ಅತಿವೃಷ್ಟಿ ಹಾನಿಗೆ ಸಮರ್ಪಕ ಪರಿಹಾರ; ಮುಂದಿನ ವಾರ ದೆಹಲಿಗೆ ಸಿಎಂ
ಬೆಳಗಾವಿ,
ಆಗಸ್ಟ್ 25: ಶೀಘ್ರ ಎಲ್ಲ ಶಾಸಕರ ಸಭೆ ಕರೆದು ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡಲು ಯೋಜನೆ ರೂಪಿಸಲಾಗುವುದು. ಎಲ್ಲ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಲಾಗುವುದು. ಮುಂದಿನ ವಾರ ದೆಹಲಿಗೆ ಹೋಗಿ ಹೆಚ್ಚಿನ ಪರಿಹಾರ ಬಿಡುಗಡೆಗೆ ಮನವಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.Recommended Video
ಅತಿವೃಷ್ಟಿಗೆ
ಸಂಬಂಧಿಸಿದಂತೆ ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಇಂದು ನಡೆದ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಕೊರೊನಾ ಇರುವುದರಿಂದ ಎನ್.ಡಿ.ಆರ್.ಎಫ್. ಅನುದಾನದಡಿ ತುರ್ತು ಅಗತ್ಯವಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಹೇಳಿದರು. ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತಕ್ಷಣ ಸರ್ಕಾರಕ್ಕೆ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. id='are-slot-2' class='oiad oi-axt oiadv'>
ಬೆಳಗಾವಿಯ 44,156 ಫಲಾನುಭವಿಗಳಿಗೆ 488 ಕೋಟಿ ಪರಿಹಾರ ಬಿಡುಗಡೆ
ಪ್ರವಾಹ ನಿರ್ವಹಣೆ ಮತ್ತಿತರ ತುರ್ತು ಕೆಲಸಕ್ಕೆ ಬೆಳಗಾವಿ ಜಿಲ್ಲೆಯಲ್ಲಿ 412 ಕೋಟಿ ರೂಪಾಯಿ ಅನುದಾನ ಲಭ್ಯವಿದೆ. ಹೆಚ್ಚಿನ ಹಣ ಬೇಕಾದರೆ ತಕ್ಷಣವೇ ಬಿಡುಗಡೆ ಮಾಡಲಾಗುವುದು. ಜಿಲ್ಲೆಯಲ್ಲಿ ಮನೆ ನಿರ್ಮಾಣಕ್ಕೆ 174 ಕೋಟಿ ರೂಪಾಯಿ ಇದೆ. ಇದಲ್ಲದೇ ಉಳಿದಿರುವ ಅನುದಾನದಲ್ಲಿ ರಸ್ತೆ ದುರಸ್ತಿ ಮತ್ತಿತರ ಕಾಮಗಾರಿ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಇದೇ ರೀತಿ ಇತರೆ ಜಿಲ್ಲೆಗಳಲ್ಲಿ ಸಾಕಷ್ಟು ಹಣ ಲಭ್ಯವಿದೆ. ಮನೆ ಕಳೆದುಕೊಂಡಿರುವ ಬೆಳಗಾವಿಯ 44156 ಫಲಾನುಭವಿಗಳಿಗೆ 488 ಕೋಟಿ ಪರಿಹಾರ ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತಕ್ಷಣ ಸರ್ಕಾರಕ್ಕೆ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

"ರಾಜ್ಯದ ಆರ್ಥಿಕ ಪರಿಸ್ಥಿತಿ ಆಧರಿಸಿ ಬೆಳೆ ಪರಿಹಾರ"
ಬೆಳಗಾವಿ-ಧಾರವಾಡ ಸಮಸ್ಯೆಗಳು ಗಮನಕ್ಕೆ ಬಂದಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಆಧರಿಸಿ ಮನೆ ಹಾಗೂ ಬೆಳೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. ಇದೇ ಸಂದರ್ಭ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಪ್ರವಾಹ ಸ್ಥಿತಿಗತಿಯ ಬಗ್ಗೆ ಮಾತನಾಡಿದರು. ಕಂದಾಯ ಸಚಿವ ಆರ್.ಅಶೋಕ, ಕಳೆದ ವರ್ಷದ ಮನೆ ಪರಿಹಾರ ನೀಡುವ ತಂತ್ರಾಂಶವನ್ನು ಪುನಃ ಆರಂಭಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ಪ್ರವಾಹ ನಿರ್ವಹಣೆ ಮತ್ತು ಪರಿಹಾರ ಕ್ರಮಗಳ ಬಗ್ಗೆ ಮಾತನಾಡಿದರು.

