ಮತಾಂತರ ನಿಷೇಧ ಕಾಯ್ದೆಗೆ ಒಪ್ಪಿಗೆ: ಡಿ.21ರಂದು ಮಂಡನೆ
ಬೆಳಗಾವಿ, ಡಿಸೆಂಬರ್ 20: ಮತಾಂತರ ನಿಷೇಧ ಕಾಯ್ದೆಯನ್ನು ಬೆಳಗಾವಿ ಅಧಿವೇಶನದಲ್ಲೇ ಮಂಡಿಸಲು ಸರ್ಕಾರ ತೀರ್ಮಾನಿಸಿದ್ದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಸದನದಲ್ಲಿ ಮಂಡಿಸಲು ಒಪ್ಪಿಗೆ ದೊರೆತಿದೆ.
ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಈ ಸಭೆಯಲ್ಲಿ ಪ್ರಮುಖವಾಗಿ ಮತಾಂತರ ನಿಷೇಧ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲು ಒಪ್ಪಿಗೆ ದೊರೆತಿದೆ.
ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕಕ್ಕೆ ಅನುಮೋದನೆ ಪಡೆದಾಗಿದ್ದು, ಡಿಸೆಂಬರ್ 21ರಂದು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯಲು ಸರ್ಕಾರ ತಯಾರಿ ನಡೆಸಿದೆ.

ಈ ವಿಧೇಯಕ ಮಂಡನೆಗೆ ಕಾಂಗ್ರೆಸ್ ಪಕ್ಷ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ ಬಿಜೆಪಿ ಮಾತ್ರ ಶತಾಯ ಗತಾಯ ಈ ವಿಧೇಯಕ ಮಂಡನೆಗೆ ಮುಂದಾಗಿದೆ.
ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಸೇರಿದಂತೆ ಎಲ್ಲ ಸಚಿವರುಗಳು ಸಹ ವಿಧೇಯಕ ಮಂಡನೆಗೆ ಒಲವು ತೋರಿದ್ದು, ಈ ಸಂಬಂಧ ಈಗಾಗಲೇ ಹೇಳಿಕೆಗಳನ್ನು ನೀಡಿದ್ದು, ಇದೇ ಅಧಿವೇಶನದಲ್ಲಿ ವಿರೋಧ ಪಕ್ಷದ ವಿರೋಧಗಳ ನಡುವೆಯೂ ಮತಾಂತರ ನಿಷೇಧ ಕಾಯ್ದೆ ಮಂಡನೆಯಾಗುವುದು ನಿಶ್ಚಿತ.
2016ರಲ್ಲಿ ಕಾಯ್ದೆ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡಲು 2016 ರಲ್ಲೇ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ತಯಾರಿ ನಡೆಸಿದ್ದನ್ನು ಮುಂದಿಟ್ಟುಕೊಂಡು ವಿಪಕ್ಷಗಳ ವಿರುದ್ಧ ಪ್ರತ್ಯಾಸ್ತ್ರ ಪ್ರಯೋಗಿಸಿ ಮತಾಂತರ ನಿಷೇಧ ಕಾಯ್ದೆಗೆ ಸದನದ ಒಪ್ಪಿಗೆ ಪಡೆಯಲು ಬಿಜೆಪಿ ಸರ್ಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಉತ್ತರ ಕರ್ನಾಟಕದ ಹಲವು ಯೋಜನೆಗಳಿಗೆ ಒಪ್ಪಿಗೆ ಸಚಿವ ಸಂಪುಟ ಸಭೆಯಲ್ಲಿ ಉತ್ತರ ಕರ್ನಾಟಕದ ಹಲವು ಯೋಜನೆ ಕಾಮಗಾರಿಗಳಿಗೆ ಒಪ್ಪಿಗೆ ಸಿಗುವ ಸಾಧ್ಯತೆಗಳಿದ್ದು, ಧಾರವಾಡ, ಕಿತ್ತೂರು, ಬೆಳಗಾವಿಯ 73 ಕಿ.ಮೀ. ಉದ್ದದ ಹೊಸ ರೈಲು ಮಾರ್ಗ ನಿರ್ಮಾಣಕ್ಕೆ 927 ಕೋಟಿ ರೂ. ಬಿಡುಗಡೆ ಮಾಡುವ ತೀರ್ಮಾನವನ್ನು ಇಂದು ನಡೆಯುವ ಸಚಿವ ಸಭೆಯಲ್ಲಿ ಕೈಗೊಳ್ಳುವ ಸಾಧ್ಯತೆಗಳಿವೆ.
