ಹೈದರಾಬಾದ್ ಕರ್ನಾಟಕ ಭಾಗದ ಶಾಸಕರ ಸಭೆ ಕರೆದ ಕುಮಾರಸ್ವಾಮಿ
ಬೆಳಗಾವಿ, ಡಿಸೆಂಬರ್ 12: ಸಿಎಂ ಕುಮಾರ ಸ್ವಾಮಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದು ಬುಧವಾರ ಸಂಜೆ 6 ಗಂಟೆಗೆ ಹೈದರಾಬಾದ್ ಕರ್ನಾಟಕ ಭಾಗದ ಶಾಸಕರ ಸಭೆ ಕರೆದಿದ್ದಾರೆ.
ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಬಜೆಟ್ ಘೋಷಣೆಯ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಕೊಕ್ಕೆ ಹಾಕಿರುವುದರಿಂದ ಶಾಸಕರು ಆಕ್ರೋಶಗೊಂಡಿದ್ದು, ಸುಮಾರು 500 ಕೋಟಿ ರೂ.ನ್ನು ಸರಕಾರ ಬಾಕಿ ಉಳಿಸಿಕೊಂಡಿದೆ.
2017-18ನೇ ಸಾಲಿನ ಬಜೆಟ್ ನಲ್ಲಿ ಹೈ-ಕ ಪ್ರದೇಶಾಭಿವೃದ್ಧಿ ಮಂಡಳಿಗೆ ರಾಜ್ಯ ಸರಕಾರ 1500 ಕೋಟಿ ರೂ. ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ ನಿಗದಿ ಮಾಡಿದ ಹಣವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಂಡಿಲ್ಲ ಎಂಬ ಕಾರಣ ನೀಡಿ 500 ಕೋಟಿ ರೂ. ಬಿಡುಗಡೆಗೆ ಹಣಕಾಸು ಇಲಾಖೆ ತಡೆ ನೀಡಿದೆ. 1000 ಕೋಟಿ ರೂ.ನ್ನು ಮಾತ್ರ ಬಿಡುಗಡೆ ಮಾಡಿದೆ.

ಇದರಿಂದ ಶಾಸಕರು ಅಸಮಧಾನಗೊಂಡಿದ್ದು, ಹೈದರಾಬಾದ್ ಕರ್ನಾಟಕ ಪ್ರದೇಶದ ಬೀದರ್, ಯಾದಗಿರಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಗುಲ್ಬರ್ಗ ಜಿಲ್ಲೆಯ ಶಾಸಕರು ಪಕ್ಷ ಭೇದ ಮರೆತು ಒಂದಾಗಿದ್ದಾರೆ.
ಈ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಲು ನಿನ್ನೆ ಮಂಗಳವಾರ (ಡಿಸೆಂಬರ್ 11)ಶಾಸಕರು ಸಭೆಯನ್ನು ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಭೆ ಕರೆದು ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಿಎಂ ಕುಮಾರ ಸ್ವಾಮಿ ಪ್ರಯತ್ನ ನಡೆಸಿದ್ದಾರೆ.












Click it and Unblock the Notifications