ಸವದತ್ತಿಯಲ್ಲಿ ರೋಪ್ವೇ, ಎತ್ತಿನ ಗಾಡಿಗೂ ಪಾರ್ಕಿಂಗ್; ಸರ್ಕಾರದಿಂದ ಏನೆಲ್ಲ ಪ್ಲ್ಯಾನ್?
ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಬೆಳಗಾವಿ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ಗುಡಿಗೆ ಲಕ್ಷಾಂತರ ಭಕ್ತರು ರಾಜ್ಯದ ಮೂಲೆಮೂಲೆಗಳಿಂದ ಬರುತ್ತಾರೆ. ಈ ಹಿನ್ನೆಲೆ ಭಕ್ತರ ಅನುಕೂಲಕ್ಕಾಗಿ ಈ ಕ್ಷೇತ್ರದಲ್ಲೂ ರೋಪ್ ವೇ ಅಳವಡಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ರೋಪ್ ವೇ ಸವಲತ್ತು ಕಲ್ಪಿಸುವುದರಿಂದ ಅನುಕೂಲ ಆಗುತ್ತದೆಯೇ ಎನ್ನುವ ಬಗ್ಗೆ ಪರಿಶೀಲನೆ ನಡೆಸಿ, ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.
ಇಂದು ಸವದತ್ತಿಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಸಭೆ ನಡೆಸಿದರು. ಶ್ರೀರೇಣುಕಾ ಯಲ್ಲಮ್ಮ ದೇವಿ ಸನ್ನಿಧಿಗೆ ಬರುವ ಭಕ್ತರೆಲ್ಲರಿಗೂ ತಾಯಿಯ ದರ್ಶನ ಕಡ್ಡಾಯವಾಗಿ ಸಿಗುವ ವ್ಯವಸ್ಥೆಯನ್ನು ಪ್ರಥಮ ಆದ್ಯತೆಯಲ್ಲಿ ಒದಗಿಸಬೇಕು ಎಂದು ಹೇಳಿದರು.

ಭಕ್ತಾದಿಗಳ ಆರೋಗ್ಯಕ್ಕೆ ಪೂರಕವಾದ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಶೌಚಾಲಯ, ಕುಡಿಯುವ ನೀರು, ವಿದ್ಯುತ್, ಉಳಿಯಲು ಅಚ್ಚುಕಟ್ಟಾದ ವ್ಯವಸ್ಥೆಯನ್ನು ಕಲ್ಪಿಸಬೇಕು. ತಿರುಪತಿ ಮಾದರಿಯಲ್ಲಿ ವ್ಯವಸ್ಥೆಗಳನ್ನು ಕಲ್ಪಿಸಬೇಕು. ದೇವಿಯ ದರ್ಶನದ ಖಾತ್ರಿ ಆದರೆ ಭಕ್ತರು ಮತ್ತು ಪ್ರವಾಸಿಗರ ಪ್ರಮಾಣ ಇನ್ನೂ ಹೆಚ್ಚಾಗುತ್ತದೆ. ಆದ್ದರಿಂದ ಇಲ್ಲಿ ವ್ಯವಸ್ಥೆಗಳು ಚೆನ್ನಾಗಿರಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಬಡವರು, ಶ್ರಮಿಕರು, ತಳ ಸಮುದಾಯದವರು, ಮಹಿಳೆಯರು ಮತ್ತು ದುಡಿಯುವ ವರ್ಗದವರೇ ಹೆಚ್ಚಾಗಿ ಬರುವ ಕ್ಷೇತ್ರ ಇದು. ಸೌಕರ್ಯ ಅಚ್ಚುಕಟ್ಟಾಗಿದ್ದರೆ ಕ್ಷೇತ್ರದ ಆದಾಯವೂ ಹೆಚ್ಚಾಗುತ್ತದೆ. ಈ ಆದಾಯದಿಂದ ಭಕ್ತರಿಗೆ ಇನ್ನೂ ಹೆಚ್ಚಿನ ಮೂಲಭೂತ ಸವಲತ್ತು ಒದಗಿಸಬಹುದು. ಒಟ್ಟಾರೆ ಕ್ಷೇತ್ರ ಆಕರ್ಷಣೀಯವಾಗಿರಬೇಕು ಎಂದು ಸೂಚನೆ ನೀಡಿದರು.
ಎತ್ತಿನಗಾಡಿಯಲ್ಲಿ ಅತಿ ಹೆಚ್ಚು ಪ್ರಮಾಣದ ಭಕ್ತರು ಇಲ್ಲಿಗೆ ಆಗಮಿಸುವುದರಿಂದ ಕಾರು, ಬೈಕುಗಳ ಜೊತೆಗೆ ಎತ್ತಿನಗಾಡಿ ನಿಲ್ಲಿಸಲು ವ್ಯವಸ್ಥೆ ಕಲ್ಪಿಸಬೇಕು. ಎತ್ತು, ಹಸುಗಳಿಗೆ ಉತ್ತಮ ಮೇವು, ನೀರು, ನೆರಳಿನ ವ್ಯವಸ್ಥೆ ಕಲ್ಪಿಸಬೇಕು. ಇದಕ್ಕೆ ಪೂರಕವಾಗಿ ಕಾರ್ಯಯೋಜನೆ ರೂಪಿಸಬೇಕು ಎಂದು ಸಲಹೆ ಕೊಟ್ಟರು.

ಪ್ರತೀ ವರ್ಷ ಈ ಕ್ಷೇತ್ರಕ್ಕೆ 2 ಕೋಟಿ ಭಕ್ತರು ಬರುವುದರಿಂದ ಆರೋಗ್ಯಕರ ದಾಸೋಹ ವ್ಯವಸ್ಥೆ ಮತ್ತು ವೈಜ್ಞಾನಿಕ ಪದ್ಧತಿಯ ಕಸ ವಿಲೇವಾರಿ ವ್ಯವಸ್ಥೆಯನ್ನು ರೂಪಿಸಬೇಕು. ಕ್ಷೇತ್ರಕ್ಕೆ ಸೇರಿದ ಜಾಗ, ಜಮೀನನ್ನು ಮೊದಲು ಗುರುತಿಸಿ, ಒತ್ತುವರಿ ಆಗಿದ್ದರೆ ಬಿಡಿಸಿಕೊಳ್ಳಬೇಕು. ಸ್ಥಳದ ಸುತ್ತ ಕಾಂಪೌಂಡ್, ಫೆನ್ಸಿಂಗ್ ಹಾಕಿ ಜಾಗದ ಭದ್ರತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಭಕ್ತರು ಬರುವ ದೇವಸ್ಥಾನದ ಮಾರ್ಗ ಮತ್ತು ಸುತ್ತಲ ಪ್ರದೇಶಗಳಲ್ಲಿ ಹಾಗೂ ಭಕ್ತರು ಉಳಿಯುವ ಜಾಗದಲ್ಲಿ ಬೀದಿ ದೀಪ, ವಿದ್ಯುತ್ ಸೌಲಭ್ಯ ಒದಗಿಸಬೇಕು. ರೋಪ್ ವೇ ಸವಲತ್ತು ಕಲ್ಪಿಸುವುದರಿಂದ ಭಕ್ತರಿಗೆ ಅನುಕೂಲ ಆಗುತ್ತದೆಯೇ ಎನ್ನುವ ಬಗ್ಗೆ ಪರಿಶೀಲನೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದರು.

ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ರಾಮಲಿಂಗಾರೆಡ್ಡಿ ಕೂಡ ಇದ್ದರು.












Click it and Unblock the Notifications