ಹಾಗೆಯೇ ಕೊಪ್ಪಳದ ಕುಕನೂರಿನ ತರಳಬಾಳು ಗ್ರಾಮದಲ್ಲಿ ಎಸ್ಇಝಡ್ ನಿರ್ಮಾಣಕ್ಕೂ 24 ಎಕರೆ ಸರ್ಕಾರಿ ಭೂಮಿ ಮಂಜೂರು, ಆಲಮಟ್ಟಿ ಎಡದಂಡೆ ಕಾಲುವೆಯ ಆಧುನೀಕರಣ ಕಾಮಗಾರಿಗೆ ಸುಮಾರು 75 ಕೋಟಿ ರೂ. ಬಿಡುಗಡೆ ಮಾಡುವ ಸಂಬಂಧವೂ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಗಳಾಗುವ ಸಾಧ್ಯತೆಗಳಿವೆ.
ಈ ಸಮಾವೇಶದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು, ಮತಾಂತರ ಕಾಯ್ದೆಯನ್ನು ಈ ಅಧಿವೇಶನದಲ್ಲೇ ಮಂಡಿಸಿ ಅಂಗೀಕಾರ ಪಡೆಯುವ ಸುಳಿವನ್ನು ನೀಡಿದರು.
ಮತಾಂತರ ಕಾಯ್ದೆ ನಿಷೇಧದ ಬಗ್ಗೆ ಇಂದು ವಿರೋಧ ಮಾಡುತ್ತಿರುವವರೇ ಅಂದು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಹೊರಟ್ಟಿದ್ದರು ಎಂದು ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿದ ಅವರು, 2017 ರಲ್ಲಿ ಕಾಂಗ್ರೆಸ್ನವರು ಮತಾಂತರ ಕಾಯ್ದೆ ನಿಷೇಧ ಜಾರಿಗೆ ತರಲು ಹೊರಟ್ಟಿದನ್ನು ಪ್ರಸ್ತಾಪಿಸಿದ್ದು ವಿಶೇಷವಾಗಿತ್ತು.
ಕಲಬುರಗಿಯ ಕಾಗಿನ ನದಿಯ 143 ಕೋಟಿ ರೂ. ವೆಚ್ಚದ ಏತ ನೀರಾವರಿ ಯೋಜನೆಗೂ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡುವ ಸಾಧ್ಯತೆ ಇದೆ.
ಹಾವೇರಿ ಜಿಲ್ಲೆಯ 285ಗ್ರಾಮಗಳಿಗೆ ಜಲ ಜೀವನ್ ಮಿಷನ್ ಅಡಿ 645 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರು ಪೂರೈಕೆಯ ಯೋಜನೆಗೂ ಇಂದಿನ ಸಂಪುಟ ಸಭೆ ಅಸ್ತು ನೀಡುವ ಸಾಧ್ಯತೆಗಳಿವೆ.
ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನನ್ನು ಜಾರಿಗೆ ತರುವಂತೆ ವಿಶ್ವ ಹಿಂದೂ ಪರಿಷತ್ ಸ್ವಾಮೀಜಿಗಳ ಸಮ್ಮುಖದಲ್ಲೇ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರಿಗೆ ಇಂದು ಮನವಿ ಸಲ್ಲಿಸಿತು.
ಬೆಳಗಾವಿಯಲ್ಲಿಂದು ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಕರ್ನಾಟಕ ಉತ್ತರ ಪ್ರಾಂತ್ಯ ಮಹಾಸ್ವಾಮೀಜಿಗಳ ಸಮಾವೇಶದ ಸಂದರ್ಭದಲ್ಲೇ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರಿಗೆ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡುವಂತೆ ಮನವಿ ಸಲ್ಲಿಸಲಾಯಿತು.












Click it and Unblock the Notifications