ಕೆರೆ, ಬಾಂದಾರಗಳ ಶಾಶ್ವತ ದುರಸ್ತಿಗೆ ಲಕ್ಷ್ಮೀ ಹೆಬ್ಬಾಳಕರ್ ಮನವಿ
ಸಭೆಯಲ್ಲಿ ಅಭಯ್ ಪಾಟೀಲ ಮಾತನಾಡಿ, ಬೆಳಗಾವಿ ನಗರದ ಅಭಿವೃದ್ಧಿಗೆ ಸಂಬಂಧಿಸಿದಂತೆ 320 ಕೋಟಿ ರೂಪಾಯಿ ರಸ್ತೆ ಅಭಿವೃದ್ಧಿಗೆ ಅಗತ್ಯವಿದೆ. ಕಳೆದ ವರ್ಷ ಹಾನಿಗೊಳಗಾದ ಮನೆಗಳ ಮರು ಸಮೀಕ್ಷೆ ನಡೆಸಿ ಲಾಗಿನ್ ಆಗಲು ಅನುಕೂಲ ಕಲ್ಪಿಸಬೇಕು. ನಗರೋತ್ಥಾನ ಯೋಜನೆ ಅನುದಾನ ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕೆರೆಗಳು ಹಾಗೂ ಬಾಂದಾರಗಳು ಒಡೆದಿರುವುದರಿಂದ ಬೆಳೆ ಹಾನಿಯಾಗಿದೆ. ಇವುಗಳ ಶಾಶ್ವತ ದುರಸ್ತಿಗೆ ಮತ್ತು ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.

ಜಿಲ್ಲೆಯ ಅತಿವೃಷ್ಟಿ ಪರಿಸ್ಥಿತಿ ನಿರ್ವಹಣೆ ಬಗ್ಗೆ ಡಿಸಿ ಮಾಹಿತಿ
ಇದೇ ಸಂದರ್ಭ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಾತನಾಡಿ, ಜಿಲ್ಲೆಯಲ್ಲಿ ಅತಿವೃಷ್ಟಿ ಪರಿಸ್ಥಿತಿ ಮತ್ತು ನಿರ್ವಹಣೆಯ ಸ್ಥಿತಿಗತಿಗಳನ್ನು ವಿವರಿಸಿದರು. ಪ್ರವಾಹ ನಿರ್ವಹಣೆಗೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ನಮ್ಮ ಅಧಿಕಾರಿಗಳು ಮಹಾರಾಷ್ಟ್ರದ ಅಧಿಕಾರಿಗಳ ಜತೆ ಸತತ ಸಂಪರ್ಕದಲ್ಲಿ ಇದ್ದ ಪರಿಣಾಮ ಯಾವುದೇ ತೊಂದರೆಯಾಗಿಲ್ಲ ಎಂದು ವಿವರಿಸಿದರು. ಜಿಲ್ಲೆಯಲ್ಲಿ ಬೀಜ, ಗೊಬ್ಬರ ಸಮರ್ಪಕವಾಗಿ ವಿತರಿಸಲಾಗಿದ್ದು, ಸಾಕಷ್ಟು ದಾಸ್ತಾನು ಲಭ್ಯವಿದೆ ಎಂದರು.
ಕೈಮಗ್ಗ ಮತ್ತು ಜವಳಿ ಇಲಾಖೆಯ ಸಚಿವ ಶ್ರೀಮಂತ ಪಾಟೀಲ, ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಪಿ.ರಾಜೀವ್, ದುರ್ಯೋಧನ ಐಹೊಳೆ, ಉಮೇಶ್ ಕತ್ತಿ, ಮಹಾಂತೇಶ ಕೌಜಲಗಿ, ಶಾಸಕ ಅನಿಲ್ ಬೆನಕೆ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ಐಹೊಳೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಎಲ್.ಅತೀಕ್, ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications