆ.












Click it and Unblock the Notifications