ಸುವರ್ಣವಿಧಾನಸೌಧದಲ್ಲಿ ಬಜೆಟ್ ಅಧಿವೇಶನ?
ಬೆಳಗಾವಿ, ಡಿ. 7 : ಹತ್ತು ದಿನಗಳ ವಿಧಾನಸಭೆ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಂತ್ಯಗೊಂಡಿದೆ. ಸದ್ಯ ಬಜೆಟ್ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಆದರೆ, ಈ ಕುರಿತು ಇನ್ನೂ ಅಂತಿಮ ನಿರ್ಧಾರ ಪ್ರಕಟಗೊಂಡಿಲ್ಲ.
ಮುಖ್ಯಮಂತ್ರಿಯಾಗಿ ಸಿಎಂ ಸಿದ್ದರಾಮಯ್ಯ ಫೆಬ್ರವರಿ ಅಥವ ಮಾರ್ಚ್ ತಿಂಗಳಿನಲ್ಲಿ ಎರಡನೇ ಬಜೆಟ್ ಮಂಡಿಸಲಿದ್ದಾರೆ. ಈ ಅಧಿವೇಶನವನ್ನು ಬೆಂಗಳೂರಿನ ಬದಲು ಬೆಳಗಾವಿಯ ಸುವರ್ಣ ವಿಧಾನಸೌಧಲ್ಲಿ ನಡೆಸಲು ಸಿಎಂ ಚಿಂತನೆ ನಡೆಸಿದ್ದಾರೆ. ಈ ಕುರಿತು ವಿಧಾನಸಭೆ ಮತ್ತು ವಿಧಾನಪರಿಷತ್ ಸ್ಪೀಕರ್ ಗಳೊಂದಿಗೂ ಸಿಎಂ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಅವರ ಒಪ್ಪಿಗೆ ದೊರೆತರೆ ಉತ್ತರ ಕರ್ನಾಟಕದ ಶಕ್ತಿಸೌಧ ಸುವರ್ಣ ವಿಧಾನಸೌಧದಲ್ಲಿ ಬಜೆಟ್ ಅಧಿವೇಶನ ನಡೆಯಲಿದೆ.

ಸುವರ್ಣ ವಿಧಾನಸೌಧ ಕಟ್ಟಡವನ್ನು ಸಂಪೂರ್ಣವಾಗಿ ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ ಸಿಎಂ ಈ ನಿರ್ಧಾರ ಕೈಗೊಂಡಿದ್ದಾರೆ. ಈಗಾಗಲೇ ಸುವರ್ಣ ವಿಧಾನಸೌಧ ಕಟ್ಟಡಕ್ಕೆ ಕೆಲವು ಸರ್ಕಾರಿ ಕಚೇರಿಗಳನ್ನು ಸ್ಥಳಾಂತರ ಮಾಡುವ ಕುರಿತು ಈಗಾಗಲೇ ಚರ್ಚೆ ನಡೆದಿದೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿದ್ದು, ವರದಿ ಬಂದ ನಂತರ ಕಚೇರಿಗಳನ್ನು ಸ್ಥಳಾಂತರ ಮಾಡುವ ಕುರಿತು ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. (ಕೊನೆಯ ದಿನದ ಕಲಾಪ, ಎಲ್ಲರ ಚಿತ್ತ ಮನೆಯತ್ತ)
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಬೆಳಗಾವಿಯಲ್ಲಿ ನ.25ರಿಂದ ಡಿ.6ರವರೆಗೆ ನಡೆದ ಚಳಿಗಾಲದ ಅಧಿವೇಶನದ ಬಗ್ಗೆ ಸಂತೃಪ್ತಿ ವ್ಯಕ್ತಪಡಿಸಿದ್ದಾರೆ. ಅಧಿವೇಶನದ ಸಂದರ್ಭದಲ್ಲಿಯೇ ನಡೆದ ರೈತ ಆತ್ಮಹತ್ಯೆ ಪ್ರಕರಣಕ್ಕೆ ಅವರು ವಿಷಾದ ವ್ಯಕ್ತಪಡಿಸಿದರು. ಕೆಲವು ವಿಧೇಯಕಗಳು ಅಂಗೀಕಾರವಾಗಿವೆ. ಕಳಸಾ ಬಂಡೂರಿ, ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ಅಗತ್ಯ ಚರ್ಚೆಗಳು ನಡೆದಿವೆ ಎಂದು ಅವರು ಹೇಳಿದ್ದಾರೆ.












Click it and Unblock the Notifications